ಚುನಾವಣೆ ಸಿದ್ಧತೆ ಆರಂಭಿಸಿದ ಬಿಜೆಪಿ: ವಿವಿಧ ಜಿಲ್ಲೆಗಳಿಗೆ ಅರುಣ್ ಸಿಂಗ್ ಭೇಟಿ

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲು ಮುಂದಾಗಿದ್ದಾರೆ. ಮೊದಲ ಹಂತದಲ್ಲಿ ಹಳೇ ಮೈಸೂರು ಭಾಗದ ಜಿಲ್ಲೆಗಳಿಗೆ ಅರುಣ್ ಸಿಂಗ್ ಭೇಟಿ ನೀಡಲಿದ್ದಾರೆ.

ಚುನಾವಣೆ ಸಿದ್ಧತೆ ಆರಂಭಿಸಿದ ಬಿಜೆಪಿ: ವಿವಿಧ ಜಿಲ್ಲೆಗಳಿಗೆ ಅರುಣ್ ಸಿಂಗ್ ಭೇಟಿ
ಅರುಣ್ ಸಿಂಗ್
Edited By:

Updated on: Aug 30, 2021 | 6:48 PM

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿಯಿರುವಂತೆಯೇ ಬಿಜೆಪಿ ಸಿದ್ಧತೆ ಆರಂಭಿಸಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲು ಮುಂದಾಗಿದ್ದಾರೆ. ಮೊದಲ ಹಂತದಲ್ಲಿ ಹಳೇ ಮೈಸೂರು ಭಾಗದ ಜಿಲ್ಲೆಗಳಿಗೆ ಅರುಣ್ ಸಿಂಗ್ ಭೇಟಿ ನೀಡಲಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದ ಅರುಣ್ ಸಿಂಗ್ ಅವರನ್ನು ಕಾರ್ಯಕರ್ತರು ಆದರದಿಂದ ಬರಮಾಡಿಕೊಂಡರು. ಬೆಂಗಳೂರಿನಿಂದ ಮೈಸೂರಿಗೆ ಅರುಣ್ ಸಿಂಗ್ ರಸ್ತೆ ಮಾರ್ಗದಲ್ಲಿ ತೆರಳಿದರು. ಮೈಸೂರಿನಲ್ಲಿ ನಡೆಯಲಿರುವ ವಿವಿಧ ಸಭೆಗಳಲ್ಲಿ ಅರುಣ್ ಸಿಂಗ್ ಭಾಗಿಯಾಗಲಿದ್ದಾರೆ. ಮೈಸೂರಿನಲ್ಲಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆ ನಡೆಯಲಿದೆ. ಸಭೆಯಲ್ಲಿ ಮೈಸೂರು, ಮೈಸೂರು ಗ್ರಾಮಾಂತರ, ಚಾಮರಾಜನಗರ ಜಿಲ್ಲೆಯ ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಪಾಲ್ಗೊಳ್ಳಲಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅರುಣ್ ಸಿಂಗ್, ಸಚಿವ ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳ ಭರ್ತಿಗೆ ವರಿಷ್ಠರ ಜೊತೆಗೆ ಮುಖ್ಯಮಂತ್ರಿ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. 2023ರ ಚುನಾವಣೆಯಲ್ಲಿ ಗೆಲ್ಲುವುದೇ ನಮ್ಮ ಮುಂದಿರುವ ಸವಾಲು. ಹೀಗಾಗಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಲು ನಿರ್ಧರಿಸಿದ್ದೇನೆ ಎಂದು ಹೇಳಿದರು.

ವಿಮಾನ ನಿಲ್ದಾಣದ ಟರ್ಮಿನಲ್ ಹೊರಗೆ ಕಾರ್ಯಕರ್ತರ ಜೊತೆಗೆ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ನಿಂತಿರುವುದು ಕಂಡು ಅಚ್ಚರಿಪಟ್ಟರು. ಸ್ವಾಗತಕ್ಕಾಗಿ ಬಿಜೆಪಿ ಉಪಾಧ್ಯಕ್ಷರೇ ಬಂದಿದ್ದಾರೆ ಎಂದು ಹಾಸ್ಯ ಚಟಾಕಿ ಹಾರಿಸಿದರು. ನೀವು ಕಲಬುರ್ತಿಯಿಂದ ಬರುತ್ತಿರುವ ವಿಷಯ ತಿಳಿಯಿತು. ಹೀಗಾಗಿ ಇಲ್ಲಿಗೆ ಬಂದು ನಿಂತಿದ್ದೆ ಎಂದು ವಿಜಯೇಂದ್ರ ಹೇಳಿದರು.

(BJP Karnataka Incharge Arun Singh Visits Mysore to Prepare party for Upcoming Elections)

Web contact

TV9 Kannada

Read More
Follow Us