ಪಾಕಿಸ್ತಾನ ಸೇನೆ ಗುರಿಯಾಗಿಸಿ ದಾಳಿ ನಡೆಸಲು ಸಂಚು ಆರೋಪ: ಬೆಂಗಳೂರಿನಲ್ಲಿ ಭದ್ರತಾ ಸಿಬ್ಬಂದಿ ಬಂಧನ

ಪಾಕಿಸ್ತಾನ ಸೇನೆಯ ವಿರುದ್ಧ ಹೋರಾಡಲು ಟಿಟಿಪಿ ಉಗ್ರ ಸಂಘಟನೆ ಸೇರಲು ಸಂಚು ರೂಪಿಸಿದ್ದ ಆರೋಪದಡಿ ಬೆಂಗಳೂರಿನ ಜಿಗಣಿಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರ್ಥಿಕ ಸಂಕಷ್ಟ ಮತ್ತು ಕುಟುಂಬದ ಕಲಹದಿಂದ ತನ್ನ ಯೋಜನೆಯನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ ಎಂದು ವಿಚಾರಣೆ ವೇಳೆ ಆರೋಪಿ ತಿಳಿಸಿದ್ದಾನೆ ಎನ್ನಲಾಗಿದೆ.

ಪಾಕಿಸ್ತಾನ ಸೇನೆ ಗುರಿಯಾಗಿಸಿ ದಾಳಿ ನಡೆಸಲು ಸಂಚು ಆರೋಪ: ಬೆಂಗಳೂರಿನಲ್ಲಿ ಭದ್ರತಾ ಸಿಬ್ಬಂದಿ ಬಂಧನ
ಬಂಧಿತ ಆರೋಪಿ
Image Credit source: indianexpress.com

Updated on: Aug 23, 2026 | 7:13 AM

ಮುಖ್ಯಾಂಶಗಳು

  • ಪಾಕಿಸ್ತಾನ ಸೇನೆ ಗುರಿಯಾಗಿಸಿ ದಾಳಿ ನಡೆಸುವ ಸಂಚು
  • ಪಶ್ಚಿಮ ಬಂಗಾಳ ಮೂಲದ ಭದ್ರತಾ ಸಿಬ್ಬಂದಿ ಬಂಧನ
  • ಬೆಂಗಳೂರಿನ ಜಿಗಣಿಯಲ್ಲಿ ವಾಸವಾಗಿದ್ದ ಆರೋಪಿ

ಬೆಂಗಳೂರು, ಆಗಸ್ಟ್​​ 23: ಪಾಕಿಸ್ತಾನ ಸೇನೆ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಅಫ್ಘಾನಿಸ್ತಾನಕ್ಕೆ ತೆರಳಿ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (TTP) ಸಂಘಟನೆ ಸೇರಲು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬೆಂಗಳೂರಿನಲ್ಲಿ (Bengaluru) 25 ವರ್ಷದ ಭದ್ರತಾ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಸಾಫುಲ್ ಮಲಿಕ್ ಎಂದು ಗುರುತಿಸಲಾಗಿದೆ. ಉಗ್ರ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳು ಆತನನ್ನು ವಿಚಾರಣೆ ನಡೆಸುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಬಂಧನ

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆ ಮೂಲದ ಆಸಾಫುಲ್ ಮಲಿಕ್, ಬೆಂಗಳೂರಿನ ಹೊರವಲಯದ ಜಿಗಣಿಯಲ್ಲಿ ವಾಸವಾಗಿದ್ದು, ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದನು. ಆಗಸ್ಟ್ 11ರಂದು ಗುಪ್ತಚರ ಇಲಾಖೆ (IB) ನೀಡಿದ ಮಾಹಿತಿಯ ಆಧಾರದ ಮೇಲೆ ಆತನನ್ನು ಬಂಧಿಸಲಾಗಿದೆ. ಅಂತಾರಾಷ್ಟ್ರೀಯ ಕರೆಗಳ ಮೇಲೆ ನಿಗಾ ವಹಿಸಿದ್ದ ಐಬಿಗೆ ಮಲಿಕ್‌ನ ಕರೆಗಳು ಅನುಮಾನಾಸ್ಪದವಾಗಿ ಕಂಡುಬಂದಿದ್ದವು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ರಾಮನಗರ ನಕಲಿ ಔಷಧ ಜಾಲ: ಪೋರ್ಟರ್’ ಆ್ಯಪ್ ಮೂಲಕ ನಡೆಯುತ್ತಿತ್ತು ಸಪ್ಲೈ!

ಮೊಬೈಲ್ ಪರಿಶೀಲನೆಯಲ್ಲಿ ಬಹಿರಂಗವಾದ ಮಾಹಿತಿ

ಮಲಿಕ್‌ನನ್ನು ವಶಕ್ಕೆ ಪಡೆದು ಮೊಬೈಲ್ ಪರಿಶೀಲಿಸಿದಾಗ, ಅಫ್ಘಾನಿಸ್ತಾನದಲ್ಲಿ ನೆಲೆಸಿರುವ ಮತ್ತು ತಾನು TTP ಸದಸ್ಯನೆಂದು ಹೇಳಿಕೊಂಡಿದ್ದ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದ ಮಾಹಿತಿ ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಮಲಿಕ್ ಡಿಸೆಂಬರ್ 2025ರಲ್ಲಿ ಬೆಂಗಳೂರಿಗೆ ಬಂದು ಭದ್ರತಾ ಸಿಬ್ಬಂದಿಯಾಗಿ ಕೆಲಸಕ್ಕೆ ಸೇರಿದ್ದ. ಬಳಿಕ ಬೆಂಗಳೂರಿನಲ್ಲೇ ಪಾಸ್‌ಪೋರ್ಟ್ ಪಡೆದು ಅಫ್ಘಾನಿಸ್ತಾನಕ್ಕೆ ವೀಸಾಕ್ಕೂ ಅರ್ಜಿ ಸಲ್ಲಿಸಿದ್ದರೂ, ಅಲ್ಲಿಗೆ ಪ್ರಯಾಣಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆರ್ಥಿಕ ಸಂಕಷ್ಟ ಮತ್ತು ಕುಟುಂಬದ ಕಲಹದಿಂದ ತನ್ನ ಯೋಜನೆಯನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ ಎಂದು ವಿಚಾರಣೆ ವೇಳೆ ಮಲಿಕ್ ತಿಳಿಸಿದ್ದಾನೆ ಎನ್ನಲಾಗಿದೆ. ಅಫ್ಘಾನಿಸ್ತಾನದ ಇಮ್ರಾನ್ ಹೈದರ್ ಎಂಬ ವ್ಯಕ್ತಿಯೊಂದಿಗೆ ಫೇಸ್‌ಬುಕ್ ಮೂಲಕ ಮಲಿಕ್ ಸಂಪರ್ಕ ಹೊಂದಿದ್ದ. ಪಾಕಿಸ್ತಾನ ಸೇನೆ ನಾಗರಿಕರ ಮೇಲೆ ದೌರ್ಜನ್ಯ ಎಸಗುತ್ತಿದೆ ಎಂಬ ನಂಬಿಕೆಯಿಂದ ಹೈದರ್‌ಗೆ ಸಹಾಯ ಮಾಡಲು ಆತ ಬಯಸಿದ್ದ ಎಂದು ಎಲೆಕ್ಟ್ರಾನಿಕ್ಸ್ ಸಿಟಿ ಡಿಸಿಪಿ ಎಂ. ನಾರಾಯಣ ತಿಳಿಸಿರೋದಾಗಿ ಇಂಡಿಯನ್​​ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:12 am, Sun, 23 August 26

Loading...
Unable to load recommendations.
Follow Us