ಬ್ರ್ಯಾಂಡ್​ ಬೆಂಗಳೂರು ನಿರ್ಮಾಣಕ್ಕೆ ಸಮಿತಿ ರಚನೆ : ಡಿಎಸಿಂ ಡಿಕೆ ಶಿವಕುಮಾರ್​

ಬೆಂಗಳೂರಿಗೆ ಹೊಸ ರೂಪ ನೀಡಿ, ಬ್ರ್ಯಾಂಡ್ ಬೆಂಗಳೂರು ನಿರ್ಮಾಣಕ್ಕೆ ಬೆಂಗಳೂರಿನ 42 ಪ್ರಮುಖ ವ್ಯಕ್ತಿಗಳ ಜೊತೆ ಇಂದು (ಜೂ.17) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಮಹತ್ವದ ಸಭೆ ನಡೆಸಿದರು.

ಬೆಂಗಳೂರು: ಬೆಂಗಳೂರಿಗೆ (Bengaluru) ಹೊಸ ರೂಪ ನೀಡಿ, ಬ್ರ್ಯಾಂಡ್ ಬೆಂಗಳೂರು (Brand Bengaluru) ನಿರ್ಮಾಣಕ್ಕೆ ಬೆಂಗಳೂರಿನ 42 ಪ್ರಮುಖ ವ್ಯಕ್ತಿಗಳ ಜೊತೆ ಇಂದು (ಜೂ.17) ಮೊದಲ ಸಭೆ ಮಾಡಲಾಗಿದೆ. ಮೊದಲು ಎಲ್ಲಾ ಪಕ್ಷಗಳ ಶಾಸಕರ ಅಭಿಪ್ರಾಯ ಪಡೆದಿದ್ದೆ. ಈಗ ಕೈಗಾರಿಕೆ, ಬಂಡವಾಳ ಹೂಡಿಕೆದಾರರ ಅಭಿಪ್ರಾಯ ಪಡೆದಿದ್ದೇನೆ. ಮುಂದೆ ಮತ್ತೊಂದು ಹಂತದ ಸಭೆ ಮಾಡುತ್ತೇನೆ. ಮುಂದಿನ ವಾರ ಸಾರ್ವಜನಿಕರ ಅಭಿಪ್ರಾಯ ಪಡೆಯಲಾಗುವುದು. ಅಧಿಕಾರಿಗಳು ಹಾಗೂ ಬೆಂಗಳೂರಿನ ಪ್ರಮುಖರನ್ನು ಸೇರಿ ಒಂದು ಸಮಿತಿ ರಚಿಸಿ, ಬೆಂಗಳೂರಿನ ಅಭಿವೃದ್ಧಿಗೆ ಆರು ತಿಂಗಳಲ್ಲಿ ನೀಲನಕ್ಷೆ, ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ (DK Shivakumar) ತಿಳಿಸಿದರು.

‘ಬ್ರ್ಯಾಂಡ್​ ಬೆಂಗಳೂರು’ ಹೆಸರಿನಡಿ ಇಂದು (ಜೂ.17) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಿದರು. ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇಂದು ಸಭೆಗೆ ಬಂದವರು ತಮ್ಮ ಸ್ವಾರ್ಥ ಬಿಟ್ಟು, ಸಮಾಜಕ್ಕೆ ತಮ್ಮ ಕೊಡುಗೆ ನೀಡಲು ಸರ್ಕಾರದ ಜತೆ ಕೈ ಜೋಡಿಸಿ ಸಲಹೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ವಿನಯ ಗುರೂಜಿ ಆಶ್ರಮದಲ್ಲಿ ಡಿಕೆ ಶಿವಕುಮಾರ್​ ಮುಂದಿನ ಸಿಎಂ ಕೂಗು

ಹೈ ಡೆನ್ಸಿಟಿ ಕಾರಿಡಾರ್, ಕಸ ಹಾಗೂ ಕೊಳಚೆ ನೀರು ನಿರ್ವಹಣೆ, ಕೊಳಚೆ ನೀರು ಪರಿಷ್ಕರಣೆ ಮತ್ತು ಮರುಬಳಕೆ, ಕಾವೇರಿ ನೀರು ಪೂರೈಕೆ, ಮೆಟ್ರೋ ಸಂಪರ್ಕ ವಿಸ್ತರಣೆ, ಮೊನೊ ರೈಲು, ಉಪನಗರ ರೈಲು, ಉತ್ತಮ ಗುಣಮಟ್ಟದ ಶಿಕ್ಷಣ, ಕೊಳಗೇರಿ ಪ್ರದೇಶ ಅಭಿವೃದ್ಧಿ, ರಸ್ತೆ ಅಗಲೀಕರಣ, ಎಲಿವೇಟೆಡ್ ರಸ್ತೆ, 20 ಪ್ರಮುಖ ಜಕ್ಷನ್ ರಸ್ತೆಗಳ ಬಗ್ಗೆ ಗಮನ, ನೈಸ್ ರಸ್ತೆಯನ್ನು ವರ್ತುಲ ರಸ್ತೆ ಆಗಿ ಮಾರ್ಪಾಡು, ಪಾದಚಾರಿ ಮಾರ್ಗ ಸುಧಾರಣೆ, ನಗರದಲ್ಲಿ ಸುರಂಗ ರಸ್ತೆಗಳ ನಿರ್ಮಾಣ, ಕೆಲವು ಪ್ರದೇಶ 24/7 ತೆರೆಯಲು, ವಾಹನ ನಿಲುಗಡೆ, ಭ್ರಷ್ಟಾಚಾರ ನಿಯಂತ್ರಣ ಸೇರಿದಂತೆ ಅನೇಕ ಸಲಹೆ ನೀಡಿದ್ದಾರೆ ಎಂದು ಹೇಳಿದರು.

ನಮ್ಮ ಆರ್ಥಿಕತೆ ಗಮನದಲ್ಲಿ ಇಟ್ಟುಕೊಂಡು ಯೋಜನೆ ರೂಪಿಸಬೇಕು. ಬೆಂಗಳೂರಿನ ಸ್ವಾಭಿಮಾನ, ಗೌರವ ಉಳಿಸಲು ಸಲಹೆ ಕೇಳಿದ್ದೇನೆ. ನಾನು ಕೆಲವು ಸಲಹೆ ಒಪ್ಪುತ್ತೇನೆ. ಎಲ್ಲರೂ ನಮಗೆ ಸಲಹೆ ನೀಡಿದ್ದು, ಸ್ಯಾಟಲೈಟ್ ಟೌನ್ ನಿರ್ಮಾಣ ಮಾಡಬೇಕು ಎಂದು ಹೇಳಿದ್ದಾರೆ. ಫೆರಿಫೆರಲ್ ರಿಂಗ್ ರಸ್ತೆ ಜಾರಿಗೆ ಒತ್ತು ನೀಡಲಾಗುವುದು. ಬೆಂಗಳೂರು ಯೋಜಿತ ನಗರ ಅಲ್ಲ. ಒಂದೇ ದಿನದಲ್ಲಿ ಬದಲಾವಣೆ ಸಾಧ್ಯವಿಲ್ಲ. ಎಲ್ಲರ ಕಷ್ಟಪಟ್ಟು ಉಳಿಸಿಕೊಂಡಿರುವ ಆಸ್ತಿ ಬಗ್ಗೆ ಗೌರವಿಸಬೇಕು ಎಂದರು.

ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಸೃಷ್ಟಿ ಹಾಗೂ 2 ಮತ್ತು 3ನೇ ದರ್ಜೆ ನಗರಗಳ ಬಗ್ಗೆ ಗಮನಹರಿಸಿ ಬೆಂಗಳೂರಿನ ಮೇಲಿನ ಒತ್ತಡ ಇಳಿಸಬೇಕಿದೆ. ಈ ಇಲಾಖೆ ಜವಾಬ್ದಾರಿ ವಹಿಸಿಕೊಂಡ ನಂತರ ನನ್ನ ಮೇಲೆ, ನಮ್ಮ ಸರ್ಕಾರ, ಮುಖ್ಯಮಂತ್ರಿಗಳ ಮೇಲೆ ಇವರು, ಜನರು ನಂಬಿಕೆ ಇಟ್ಟಿದ್ದಾರೆ. ನಾವು ಆ ನಂಬಿಕೆ ಉಳಿಸಿಕೊಳ್ಳಲು ಕೆಲಸ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನ ಅಭಿವೃದ್ಧಿ ವಿಚಾರವಾಗಿ ಟಾಸ್ಕ್ ಫೋರ್ಸ್ ರಚನೆ ಬಗ್ಗೆ ಚರ್ಚೆ ಆಗಿದೆಯೇ ಎಂದು ಕೇಳಿದಾಗ, “ಅನೇಕ ವರ್ಗ, ಸಂಘ ಸಂಸ್ಥೆಗಳ ಪ್ರಮುಖರ ಜೊತೆ ಈ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಅವರು ಈ ಬಗ್ಗೆ ಸಲಹೆ ನೀಡಿದ್ದು, ನಾನು ಸಾರ್ವಜನಿಕ ಅಭಿಪ್ರಾಯ ಪಡೆದು ನಂತರ ಸರ್ಕಾರದ ವತಿಯಿಂದ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

“ಬ್ರಾಂಡ್ ಬೆಂಗಳೂರು” ಸಭೆಯಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಬೈರತಿ ಸುರೇಶ್, ಮಾಜಿ ಸಿಎಂ ಡಿ ವಿ ಸದಾನಂದ ಗೌಡ, ಉದ್ಯಮಿಗಳಾದ ಆರ್ ಕೆ ಮಿಶ್ರಾ, ಇರಫಾನ್, ಕಿರಣ್ ಮುಜುಂದಾರ್ ಷಾ, ಪ್ರಶಾಂತ್, ಗೀತಾಂಜಲಿ ಕಿರ್ಲೊಸ್ಕರ್, ಡಾ ಮಧುಕರ್ ಕಾಮತ್, ಎಂ ಆರ್ ಜೈಶಂಕರ್, ರಾಜಾ ಬಾಗ್ಮನೆ, ಉಲ್ಲಾಸ್ ಕಾಮತ್, ಅರುಣ್ ಚಿಟ್ಟಿಲಾಪಿಲ್ಲಿ, ಕ್ರಿಕೆಟಿಗ ಬ್ರಿಜೇಶ್ ಪಟೇಲ್, ರಾಜ್ಯಸಭೆ ಸದಸ್ಯ ಜಿ ಸಿ ಚಂದ್ರಶೇಖರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬಿಡಿಎ ಅಧ್ಯಕ್ಷ ರಾಕೇಶ್ ಸಿಂಗ್, ನಿವೃತ್ತ ಐಎಎಸ್ ಅಧಿಕಾರಿಗಳಾದ ಬಿ ಎಸ್ ಪಾಟೀಲ್, ಸಿದ್ದಯ್ಯ, ರವಿಚಂದ್ರ ಮತ್ತಿತರರು ಭಾಗವಹಿಸಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ  ಕ್ಲಿಕ್ ಮಾಡಿ

Published On - 7:14 pm, Sat, 17 June 23

Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Follow Us