ಬೀದರ್ ವಿಮಾನಯಾನ ಸೇವೆ; 2 ವಾರದಲ್ಲಿ ವರದಿ ನೀಡುವಂತೆ ಸೂಚನೆ

|

Updated on: Jul 18, 2024 | 7:33 PM

ಬೀದರ್ ಮತ್ತು ಬೆಂಗಳೂರು ನಡುವೆ ವಿಮಾನಯಾನ ಸೇವೆ ಪುನಾರಂಭಿಸುವ ಕುರಿತಂತೆ 72 ಆಸನಗಳ ಚಿಕ್ಕ ವಿಮಾನಯಾನ ಸೇವೆ ಒದಗಿಸುವ ವಿವಿಧ ಕಂಪನಿಗಳ ಜೊತೆಯಲ್ಲಿ ಮಾತುಕತೆ ನಡೆಸಿ 2 ವಾರಗಳ ಒಳಗಾಗಿ ಪ್ರಸ್ತಾವನೆ ಸಲ್ಲಿಸಲು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಸೂಚಿಸಿದ್ದಾರೆ.

ಬೀದರ್ ವಿಮಾನಯಾನ ಸೇವೆ; 2 ವಾರದಲ್ಲಿ ವರದಿ ನೀಡುವಂತೆ ಸೂಚನೆ
ಬೀದರ್ ವಿಮಾನಯಾನ ಸೇವೆ; 2 ವಾರದಲ್ಲಿ ವರದಿ ನೀಡುವಂತೆ ಸೂಚನೆ
Follow us on

ಬೆಂಗಳೂರು, ಜು.18: ಸ್ಥಗಿತಗೊಂಡಿರುವ ಬೀದರ್–ಬೆಂಗಳೂರು ನಾಗರಿಕ ವಿಮಾನಯಾನ ಪುನಾರಂಭಿಸುವ ಕುರಿತಂತೆ ವಿವಿಧ ವಿಮಾನಯಾನ ಸೇವೆ ಪೂರೈಕೆದಾರರೊಂದಿಗೆ ಚರ್ಚಿಸಿ 2 ವಾರಗಳ ಒಳಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್(M. B. Patil) ಸ್ಪಷ್ಟ ಸೂಚನೆ ನೀಡಿದ್ದಾರೆ. ಬೀದರ್ ಉಸ್ತುವಾರಿ ಮತ್ತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ಅವರೊಂದಿಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಸೂಚನೆ ನೀಡಿದರು.

ಬಳಿಕ ಸಚಿವ ಈಶ್ವರ ಖಂಡ್ರೆ ಮಾತನಾಡಿ, ‘ಹಿಂದುಳಿದ ಕಲ್ಯಾಣ ಕರ್ನಾಟಕಕ್ಕೆ ಸೇರಿದ ಗಡಿ ಜಿಲ್ಲೆ ಬೀದರ್​ಗೆ ವಿಮಾನಯಾನ ಸೇವೆ ಕಲ್ಪಿಸಬೇಕು ಎಂಬ ಜನರ ಹೋರಾಟಕ್ಕೆ ಮಣಿದು 2020ರಲ್ಲಿ ಭಾರತೀಯ ವಾಯುಪಡೆಗೆ ಸೇರಿದ ವಿಮಾನ ನಿಲ್ದಾಣದಲ್ಲಿಯೇ ನಾಗರಿಕ ವಿಮಾನಯಾನ ಸೇವೆ ಆರಂಭಿಸಲಾಗಿತ್ತು. ಸ್ಥಗಿತಗೊಂಡಿದ್ದ ವಿಮಾನಯಾನ ಮತ್ತೆ 2022ರಲ್ಲಿ ಪುನಾರಂಭವಾಗಿತ್ತು. ಈಗ ಮತ್ತೆ ಕಳೆದ ಡಿಸೆಂಬರ್​ನಿಂದ ಸಂಪೂರ್ಣ ಸ್ಥಗಿತಗೊಂಡಿದೆ.

ಇದನ್ನೂ ಓದಿ:ವಿಮಾನ ದರ ಇಳಿಕೆ ಬಗ್ಗೆ ಸುಳಿವು ನೀಡಿದ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು

ಸೇವಾ ಪೂರೈಕೆದಾರ ಸಂಸ್ಥೆಗಳು, ತಮಗೆ ಉಡಾನ್ ಸಬ್ಸಿಡಿ ನಿಲ್ಲಿಸಿರುವ ಕಾರಣ ವಿಮಾನ ಸೇವೆ ಒದಗಿಸಲು ಸಾಧ್ಯವಿಲ್ಲ. ಮತ್ತೆ ಸಬ್ಸಿಡಿ ನೀಡುವುದಾದರೆ ಸೇವೆ ಒದಗಿಸಲು ಸಿದ್ಧ ಎನ್ನುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದಲೇ ಸಬ್ಸಿಡಿ ಹಣ ಭರಿಸುವ ಕುರಿತಂತೆ ವಿಮಾನಯಾನ ಸೇವಾ ಪೂರೈಕೆದಾರರೊಂದಿಗೆ ಮಾತುಕತೆ ನಡೆಸಿ, ಜಿಲ್ಲೆಯ ಜನರಿಗೆ ಅಗ್ಗದ ದರದಲ್ಲಿ ನಾಗರಿಕ ವಿಮಾನಯಾನ ಸೇವೆ ಪುನಾರಂಭಿಸಬೇಕು ಎಂದು ಹೇಳಿದರು.

ಇದಕ್ಕೆ ಸ್ಪಂದಿಸಿದ ಎಂ.ಬಿ. ಪಾಟೀಲ್, ಬೀದರ್ ಮತ್ತು ಬೆಂಗಳೂರು ನಡುವೆ ವಿಮಾನಯಾನ ಸೇವೆ ಪುನಾರಂಭಿಸುವ ಕುರಿತಂತೆ 72 ಆಸನಗಳ ಚಿಕ್ಕ ವಿಮಾನಯಾನ ಸೇವೆ ಒದಗಿಸುವ ವಿವಿಧ ಕಂಪನಿಗಳ ಜೊತೆಯಲ್ಲಿ ಮಾತುಕತೆ ನಡೆಸಿ 2 ವಾರಗಳ ಒಳಗಾಗಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು. ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ಡಾ. ಎನ್. ಮಂಜುಳಾ ಮತ್ತಿತರರು ಪಾಲ್ಗೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ