
ಬೆಂಗಳೂರು, ಆಗಸ್ಟ್ 29: ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ (Drunk and Drive) ನೀರಿನ ಟ್ಯಾಂಕರ್ ಚಾಲಕರ ವಿರುದ್ಧ ಬೆಂಗಳೂರು (Bengaluru) ಸಂಚಾರ ಪೊಲೀಸರು ಶುಕ್ರವಾರ ಬೆಳಗ್ಗೆ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಬೆಳಗ್ಗೆ 6ರಿಂದ 9 ಗಂಟೆವರೆಗೆ ನಡೆದ ಕಾರ್ಯಾಚರಣೆಯಲ್ಲಿ 1,476 ನೀರಿನ ಟ್ಯಾಂಕರ್ಗಳ ಚಾಲಕರನ್ನು ತಪಾಸಣೆ ಮಾಡಲಾಗಿದ್ದು, ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಆರೋಪದ ಮೇಲೆ 40 ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರ ಪ್ರಕಾರ, ಆರೋಪಿಗಳ ಚಾಲನಾ ಪರವಾನಗಿಗಳನ್ನು ಅಮಾನತುಗೊಳಿಸುವ ಕ್ರಮಕ್ಕಾಗಿ ಸಂಬಂಧಪಟ್ಟ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ (RTO) ಕಳುಹಿಸಲಾಗುತ್ತದೆ. ಮದ್ಯಪಾನ ಮಾಡಿ ಟ್ಯಾಂಕರ್ಗಳನ್ನು ಚಲಾಯಿಸುವುದರಿಂದ ರಸ್ತೆ ಸುರಕ್ಷತೆಗೆ ಅಪಾಯ ಉಂಟಾಗುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಇದೇ ರೀತಿಯ ವಿಶೇಷ ತಪಾಸಣಾ ಕಾರ್ಯಾಚರಣೆಯನ್ನು ಮುಂದಿನ ದಿನಗಳಲ್ಲೂ ನಡೆಸಲು ಸಂಚಾರ ಪೊಲೀಸರು ನಿರ್ಧರಿಸಿದ್ದಾರೆ. ನೀರಿನ ಟ್ಯಾಂಕರ್ ಚಾಲಕರು ಮದ್ಯಪಾನ ಮಾಡಿ ವಾಹನ ಚಲಾಯಿಸುವುದನ್ನು ತಡೆಯುವ ಮೂಲಕ ಅಪಘಾತಗಳಿಗೆ ಕಡಿವಾಣ ಹಾಕುವುದು ಕಾರ್ಯಾಚರಣೆಯ ಉದ್ದೇಶವಾಗಿದೆ.
ಆಗಸ್ಟ್ 29 (ಇಂದು) ಮಧ್ಯಾಹ್ನ 02.30 ಗಂಟೆಯಿಂದ ಸಂಜೆ 04.30 ಗಂಟೆಯವರೆಗೆ ಮತ್ತು ಆಗಸ್ಟ್ 30 ರಂದು ಬೆಳಿಗ್ಗೆ 07.00 ಗಂಟೆಯಿಂದ ಬೆಳಿಗ್ಗೆ 08.00 ಗಂಟೆಯವರೆಗೆ ಅತಿಗಣ್ಯ ವ್ಯಕ್ತಿಗಳ ಸಂಚಾರದ ದೃಷ್ಟಿಯಿಂದ ಸುರಂಜನ್ದಾಸ್ ರಸ್ತೆ ಮತ್ತು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಬಹುದು. ಸಾರ್ವಜನಿಕರು ತಮ್ಮ ಪ್ರಯಾಣವನ್ನು ಇದಕ್ಕೆ ಅನುಗುಣವಾಗಿ ಯೋಜಿಸಲು ತಿಳಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಎಕ್ಸ್ ಸಂದೇಶದ ಮೂಲಕ ತಿಳಿಸಿದ್ದಾರೆ.
“ಸಂಚಾರ ಸಲಹೆ/Traffic advisory” pic.twitter.com/GTsZHOOUmJ
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) August 28, 2026
ಮೇಲೆ ತಿಳಿಸಿರುವ ರಸ್ತೆಯ ಎರಡೂ ಬದಿಗಳಲ್ಲಿ ಯಾವುದೇ ವಾಹನಗಳ ನಿಲುಗಡೆಗೆ ಅವಕಾಶವಿರುವುದಿಲ್ಲ ಎಂದೂ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:49 am, Sat, 29 August 26