ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹೋರಾಟಕ್ಕೆ ಮುಹೂರ್ತ ನಿಗದಿ: ಎಲ್ಲಿಂದ? ಎಲ್ಲಿಯವರೆಗೆ ಪಾದಯಾತ್ರೆ?
ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆಪ್ಟೆಂಬರ್ 1ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿವರೆಗೆ ಬೃಹತ್ ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧರಿಸಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬಿಜೆಪಿ ಪಾದಯಾತ್ರೆಗೆ ಜೆಡಿಎಸ್ನವರು ಸಹ ಬೆಂಬಲ ನೀಡಲಿದ್ದಾರೆ ಎಂದವರು ತಿಳಿಸಿದ್ದಾರೆ.

ಬೆಂಗಳೂರು, ಆಗಸ್ಟ್ 25: ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸಿದ್ದ ವಿಪಕ್ಷ ಬಿಜೆಪಿ ಈಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಮುಂದಾಗಿದೆ. ಸೆಪ್ಟೆಂಬರ್ 1ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆಯನ್ನು ಬಿಜೆಪಿಗರು ನಡೆಸಲಿದ್ದು, ಈ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅಧಿಕೃತ ಮಾಹಿತಿ ನೀಡಿದ್ದಾರೆ. ಬಿಜೆಪಿ ಪಾದಯಾತ್ರೆಗೆ ಜೆಡಿಎಸ್ನವರು ಸಹ ಬೆಂಬಲ ನೀಡಲಿದ್ದಾರೆ ಎಂದವರು ತಿಳಿಸಿದ್ದಾರೆ.
ಪಾದಯಾತ್ರೆಗೆ ಚಾಲನೆ ನೀಡಲಿರುವ ಪ್ರಹ್ಲಾದ್ ಜೋಶಿ
190 ಕಿ.ಮೀ.ನಿಂದ 200 ಕಿ.ಮೀ. ಪಾದಯಾತ್ರೆಗೆ ನಿರ್ಧರಿಸಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇದಕ್ಕೆ ಚಾಲನೆ ನೀಡ್ತಾರೆ. ಸಮಾರೋಪದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಭಾಗಿಯಾಗ್ತಾರೆ. ನಾಗೇಂದ್ರ ರಾಜೀನಾಮೆ, ಮೀಸಲಾತಿ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ, ಬರ, ಖಾಲಿ ಹುದ್ದೆ ಭರ್ತಿ ಸೇರಿ ಹಲವು ವಿಚಾರ ತೆಗೆದುಕೊಂಡು ಜನರ ಬಳಿ ಹೋಗಲು ತೀರ್ಮಾನಿಸಿದ್ದೇವೆ ಎಂದವರು ತಿಳಿಸಿದ್ದಾರೆ.
ಇದನ್ನೂ ಓದಿ: ಸಂಪುಟಕ್ಕೆ ಮತ್ತೆ ಸರ್ಜರಿ? ಸಚಿವ ಸಂಪುಟದಲ್ಲಿ ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್ ಸಾಧ್ಯತೆ
ಪಾದಯಾತ್ರೆ ಮಾರ್ಗ
ರಾಯಚೂರು ಜಿಲ್ಲೆಯ ಗುರುಗುಂಟದಿಂದ ಪಾದಯಾತ್ರೆ ಆರಂಭವಾಗಲಿದ್ದು, ಗುರುಗುಂಟ- ಲಿಂಗಸೂಗೂರು – ಮಸ್ಕಿ – ಸಿಂಧನೂರು -ಶಿರಗುಪ್ಪ- ತೆಕ್ಕಲಕೋಟೆ- ಸಿಂದಗೇರಿ ಮಾರ್ಗವಾಗಿ ಬಳ್ಳಾರಿ ತಲುಪಲಿದೆ. 8 ರಿಂದ 9 ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಯಲಿದ್ದು, ನಾಲ್ಕು ಎಸ್ಟಿ ಕ್ಷೇತ್ರಗಳ ಮೂಲಕ ಸಾಗಲಿದೆ.
ಪಾದಯಾತ್ರೆ ಸಂಬಂಧ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ನಾಯಕರು ಮಹತ್ವದ ಸಭೆ ನಡೆಸಿದ್ದು, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಸಂಸದ ಗೋವಿಂದ ಕಾರಜೋಳ, ಶಾಸಕರಾದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಜನಾರ್ದನ ರೆಡ್ಡಿ, ಡಾ. ಶೈಲೇಂದ್ರ ಬೆಲ್ದಾಳೆ, ಮಾನಪ್ಪ ವಜ್ಜಲ್, ಶಿವರಾಜ್ ಪಾಟೀಲ್, ವಿಧಾನಸಭೆ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, MLC ಸಿ.ಟಿ.ರವಿ, ಮಾಜಿ ಸಚಿವರಾದ ಶ್ರೀರಾಮುಲು, ರಾಜುಗೌಡ ಸೇರಿ ಹಲವರು ಭಾಗಿಯಾಗಿದ್ದರು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.




