
ಬೆಂಗಳೂರು, ಜುಲೈ 23: ಬೆಂಗಳೂರಿನ (Bengaluru) ಕೆಂಗೇರಿ ಸಮೀಪದ ರಾಮೋಹಳ್ಳಿಯ ತಿಮ್ಮಪ್ಪ ಕೆರೆಯಲ್ಲಿ ಸೂಟ್ಕೇಸ್ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ, ಶವ ಪತ್ತೆಯಾದ 24 ಗಂಟೆಯೊಳಗೆ 21 ವರ್ಷದ ಯುವಕನನ್ನು ಬಂಧಿಸಲಾಗಿದ್ದು, ಚಿನ್ನಾಭರಣ ದೋಚುವ ಉದ್ದೇಶದಿಂದ ಮಹಿಳೆಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಪೊಲೀಸರ ಮಾಹಿತಿ ಪ್ರಕಾರ, ಮೃತರನ್ನು ಕೆಂಗೇರಿ ಸಮೀಪದ ಚಲ್ಲಘಟ್ಟ ನಿವಾಸಿ 61 ವರ್ಷದ ಜಯಮ್ಮ ಎಂದು ಗುರುತಿಸಲಾಗಿದೆ. ಅವರು ನಾಪತ್ತೆಯಾಗಿದ್ದ ಬಗ್ಗೆ ಕುಟುಂಬದವರು ದೂರು ನೀಡಿದ್ದರು. ಜುಲೈ 21ರಂದು ತಿಮ್ಮಪ್ಪ ಕೆರೆಯಲ್ಲಿ ಕೆಂಪು ಬಣ್ಣದ ಸೂಟ್ಕೇಸ್ನಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು.
ತನಿಖೆ ವೇಳೆ ಕುಂಬಳಗೋಡು ಪೊಲೀಸರು ಚಲ್ಲಘಟ್ಟ ನಿವಾಸಿ 21 ವರ್ಷದ ಗಗನ್ ಆರ್ನನ್ನು ಬಂಧಿಸಿದ್ದಾರೆ. ಆರೋಪಿ ಚಿನ್ನಾಭರಣ ಕಳವು ಮಾಡುವ ಉದ್ದೇಶದಿಂದ ಜಯಮ್ಮ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಯು ಮಹಿಳೆಯ ಚಿನ್ನದ ಸರ ಹಾಗೂ ಕಿವಿಯೋಲೆಗಳನ್ನು ತೆಗೆದುಕೊಂಡ ನಂತರ ಮೃತದೇಹವನ್ನು ಮನೆಯಲ್ಲಿದ್ದ ಸೂಟ್ಕೇಸ್ನಲ್ಲಿ ಇರಿಸಿ, ಅದನ್ನು ಕೆರೆಯಲ್ಲಿ ಬಿಸಾಡಿದ್ದಾನೆ. ಈ ಮೂಲಕ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ: ಮೈಸೂರಿನಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ಗ್ಯಾಂಗ್ ರೇಪ್: ಮೂವರು ಅರೆಸ್ಟ್
ಪ್ರಕರಣವನ್ನು ವಿಶೇಷ ತನಿಖಾ ತಂಡ 24 ಗಂಟೆಯೊಳಗೆ ಭೇದಿಸಿದ್ದು, ಸಿಸಿಟಿವಿ ದೃಶ್ಯಗಳು ಸೇರಿದಂತೆ ವೈಜ್ಞಾನಿಕ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ