ಬೆಂಗಳೂರು ಏರ್​ಪೋರ್ಟ್​ನಲ್ಲಿ ಬಾಂಬ್ ಬೆದರಿಕೆ ಹಾಕಿದ ಯುವಕನ ಬಂಧನ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಹಾಕಿದ ಪ್ರಯಾಣಿಕ ಅಬು ಅಕಿಲ್ ಅಜರ್ ಚಾದ್ ಎಂಬಾತನನ್ನು ಬಂಧಿಸಲಾಗಿದೆ. ಬ್ಯಾಗ್ ತಪಾಸಣೆಯಿಂದ ಅಸಮಾಧಾನಗೊಂಡಿದ್ದ ಈತ, ತನ್ನ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ಸುಳ್ಳು ಹೇಳಿದ್ದ. ಪರಿಶೀಲನೆಯಲ್ಲಿ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ. ಸದ್ಯ, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು ಏರ್​ಪೋರ್ಟ್​ನಲ್ಲಿ ಬಾಂಬ್ ಬೆದರಿಕೆ ಹಾಕಿದ ಯುವಕನ ಬಂಧನ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬಂಧಿತ ಆರೋಪಿ ಅಬು ಅಕಿಲ್ ಅಜರ್ ಚಾದ್
Image Credit source: tv9
Edited By:

Updated on: Jan 30, 2026 | 2:16 PM

ದೇವನಹಳ್ಳಿ, ಜನವರಿ 30: ಬೆಂಗಳೂರು (Bangalore) ಅಹಮದಾಬಾದ್‌ ವಿಮಾನದ ಪ್ರಯಾಣಿಕನೊಬ್ಬ ಬ್ಯಾಗ್​ನಲ್ಲಿ ಬಾಂಬ್ ಇದೆ ಎಂದು ಬೆದರಿಕೆ (Bomb Threat) ಹಾಕಿದ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಶುಕ್ರವಾರ ನಡೆದಿದೆ. ಪರಿಣಾಮ ಕೆಲ ಕಾಲ ಏರ್​ಪೋರ್ಟ್​​ನಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಯಿತು. ಸದ್ಯ, ಬಾಂಬ್ ಬೆದರಿಕೆ ಹಾಕಿದ ಬೆಂಗಳೂರು ಮೂಲದ ಅಬು ಅಕಿಲ್ ಅಜರ್ ಚಾದ್ ಎಂಬಾತನನ್ನು ಏರ್‌ಪೋರ್ಟ್ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಆಗಮಿಸಿದ್ದ ಅಬು ಅಕಿಲ್, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವೇಶದ ವೇಳೆ ತಪಾಸಣೆಗೆ ಒಳಗಾಗಿದ್ದ. ಈ ವೇಳೆ ಭದ್ರತಾ ನಿಯಮಾನುಸಾರ ಎರಡು ಹಂತಗಳಲ್ಲಿ ಬ್ಯಾಗ್ ಪರಿಶೀಲನೆ ನಡೆಸಲಾಗಿತ್ತು. ಇದರಿಂದ ಅಸಮಾಧಾನಗೊಂಡ ಅಬು ಅಕಿಲ್, ತನ್ನ ಬ್ಯಾಗ್‌ನಲ್ಲಿ ಎರಡು ಸಣ್ಣ ಬಾಂಬ್‌ಗಳಿವೆ ಎಂದು ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಬೆದರಿಕೆ ವಿಚಾರ ತಿಳಿದ ಕೂಡಲೇ ಎಚ್ಚೆತ್ತ ಏರ್‌ಪೋರ್ಟ್ ಭದ್ರತಾ ಸಿಬ್ಬಂದಿ, ಆರೋಪಿಯನ್ನು ತಕ್ಷಣ ವಶಕ್ಕೆ ಪಡೆದು, ಬ್ಯಾಗ್ ಅನ್ನು ಸಂಪೂರ್ಣವಾಗಿ ಪರಿಶೀಲಿಸಿದರು. ಪರಿಶೀಲನೆಯಲ್ಲಿ ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ. ಆದರೂ ಬಾಂಬ್ ಬೆದರಿಕೆ ಹಾಕಿದ ಕಾರಣ ಆರೋಪಿಯನ್ನು ಕೆಂಪೇಗೌಡ ಏರ್‌ಪೋರ್ಟ್ ಪೊಲೀಸ್ ಠಾಣೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಈ ಸಂಬಂಧ ಏರ್‌ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ವಿಮಾನ ನಿಲ್ದಾಣದಲ್ಲಿ ಇಂತಹ ಬೆದರಿಕೆಗಳನ್ನು ಲಘುವಾಗಿ ಪರಿಗಣಿಸಲಾಗುವುದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇತ್ತೀಚಿನ ದಿನಗಳಲ್ಲಿ ಹುಸಿ ಬಾಂಬ್ ಬೆದರಿಕೆಗಳು ಹೆಚ್ಚಾಗಿವೆ. ಕಳೆದ ನವೆಂಬರ್​​ನಲ್ಲಿ ಉಗ್ರ ಸಂಘಟನೆ ಹೆಸರಿನಲ್ಲಿ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿತ್ತು. ನವೆಂಬರ್ 30 ರಂದು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ವಿಮಾನ ನಿಲ್ದಾಣ ಮತ್ತು ಪ್ರಮುಖ ಮಾಲ್‌ಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ರವಾನೆಯಾಗಿತ್ತು. ಇದೇ ತಿಂಗಳ (ಜನವರಿ) 14ರಂದು ವಿಮಾನ ನಿಲ್ದಾಣದ ಟರ್ಮಿನಲ್‌ಗಳಲ್ಲಿ ಆತ್ಮಾಹುತಿ ದಾಳಿ ನಡೆಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿತ್ತು.

ಇದನ್ನೂ ಓದಿ: ಚಾಮರಾಜನಗರ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ನೌಕರರಿಗೆ ರಜೆ ಘೋಷಣೆ

ಕಳೆದ ವರ್ಷ ‘ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನದ ವೇಳೆಯೂ ಡ್ರೋನ್ ದಾಳಿಯ ಬೆದರಿಕೆ ಇ-ಮೇಲ್ ಬಂದಿತ್ತು. 2025 ರ ಅಕ್ಟೋಬರ್ 22 ರಿಂದ 28 ರ ಅವಧಿಯಲ್ಲಿ ಸತತವಾಗಿ ಹಲವು ಬಾರಿ ಹುಸಿ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದವು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us