ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ: ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್​ಗೆ ಎದುರಾಯ್ತು ಸಂಕಷ್ಟ

ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ರಾಜಕೀಯ ಮತ್ತು ಕಾನೂನು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆ ಹೈಕೋರ್ಟ್ ನಿರ್ದೇಶನ ಉಲ್ಲಂಘಿಸಿದೆ ಎಂಬ ಆರೋಪವಿದೆ. ಫ್ರೀಡಂ ಪಾರ್ಕ್ ಹೊರತಾಗಿ ಬೇರೆಡೆ ಪ್ರತಿಭಟನೆ ನಡೆಸಿದ್ದರಿಂದ ಶಾಸಕರ ವಿರುದ್ಧ ದೂರು ದಾಖಲಾಗಿದೆ.

ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ: ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್​ಗೆ ಎದುರಾಯ್ತು ಸಂಕಷ್ಟ
ಅಲಿ ಖಮೇನಿ & ಎನ್ಎ ಹ್ಯಾರಿಸ್
Image Credit source: TV9 Network

Updated on: Mar 05, 2026 | 11:55 AM

ಬೆಂಗಳೂರು, ಮಾರ್ಚ್​ 5: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ali Khamenei) ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ವಿಚಾರ ಇದೀಗ ರಾಜಕೀಯ ಹಾಗೂ ಕಾನೂನು ವಿವಾದಕ್ಕೆ ಕಾರಣವಾಗಿದೆ. ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂಬ ಆರೋಪದ ಹಿನ್ನೆಲೆ ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ (Congress) ಶಾಸಕ ಎನ್ಎ ಹ್ಯಾರಿಸ್ (NA Harris) ವಿರುದ್ಧ ದೂರು ಸಲ್ಲಿಕೆಯಾಗಿದೆ. ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಕೆಲವು ಸಂಘಟನೆಗಳು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದವು. ಆದರೆ, ಈ ವೇಳೆ ಹೈಕೋರ್ಟ್ ನಿರ್ದೇಶನ ಉಲ್ಲಂಘಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಸಾರ್ವಜನಿಕ ಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್‌ನಲ್ಲೇ ನಡೆಸಬೇಕು ಎಂದು ಹೈಕೋರ್ಟ್ ನಿರ್ದೇಶನ ಇದೆ. ಅದರ ಹೊರತಾಗಿ ಬೇರೆ ಸ್ಥಳದಲ್ಲಿ ಪ್ರತಿಭಟನೆ ನಡೆದಿರುವುದು ವಿವಾದಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ತೇಜಸ್ ಗೌಡ ಶಾಸಕ ಎನ್ಎ ಹ್ಯಾರಿಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಡಿಜಿ ಹಾಗೂ ಐಜಿಪಿಗೆ ದೂರು ಸಲ್ಲಿಸಿದ್ದಾರೆ. ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಪ್ರತಿಭಟನೆ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಕುರಿತು ಪೊಲೀಸರು ಈಗಾಗಲೇ ಹೈಕೋರ್ಟ್ ಗಮನಕ್ಕೆ ತಂದಿದ್ದಾರೆ. ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಅಶೋಕ್ ನಗರ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ದೂರು ಸಲ್ಲಿಸಿರುವುದಾಗಿ ತಿಳಿದುಬಂದಿದೆ. ಘಟನೆಯ ಬಗ್ಗೆ ಕಾನೂನು ಪ್ರಕಾರ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ವಿಚಾರ ರಾಜಕೀಯವಾಗಿ ಮತ್ತಷ್ಟು ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.

ಖಮೇನಿ ಹತ್ಯೆ ಖಂಡಿಸಿ ಭಾರತದ ಹಲವೆಡೆ ಮುಸ್ಲಿಮರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಕರ್ನಾಟಕದಲ್ಲಿಯೂ ಚಿಕ್ಕಬಳ್ಳಾಪುರದ ಅಲೀಪುರ, ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಅಮೆರಿಕದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭಾರತದಿಂದ ತೆರಳುತ್ತಿದ್ದ ಇರಾನ್ ಯುದ್ಧನೌಕೆಯ ಮುಳುಗಿಸಿದ ಅಮೆರಿಕ: ಸಾವಿನ ಸಂಖ್ಯೆ 87ಕ್ಕೆ ಏರಿಕೆ

ಮತ್ತೊಂದೆಡೆ ಇರಾನ್-ಇಸ್ರೇಲ್ ಸಂಘರ್ಷ ತೀವ್ರಗೊಂಡಿದ್ದು, ಸಾವಿರಕ್ಕೂ ಹೆಚ್ಚು ಮಂದಿ ಹತರಾಗಿದ್ದಾರೆ. ಬುಧವಾರವಷ್ಟೇ ಶ್ರೀಲಂಕಾ ವ್ಯಾಪ್ತಿಯಲ್ಲಿ ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕದ ಸಬ್​ಮರೀನ್ ಮುಳುಗಿಸಿದ ಪರಿಣಾಮ 87ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us