ಬೇಸಿಗೆ ಆರಂಭಕ್ಕೂ ಮೊದಲೇ ಬೆಂಗಳೂರಿಗರಿಗೆ ಶಾಕ್: ನೀರು ವ್ಯರ್ಥ ಮಾಡಿದರೆ ಬೀಳುತ್ತೆ ದಂಡ
ಬೆಂಗಳೂರಿನಲ್ಲಿ ಕುಡಿಯುವ ನೀರಿನ ಕೊರತೆಯನ್ನು ತಪ್ಪಿಸಲು, ಜಲಮಂಡಳಿಯು ಹೊಸ ಆದೇಶ ಹೊರಡಿಸಿದೆ. ವಾಹನ ತೊಳೆಯುವುದು, ಕೈದೋಟ, ಮತ್ತು ಇತರ ಅನಗತ್ಯ ಬಳಕೆಗಳಿಗೆ ಕುಡಿಯುವ ನೀರನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಉಲ್ಲಂಘಿಸಿದರೆ 5000 ರೂ. ದಂಡ ವಿಧಿಸಲಾಗುವುದು. ಈ ಬಾರಿ ಬೇಸಿಗೆ ಆರಂಭಕ್ಕೂ ಮೊದಲೇ ಆದೇಶ ಜಾರಿ ಮಾಡಲಾಗಿದೆ.

ಬೆಂಗಳೂರು, ಫೆಬ್ರವರಿ 17: ಇನ್ನೂ ಚಳಿಗಾಲ ಮುಗಿದಿಲ್ಲ. ಬೇಸಿಗೆ ಶುರುವಾಗಿಲ್ಲ. ಆಗಲೇ ಕುಡಿಯುವ ನೀರಿಗೆ (Water) ಹಾಹಾಕಾರ ಶುರುವಾಗಿದೆ. ಇತ್ತ ಸಿಲಿಕಾನ್ ಸಿಟಿ ಜನರಿಗೆ ಯಲ್ಲಿ ಬೇಸಿಗೆ ಆರಂಭಕ್ಕೂ ಮೊದಲೇ ಶಾಕ್ ಎದುರಾಗಿದೆ. ಕಳೆದ ಬಾರಿ ಬೇಸಿಗೆಯಲ್ಲಿ ಹೊರಡಿಸಿದ್ದ ಆದೇಶ ಮರು ಜಾರಿ ಮಾಡಲಾಗಿದ್ದು, ಅನಗತ್ಯವಾಗಿ ನೀರು ವ್ಯರ್ಥ ಮಾಡಿದವರಿಗೆ ದಂಡ ವಿಧಿಸಲು ಜಲಮಂಡಳಿ ಸಜ್ಜಾಗಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಜಲಮಂಡಳಿ ಕೈದೋಟ, ವಾಹನ ತೊಳೆಯಲು ಕುಡಿಯುವ ನೀರು ಬಳಸಿದರೆ 5 ಸಾವಿರ ರೂ. ದಂಡ ವಿಧಿಸುವುದಾಗಿ ತಿಳಿಸಿದೆ. ಆದೇಶ ಉಲ್ಲಂಘಿಸಿದವರ ಬಗ್ಗೆ ಸಹಾಯವಾಣಿ ಸಂಖ್ಯೆ 1916 ಕರೆ ಮಾಡಿ ದೂರು ನೀಡಲು ಸೂಚನೆ ನೀಡಲಾಗಿದೆ.
ಜಲಮಂಡಳಿ ಆದೇಶದಲ್ಲೇನಿದೆ?
ಬೆಂಗಳೂರು ಮಹಾನಗರದಲ್ಲಿ ಖಾಯಂ ವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿದಂತೆ ಸುಮಾರು 1 ಕೋಟಿ 40 ಲಕ್ಷ ಜನಸಂಖ್ಯೆಯನ್ನು ಗುರುತಿಸಲಾಗಿದೆ. ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯಕವಾಗಿದೆ. ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದೆ. ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿದಿದ್ದು, ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟುವುದು ಅವಶ್ಯವೆಂದು ಮನಗಂಡು ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸುವಂತೆ ಅಗತ್ಯಪಡಿಸಲಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ: ಸಾರ್ವಜನಿಕರಿಂದ ದೂರು: ಬೆಸ್ಕಾಂ, ಜಲಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34 ರ ಅನುಸಾರ ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು ಈ ಕೆಳಕಂಡ ಉದ್ದೇಶಗಳಿಗೆ ಬಳಸಲು ಈ ಮೂಲಕ ನೀಷೇದಿಸಲಾಗಿದೆ.
- ವಾಹನಗಳ ಸ್ವಚ್ಚತೆಗೆ
- ಕೈದೋಟಕ್ಕೆ
- ಕಟ್ಟಡ ನಿರ್ಮಾಣಕ್ಕೆ
- ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ
- ಸಿನಿಮಾ ಮಂದಿರ ಮತ್ತು ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ
- ರಸ್ತೆ ನಿರ್ಮಾಣ ಮತ್ತು ಸ್ವಚ್ಛತೆಗೆ
ಇದನ್ನೂ ಓದಿ: ನೀರಿನ ದರ ಹೆಚ್ಚಳ ಸುಳಿವು ನೀಡಿದ ಬೆಂಗಳೂರು ಜಲಮಂಡಳಿ: ಡಿಕೆಶಿ ನೇತೃತ್ವದ ಮುಂದಿನ ಸಭೆಯಲ್ಲಿ ತೀರ್ಮಾನ ಸಾಧ್ಯತೆ
ಮೇಲ್ಕಂಡ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ, ಉಲ್ಲಂಘನೆ ಮಾಡುವವರ ವಿರುದ್ದ ಜಲಮಂಡಳಿಯ ಕಾಯ್ದೆ 1964 ರ ಕಲಂ 109 ರಂತೆ ರೂ. 5000 ದಂಡ ವಿಧಿಸಲಾಗುವುದು. ಈ ಉಲ್ಲಂಘನೆಯು ಮರುಕಳಿಸಿದಲ್ಲಿ ದಂಡ ಮೊತ್ತ ರೂ.5000 ಜೊತೆಗೆ ಹೆಚ್ಚುವರಿಯಾಗಿ ರೂ.500 ಪ್ರತಿದಿನದಂತೆ ದಂಡ ವಿಧಿಸಲಾಗುವುದು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.