ಬೆಂಗಳೂರು ನಗರದಲ್ಲಿ ಮುಂದುವರಿದ ಮಳೆ ಅಬ್ಬರ: ಹಲವೆಡೆ ಸಂಚಾರ ವ್ಯತ್ಯಯ, ಇಲ್ಲಿದೆ ಸಂಚಾರ ಸಲಹೆ

Bangalore Traffic Advisory: ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಕೋರಮಂಗಲ, ಬನಶಂಕರಿ, ಮಡಿವಾಳ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಮರಗಳು ಬಿದ್ದಿರುವುದು ಮತ್ತು ರಸ್ತೆಗಳು ಜಲಾವೃತವಾಗಿರುವುದರಿಂದ ಸಂಚಾರಕ್ಕೆ ಅಡಚಣೆಯಾಗಿದೆ. ಪೊಲೀಸರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಲಹೆ ನೀಡಿದ್ದಾರೆ. ಪೊಲೀಸರು ನೀಡಿರುವ ಸಂಚಾರ ಸಲಹೆ ಇಲ್ಲಿದೆ.

ಬೆಂಗಳೂರು ನಗರದಲ್ಲಿ ಮುಂದುವರಿದ ಮಳೆ ಅಬ್ಬರ: ಹಲವೆಡೆ ಸಂಚಾರ ವ್ಯತ್ಯಯ, ಇಲ್ಲಿದೆ ಸಂಚಾರ ಸಲಹೆ
ಹಲವೆಡೆ ಸಂಚಾರ ವ್ಯತ್ಯಯ

Updated on: May 20, 2025 | 8:13 AM

ಬೆಂಗಳೂರು, ಮೇ 20: ಬೆಂಗಳೂರು ಮಹಾನಗರದಲ್ಲಿ ಮಳೆಯ (Bengaluru Rains) ಅಬ್ಬರ ಮುಂದುವರಿದಿದೆ. ಮೆಜೆಸ್ಟಿಕ್, ಕೆ.ಆರ್​.ಮಾರ್ಕೆಟ್, ಜಯನಗರ, ಚಾಮರಾಜಪೇಟೆ, ಬನಶಂಕರಿ, ಶಾಂತಿನಗರ, ವಿಜಯನಗರ, ಚಂದ್ರಾಲೇಔಟ್, ರಾಜಾಜಿನಗರ, ಆರ್.ಟಿ.ನಗರ, ಹೆಬ್ಬಾಳ, ಮಲ್ಲೇಶ್ವರಂ, ಕೋರಮಂಗಲ, ಕಾಮಾಕ್ಷಿಪಾಳ್ಯ, ಸುಂಕದಕಟ್ಟೆ, ನಾಗರಬಾವಿ, ಯಶವಂತಪುರ, ಪೀಣ್ಯ, ಬಿಟಿಎಂ ಲೇಔಟ್ ಸೇರಿ ಹಲವೆಡೆ ರಾತ್ರಿಯಿಂದಲೇ ಎಡೆಬಿಡದೆ ಮಳೆ ಸುರಿಯುತ್ತಿದೆ. ಈ ಪೈಕಿ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಬೆಳಗ್ಗೆ ಮಳೆ ಜೋರಾಗಿದೆ. ಪರಿಣಾಮವಾಗಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ.

ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿದ್ದರೆ, ಇನ್ನು ಕೆಲವು ಕಡೆಗಳಲ್ಲಿ ಮರಗಳು ಬಿದ್ದು ಸಂಚಾರಕ್ಕೆ ಅಡಚಣೆಯಾಗಿದೆ. ಹಲವು ರಸ್ತೆಗಳಲ್ಲಿ ನಿಧಾನಗತಿಯ ಸಂಚಾರ ಇದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ
ಭಾರಿ ಮಳೆಗೆ ಕರ್ನಾಟಕದಲ್ಲಿ 4 ಸಾವು, ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆ
ಕರ್ನಾಟಕದ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ಲೂಟಿಕೋರರ ಬೆಂಗಳೂರು: ಮಳೆ ಅವಾಂತರ ಬೆನ್ನಲ್ಲೇ ಹೆಚ್​ಡಿಕೆ ಟೀಕೆ

ಪುಟ್ಟೇನಹಳ್ಳಿ ಮುಖ್ಯರಸ್ತೆ ಕಡೆಯಿಂದ ಕೊತ್ತನೂರು ದಿನ್ನೆ ಜಂಕ್ಷನ್ ಕಡೆಗೆ ಹಾಗೂ ಹೊಸಗುಡ್ಡದಹಳ್ಳಿ ಜಂಕ್ಷನ್ ಕಡೆಯಿಂದ ಮೈಸೂರು ರಸ್ತೆ ಟೋಲ್ಗೇಟ್ ಕಡೆಗೆ. ಮಳೆನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿರುತ್ತದೆ ಎಂದು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.

ರೂಪೇನ ಅಗ್ರಹಾರದ ಬಳಿ ರಸ್ತೆ ಜಲಾವೃತ


ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಳೆ ಬೀಳುತ್ತಿರುವುದರಿಂದ ರೂಪೇನ ಅಗ್ರಹಾರದ ಬಳಿ ರಸ್ತೆ ಜಲಾವೃತಗೊಂಡಿದ್ದು ಹೊಸೂರು ಮುಖ್ಯ ರಸ್ತೆ ಮೂಲಕ ನಗರದ ಒಳ ಭಾಗಕ್ಕೆ ಬರುವ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ. ಆದ್ದರಿಂದ ವಾಹನ ಸವಾರರು ಬದಲಿ ರಸ್ತೆಗಳನ್ನು ಬಳಸಿ ಸಹಕರಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

ಬೆಂಗಳೂರಿನ ಯಾವೆಲ್ಲ ರಸ್ತೆಗಳು ಜಲಾವೃತ?

  • ಜಯದೇವ ಆಸ್ಪತ್ರೆ ಕಡೆಯಿಂದ ಈಸ್ಟ್ ಎಂಡ್ ಸರ್ಕಲ್ ಕಡೆಗೆ.
  • ವರ್ತೂರು ಕಾಲೇಜು ಕಡೆಯಿಂದ ವರ್ತೂರು ಕೋಡಿ ಕಡೆಗೆ.
  • ಕಾಟನ್‌ಪೇಟ್ ಕಡೆಯಿಂದ ಸುಲ್ತಾನ್‌ಪೇಟೆ ವೃತ್ತದ ಕಡೆಗೆ.
  • ಬಿಳೇಕಹಳ್ಳಿ ಕಡೆಯಿಂದ ಜಿ ಡಿ ಮರ ಕಡೆಗೆ.
  • ಸಾರಕ್ಕಿ ಜಂಕ್ಷನ್ ಕಡೆಯಿಂದ ಸಿಂಧೂರ ಜಂಕ್ಷನ್ ಕಡೆಗೆ.

ಮಡಿವಾಳ ಅಯ್ಯಪ್ಪ ಅಂಡರ್ ಪಾಸ್ ಬಳಸದಿರಿ

ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪ ಅಂಡರ್ ಪಾಸ್​​ನಲ್ಲಿ ನೀರು ತುಂಬಿಕೊಂಡಿದ್ದು, ಹೊಸೂರು ಮುಖ್ಯರಸ್ತೆಯಲ್ಲಿ ನಗರದಿಂದ ಹೊರಭಾಗಕ್ಕೆ ಹೋಗುವ ಮತ್ತು ನಗರದ ಒಳಭಾಗಕ್ಕೆ ಬರುವ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ. ವಾಹನ ಸವಾರರು ಬದಲಿ ರಸ್ತೆ ಬಳಸುವುದು ಒಳಿತು ಎಂದು ಸಂಚಾರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಹೊಸೂರು ಮುಖ್ಯರಸ್ತೆ, ರಿಂಗ್​ ರೋಡ್ ಜಲಾವೃತ

ಹೊಸೂರು ಮುಖ್ಯರಸ್ತೆ ಮತ್ತು ಹೊರ ವರ್ತುಲ ರಸ್ತೆ ಜಲಾವೃತಗೊಂಡಿದ್ದು, ಪರ್ಯಾಯ ಮಾರ್ಗಗಳ ಬಳಕೆಗೆ ಪೊಲೀಸರು ಸಲಹೆ ನೀಡಿದ್ದಾರೆ. ಬನಶಂಕರಿ ಕಡೆಯಿಂದ ಬರುವ ವಾಹನಗಳನ್ನು ಈಸ್ಟ್ ಎಂಡ್ ಸರ್ಕಲ್ ಬಳಿ ಎಡ ತಿರುವು ಮಾಡಿಸಿ ಸಾಗರ್ ಜಂಕ್ಷನ್ ಗೆ ಬಂದು ಬಲ ತಿರುವು ಮಾಡಿಸಿ ಬನ್ನೇರಘಟ್ಟ ರಸ್ತೆ ಮೂಲಕ ನಗರ ಪ್ರವೇಶ ಮಾಡಲು ಅನುವು ಮಾಡಿಕೊಡಲಾಗುತ್ತಿದೆ.

ಇದನ್ನೂ ಓದಿ: ಭಾರಿ ಮಳೆಗೆ ಕರ್ನಾಟಕದಲ್ಲಿ 4 ಸಾವು, ಬೆಂಗಳೂರಿನಲ್ಲಿ ಇನ್ನೂ 3 ದಿನ ವರ್ಷಧಾರೆ

ಇನ್ನೂ ಮುಂದೆ ಬಂದ ವಾಹನಗಳನ್ನು ಜಯದೇವ ಜಂಕ್ಷನ್‌ನಲ್ಲಿ ಎಡ ತಿರುವು ಮಾಡಿಸಿ ಬನ್ನೇರುಘಟ್ಟ ಮುಖ್ಯರಸ್ತೆ ಮೂಲಕ ನಗರ ಪ್ರವೇಶ ಮಾಡಲು ಅನುವು ಮಾಡಿಕೊಡಲಾಗುತ್ತಿದೆ. ಬಿ.ಟಿ.ಎಂ ಲೇಔಟ್ ಒಳಭಾಗದಿಂದ ಬರುವ ವಾಹನಗಳನ್ನು 16ನೇ ಮುಖ್ಯರಸ್ತೆಯಲ್ಲಿ ಎಡ ತಿರುವು ಮಾಡಿಸಿ ತಾವರೆಕೆರೆ ಮುಖ್ಯರಸ್ತೆ ಮೂಲಕ ಡಾ. ಮರಿಗೌಡ ರಸ್ತೆ, ಡೈರಿ ಸರ್ಕಲ್ ಮೂಲಕ ನಗರ ಪ್ರವೇಶ ಮಾಡಲು ಅನುವು ಮಾಡಿಕೊಡಲಾಗುತ್ತಿದೆ ಎಂದು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ