Bengaluru Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಬೆಂಗಳೂರು ಸೇರಿ ಹಲವೆಡೆ ಇನ್ನೆರಡು ದಿನ ಭಾರೀ ಮಳೆ

| Updated By: ಸುಷ್ಮಾ ಚಕ್ರೆ

Updated on: Nov 11, 2022 | 1:07 PM

Karnataka Weather Today: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.

Bengaluru Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಬೆಂಗಳೂರು ಸೇರಿ ಹಲವೆಡೆ ಇನ್ನೆರಡು ದಿನ ಭಾರೀ ಮಳೆ
ಬೆಂಗಳೂರಿನಲ್ಲಿ ಮಳೆ
Follow us on

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು (Bangalore Rains) ಸೇರಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ (Karnataka Rains) ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ನಾಳೆ (ಶನಿವಾರ) ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹಳದಿ ಅಲರ್ಟ್​ (Yellow Alert) ಘೋಷಣೆ ಮಾಡಲಾಗಿದೆ.

ಈ ಬಗ್ಗೆ ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದು, ಇಂದು ಬೆಂಗಳೂರಿನಲ್ಲಿ ಮಳೆ ಇರಲಿದೆ. ಸಂಜೆಯವರೆಗೂ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಗುಡುಗು ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ. ಕರ್ನಾಟಕದ ಒಟ್ಟು 8 ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: Tamil Nadu Rain: ಮಳೆಯಿಂದ ಚೆನ್ನೈ ಸೇರಿದಂತೆ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್​; ತಮಿಳುನಾಡಿನ ತಿರುವಳ್ಳೂರು, ಕಾಂಚೀಪುರಂನಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಕರ್ನಾಟಕದ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ನವೆಂಬರ್‌ 13 ಮತ್ತು 14ರಂದು ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ಹಾಸನ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬೀಳಲಿದೆ. ಹಾಗೇ, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ನವೆಂಬರ್ 14ರಂದು ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಾದ್ಯಂತ ಒಣ ಹವೆ ಮುಂದುವರಿಯಲಿದೆ. ಈ ಭಾಗದಲ್ಲಿ ಮಳೆ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರವು ಚೆನ್ನೈ, ತಿರುವಳ್ಳೂರ್ ಮತ್ತು ಕಾಂಚೀಪುರಂ ಸೇರಿದಂತೆ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ನವೆಂಬರ್ 13ರವರೆಗೆ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ನವೆಂಬರ್ 13ರವರೆಗೆ ಭಾರಿ ಮಳೆ ಮುಂದುವರಿಯಲಿದ್ದು, ನ. 14ರ ವೇಳೆಗೆ ಕಡಿಮೆಯಾಗುವ ಸಾಧ್ಯತೆ ಇದೆ.

ಇಂದು ತಿರುವಳ್ಳೂರು, ಕಾಂಚೀಪುರಂ ಮತ್ತು ರಾಣಿಪೇಟ್ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ಮುಂದುವರಿದಿರುವುದರಿಂದ ಚೆನ್ನೈ, ಚೆಂಗಲ್ಪಟ್ಟು, ವಿಲ್ಲುಪುರಂ, ಕಲ್ಲಾಕುರಿಚಿ ಮತ್ತು ಡೆಲ್ಟಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

ಇನ್ನಷ್ಟು ಕರ್ನಾಟಕದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ