ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿಯ ಜೊತೆ ಮಂಜು ಕವಿದ ವಾತಾವರಣ, ರಾಜ್ಯದ 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Karnataka Weather: ಉತ್ತರ ಕರ್ನಾಟಕದಲ್ಲಿ ಶೀತದಲೆಯ ಪರಿಣಾಮ ಹೆಚ್ಚುತ್ತಿದ್ದು, ರಾಜ್ಯ ಚಳಿಗಾಳಿಯಿಂದ ತತ್ತರಿಸುತ್ತಿದೆ. ರಾಜ್ಯದಲ್ಲಿ 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿದ್ದು, ಚಳಿಯ ಪ್ರಮಾಣವೂ ತೀವ್ರವಿರಲಿದೆ ಎಂದು ಇಲಾಖೆ ತಿಳಿಸಿದೆ. ವೈದ್ಯರು ಆರೋಗ್ಯ ಕಾಪಾಡಿಕೊಳ್ಳುವಂತೆ ಹೇಳಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಇಲಾಖೆ ಮತ್ತು ವೈದ್ಯರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

ಬೆಂಗಳೂರು, ಡಿಸೆಂಬರ್ 23: ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಶೀತದಲೆ (Weather Forecast) ಅಬ್ಬರಿಸುತ್ತಿದ್ದು, ಬೆಂಗಳೂರಿನಲ್ಲಿ ತೀವ್ರ ಚಳಿಯಿಂದ ಸಾರ್ವಜನಿಕರು ತತ್ತರಿಸಿಹೋಗಿದ್ದಾರೆ. ಉತ್ತರ ಕರ್ನಾಟಕದಲ್ಲೂ ಶೀತದಲೆಯ ಎಫೆಕ್ಟ್ ಜೋರಾಗಿದ್ದು, ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಉತ್ತರ ಕರ್ನಾಟಕದಲ್ಲಿಂದು ಚಳಿಯ ಪ್ರಮಾಣ ಕಡಿಮೆ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಯಾವ ಜಿಲ್ಲೆಗಳಿಗೆ ಅಲರ್ಟ್?
ಭಾನುವಾರ (ಡಿ.21) ವಿಜಯಪುರದಲ್ಲಿ 6.9 ಡಿಗ್ರಿ ಸೆಲ್ಸಿಯಲ್ಸ್ ಉಷ್ಣಾಂಶ ದಾಖಲಾಗಿತ್ತು.ಕಳೆದ 20 ವರ್ಷಗಳ ಅಂಕಿ ಅಂಶಗಳ ಪ್ರಕಾರ ಮೂರನೇ ಬಾರಿಗೆ ದಾಖಲಾದ ಅತಿ ಕಡಿಮೆ ಉಷ್ಣಾಂಶ ಇದಾಗಿದೆ. ಆದರೆ ಇಂದು ಉತ್ತರ ಕರ್ನಾಟಕದಲ್ಲಿನ ತಾಪಮಾನದಲ್ಲಿ ಸುಧಾರಣೆ ಕಂಡಿದೆ. ನಿನ್ನೆ 5 ಕಡೆ ಯೆಲ್ಲೋ ಅಲರ್ಟ್ ಇದ್ದರೆ, ಇಂದು ಕಲಬುರಗಿ ಮತ್ತು ಬೀದರ್ನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ
ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣದಲ್ಲಿ ಸಾಕಷ್ಟು ಏರು ಪೇರಾಗುತ್ತಿದ್ದು, ಚಳಿಯ ಪ್ರಮಾಣ ಹೆಚ್ಚುತ್ತಿದೆ. ಇಂದು ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಈ ಮಧ್ಯೆ ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.
ಎಲ್ಲೆಲ್ಲಿ ಒಣ ಹವೆ
ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.
ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.




