AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿಯಲ್ಲಿ ದಿಢೀರ್ ಮಳೆರಾಯನ ಆರ್ಭಟ!: ಮಲ್ಲೇಶ್ವರಂ, ವಿಜಯನಗರದಲ್ಲಿ ಧಾರಾಕಾರ ಮಳೆ: ಜೂನ್ 11ರವರೆಗೆ ಈ ಭಾಗದಲ್ಲೂ ಭಾರಿ ಮಳೆ

ಬೆಂಗಳೂರಿನಲ್ಲಿ ಧಾರಾಕಾರ ಮಳೆ ರಸ್ತೆ ಜಲಾವೃತ, ವಾಹನ ದಟ್ಟಣೆ ಸೃಷ್ಟಿಸಿದೆ. ರಾಜ್ಯದಲ್ಲಿ ಮುಂಗಾರು ಪ್ರವೇಶಿಸಿದ್ದು, ಕರಾವಳಿ, ಮಲೆನಾಡಿಗೆ ಭಾರೀ ಮಳೆ ಮುನ್ಸೂಚನೆ ಇದೆ. ಜೂನ್ 11ರವರೆಗೆ ಹಲವೆಡೆ ಮಳೆಯ ಆರ್ಭಟ ಹೆಚ್ಚಲಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ ದಿಢೀರ್ ಮಳೆರಾಯನ ಆರ್ಭಟ!: ಮಲ್ಲೇಶ್ವರಂ, ವಿಜಯನಗರದಲ್ಲಿ ಧಾರಾಕಾರ ಮಳೆ: ಜೂನ್ 11ರವರೆಗೆ ಈ ಭಾಗದಲ್ಲೂ ಭಾರಿ ಮಳೆ
ಬೆಂಗಳೂರು ಮಳೆ
ಅಕ್ಷಯ್​ ಪಲ್ಲಮಜಲು​​
|

Updated on: Jun 06, 2026 | 3:29 PM

Share

ಬೆಂಗಳೂರು, ಜೂ.6: ರಾಜಧಾನಿ ಬೆಂಗಳೂರಿನ ಸಾರ್ವಜನಿಕರಿಗೆ ಮಳೆರಾಯ ಶನಿವಾರ ಮಧ್ಯಾಹ್ನ ಬಿಗ್ ಶಾಕ್ ನೀಡಿದ್ದಾನೆ. ನಗರದ ಕೇಂದ್ರ ಭಾಗ ಸೇರಿದಂತೆ ಪ್ರಮುಖ ಬಡಾವಣೆಗಳಲ್ಲಿ ಹಠಾತ್ ಧಾರಾಕಾರ ಮಳೆ ಸುರಿದಿದ್ದು, ವಾರಾಂತ್ಯದ ಮೂಡ್‌ನಲ್ಲಿದ್ದ ಐಟಿ ಸಿಟಿ ಜನರಿಗೆ ಬಿಗ್​ ಶಾಕ್ ನೀಡಿದೆ. ಮುಂಗಾರು ಮಾರುತಗಳ ಆರ್ಭಟದ ಹಿನ್ನೆಲೆಯಲ್ಲಿ ನಗರದಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದೆ. ನಗರದ ಹೃದಯಭಾಗವಾದ ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ವಿಜಯನಗರ, ವಸಂತನಗರ, ಪ್ಯಾಲೇಸ್ ಗುಟ್ಟಹಳ್ಳಿ, ಕಾಟನ್​ಪೇಟೆ, ಕಾರ್ಪೋರೇಷನ್, ಚಿಕ್ಕಪೇಟೆ ಮತ್ತು ಗಾಂಧಿನಗರ ಸೇರಿದಂತೆ ಸುತ್ತಮುತ್ತಲಿನ ಬಹುತೇಕ ರಸ್ತೆಗಳಲ್ಲಿ ಮಳೆ ಸುರಿದಿದೆ. ದಿಢೀರ್ ಆಗಿ ಬಂದ ಮಳೆಯಿಂದಾಗಿ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.

ದಿಢೀರ್ ಆಗಿ ಮಳೆ ಸುರಿದಿದ್ದರಿಂದ ರಸ್ತೆಯಲ್ಲಿದ್ದ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಆಶ್ರಯ ಪಡೆಯಲು ಜಾಗವಿಲ್ಲದೆ ತೀವ್ರ ತೊಂದರೆ ಅನುಭವಿಸಿದರು. ಮೇಲ್ಸೇತುವೆಗಳು, ನಮ್ಮ ಮೆಟ್ರೋ ನಿಲ್ದಾಣಗಳು ಮತ್ತು ಬಸ್ ತಂಗುದಾಣಗಳ ಅಡಿಯಲ್ಲಿ ಸವಾರರು ಬೈಕ್ ನಿಲ್ಲಿಸಿದ್ದರಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ವ್ಯಾಪಾರ ವಹಿವಾಟಿಗೆ ಹೆಸರಾದ ಚಿಕ್ಕಪೇಟೆ, ಮೆಜೆಸ್ಟಿಕ್ ಮಾರುಕಟ್ಟೆ ಭಾಗದಲ್ಲಿ ರಸ್ತೆ ಬದಿಯ ವ್ಯಾಪಾರಿಗಳು ಮಳೆಯಿಂದ ತಮ್ಮ ಸಾಮಗ್ರಿಗಳನ್ನು ರಕ್ಷಿಸಿಕೊಳ್ಳಲು ಹರಸಾಹಸ ಪಡಬೇಕಾಯಿತು.

ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಜೂನ್ 11ರವರೆಗೆ ಭಾರಿ ಮಳೆ:

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮಾರುತಗಳು ಮತ್ತಷ್ಟು ತೀವ್ರಗೊಂಡಿದ್ದು, ಇಡೀ ರಾಜ್ಯವನ್ನು ಆವರಿಸಿಕೊಳ್ಳುತ್ತಿವೆ. ಜೂನ್ 5 ರಂದೇ ಮುಂಗಾರು ಮಾರುತಗಳು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಿಗೆ ಯಶಸ್ವಿಯಾಗಿ ಪ್ರವೇಶಿಸಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮತ್ತು ಹವಾಮಾನ ಇಲಾಖೆ ಜಂಟಿ ಪ್ರಕಟಣೆಯಲ್ಲಿ ತಿಳಿಸಿವೆ. ಮುಂದಿನ 2 ರಿಂದ 3 ದಿನಗಳಲ್ಲಿ ರಾಜ್ಯದ ಇನ್ನುಳಿದ ಭಾಗಗಳಿಗೂ ಮುಂಗಾರು ವ್ಯಾಪಿಸಲು ವಾತಾವರಣ ಪೂರಕವಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜೂನ್ 6 ರಿಂದ ಜೂನ್ 11 ರವರೆಗೆ ರಾಜ್ಯದ ವಿವಿಧ ವಲಯಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ.

ಇದನ್ನೂ ಓದಿ: ಮಳೆಗಾಲ ಆರಂಭವಾದರೂ ಜೋಗಿಮಟ್ಟಿ ವೀಕ್ಷಣೆಗೆ ಇನ್ನೂ ನಿರ್ಬಂಧ: ಪ್ರವಾಸಿಗರಿಂದ ಅರಣ್ಯ ಇಲಾಖೆಗೆ ಹಿಡಿಶಾಪ

ಕರಾವಳಿ ಕರ್ನಾಟಕ :

ಜೂನ್ 6 ರಿಂದ 11 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾದ ಸಾಧಾರಣ ಮಳೆಯಾಗಲಿದ್ದು, ಕೆಲವು ಕಡೆಗಳಲ್ಲಿ ಭಾರಿ (64.5mm – 115.4mm) ಹಾಗೂ ಅತಿ ಭಾರಿ (115.5mm – 204.4mm) ಮಳೆಯಾಗುವ ಸಾಧ್ಯತೆಯಿದೆ. ಧಾರಾಕಾರ ಮಳೆಯಿಂದಾಗಿ ಕರಾವಳಿಯ ತಗ್ಗು ಪ್ರದೇಶಗಳಲ್ಲಿ ಹಠಾತ್ ಪ್ರವಾಹ (Flash Floods) ಹಾಗೂ ನಗರ ಪ್ರದೇಶಗಳಲ್ಲಿ ರಸ್ತೆ ಜಲಾವೃತಗೊಳ್ಳುವ (Urban Water Logging) ಭೀತಿ ಎದುರಾಗಿದೆ. ಮುನ್ನೆಚ್ಚರಿಕೆಯಾಗಿ ಈಗಾಗಲೇ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಮಲೆನಾಡು ಭಾಗ :

ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನ ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 11 ರವರೆಗೆ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ವಿಶೇಷವಾಗಿ ಜೂನ್ 6 ರಿಂದ ಜೂನ್ 10 ರವರೆಗೆ ಮಲೆನಾಡಿನ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ.

ಉತ್ತರ ಒಳನಾಡು

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 6 ರಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದ್ದು, ಜೂನ್ 9 ರವರೆಗೆ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 6 ದಿನಗಳ ಕಾಲ ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಮುಂದಿನ ದಿನಗಳಲ್ಲಿ ಮಳೆಯ ಮುನ್ಸೂಚನೆಯ ನಿಖರತೆ ಬದಲಾಗಬಹುದಾಗಿದ್ದರಿಂದ, ಸಾರ್ವಜನಿಕರು ಹಾಗೂ ರೈತರು ಹವಾಮಾನ ಇಲಾಖೆಯ ಅಧಿಕೃತ ಸೂಚನೆಗಳನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More