AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಳಿಗಳೂ ಸಹ ಜೀವ ಸಂಪತ್ತು, ಅಪಘಾತದಲ್ಲಿ ಸತ್ತರೂ ಪರಿಹಾರ ಕೊಡ್ಬೇಕು ಎಂದ ಕೋರ್ಟ್, ಏನಿದು ಕೇಸ್?

ಅಪಘಾತದ ವೇಳೆ ವಾಹನದಲ್ಲಿದ್ದ ಕೋಳಿಗಳಿಗೆ ನೀಡಿದ್ದ ಪರಿಹಾರ ಮೊತ್ತ ಹೆಚ್ಚಳ ಮಾಡಬೇಕು ಎಂದು ಮಾಲೀಕ ಕೆ.ವೀರನಾರಾಯಣ ಸ್ವಾಮಿ ಮತ್ತು ಕೋಳಿಗಳಿಗೆ ಪರಿಹಾರ ನೀಡಲು ಸೂಚನೆ ನೀಡಿದ್ದ ಮೋಟಾರು ವಾಹನ ಅಪಘಾತಗಳ ಪರಿಹಾರ ನ್ಯಾಯಾಧಿಕರಣದ ಆದೇಶ ಪ್ರಶ್ನಿಸಿ ರಿಲಯನ್ಸ್ ಜನರಲ್ ಇನ್ಶೂರೆನ್ಸ್ ಕಂಪನಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಇದನ್ನು ವಿಚಾರಣೆ ನಡೆಸಿದ ಕೋರ್ಟ್, ಮಹತ್ವದ ಆದೇಶ ಹೊರಡಿಸಿದೆ. ಹಾಗಾದ್ರೆ ಏನಿದು ಪ್ರಕರಣ? ನಡೆದಿದ್ದೆಲ್ಲಿ?

ಕೋಳಿಗಳೂ ಸಹ ಜೀವ ಸಂಪತ್ತು, ಅಪಘಾತದಲ್ಲಿ ಸತ್ತರೂ ಪರಿಹಾರ ಕೊಡ್ಬೇಕು ಎಂದ ಕೋರ್ಟ್, ಏನಿದು ಕೇಸ್?
ಕೋಳಿಗಳು (ಪ್ರಾತಿನಿಧಿಕ ಚಿತ್ರ)
ರಮೇಶ್ ಬಿ. ಜವಳಗೇರಾ
|

Updated on: Aug 11, 2026 | 7:47 PM

Share

ಬೆಂಗಳೂರು, (ಆಗಸ್ಟ್ 11): ಸರಕು ಸಾಗಣೆ ವಾಹನದಲ್ಲಿ ಸಾಗಿಸುತ್ತಿದ್ದ ಕೋಳಿಗಳು (Broiler chickens) ಅಪಘಾತದಲ್ಲಿ ಸಾವಿಗೀಡಾದರೆ, ಅವುಗಳನ್ನು ‘ಜೀವಸಂಪತ್ತು’ ಹಾಗೂ ‘ಸರಕು’ ಎಂದು ಪರಿಗಣಿಸಬೇಕು ಎಂದು ಧಾರವಾಡ ಹೈಕೋರ್ಟ್ ಪೀಠ (Dharwad  High Court) ಅಭಿಪ್ರಾಯಪಟ್ಟಿದೆ. ಅಲ್ಲದೇ ಮೋಟಾರು ವಾಹನ ಕಾಯ್ದೆ ಅಡಿ ಕೋಳಿಗಳು ಸಹ ಸಾಕುಪ್ರಾಣಿಗಳ ವ್ಯಾಪ್ತಿಗೆ ಬರಲಿದ್ದು, ಅವುಗಳನ್ನು ಸರಕು ಎಂದು ಪರಿಗಣಿಸಿ ಮಾಲೀಕರಿಗೆ ಅಪಘಾತ ಪರಿಹಾರ ವಿಧಿಸಬೇಕು ಎಂದು ಹೈಕೋರ್ಟ್ ಹೇಳಿದೆ.

ಕರ್ನಾಟಕ ಮೋಟಾರು ವಾಹನ ನಿಯಮಗಳಲ್ಲಿ ಕೋಳಿಯನ್ನು ಉಲ್ಲೇಖಿಸಿಲ್ಲ. ಆದರೆ, ಮೋಟಾರು ವಾಹನ ಕಾಯ್ದೆ-1988ರ ಸೆಕ್ಷನ್ 2(13) ರ ಪ್ರಕಾರ ‘ಸರಕು’ ಎಂಬ ಪದವು ಜೀವಸಂಪತ್ತನ್ನು ಒಳಗೊಂಡಿರುತ್ತದೆ. ಕೋಳಿಗಳೂ ಸಹ ಜೀವವಿರುವ ಪ್ರಾಣಿ/ಪಕ್ಷಿಗಳಾಗಿರುವುದರಿಂದ ಅವುಗಳನ್ನು ಜೀವಸಂಪತ್ತು ಹಾಗೂ ಸರಕು ಎಂದು ಪರಿಗಣಿಸಬೇಕು ಎಂದು ಪೀಠ ತಿಳಿಸಿದೆ.ಅಲ್ಲದೆ, ಬಳ್ಳಾರಿಯ ಮೋಟಾರು ವಾಹನ ಅಪಘಾತಗಳ ಪರಿಹಾರ ನ್ಯಾಯಾಧಿಕರಣ ನೀಡಿದ್ದ 4,51,000 ರೂಪಾಯಿಗಳ ಪರಿಹಾರ ಮೊತ್ತವನ್ನು ಹೈಕೋರ್ಟ್​​ ಎತ್ತಿಹಿಡಿದಿದೆ. ಆದರೆ, ನ್ಯಾಯಾಧಿಕರಣ ವಿಧಿಸಿದ್ದ ಶೇ.7ರಷ್ಟು ಬಡ್ಡಿದರವನ್ನು ಶೇ.6ಕ್ಕೆ ಇಳಿಸಿ ಆದೇಶಿಸಿದೆ.

ಇದನ್ನೂ ಓದಿ: ಹಸುಗಳಿಂದ ಟ್ರಾಫಿಕ್​​ ಜಾಮ್​​ ಆಗಿದ್ದಕ್ಕೆ ಅವುಗಳ ಮಾಲೀಕನ ಮೇಲೆ FIR!: ಏರ್​ಪೋರ್ಟ್ ಸಂಚಾರ ಠಾಣೆಯಲ್ಲಿ ಪ್ರಕರಣ

ಅಪಘಾತದ ವೇಳೆ ವಾಹನದಲ್ಲಿದ್ದ ಕೋಳಿಗಳಿಗೆ ನೀಡಿದ್ದ ಪರಿಹಾರ ಮೊತ್ತ ಹೆಚ್ಚಳ ಮಾಡಬೇಕು ಎಂದು ಮಾಲೀಕ ಕೆ.ವೀರನಾರಾಯಣ ಸ್ವಾಮಿ ಮತ್ತು ಕೋಳಿಗಳಿಗೆ ಪರಿಹಾರ ನೀಡಲು ಸೂಚನೆ ನೀಡಿದ್ದ ಮೋಟಾರು ವಾಹನ ಅಪಘಾತಗಳ ಪರಿಹಾರ ನ್ಯಾಯಾಧಿಕರಣದ ಆದೇಶ ಪ್ರಶ್ನಿಸಿ ರಿಲಯನ್ಸ್‌ ಜನರಲ್ ಇನ್ಸೂರೆನ್ಸ್ ಕಂಪನಿ ಸಲ್ಲಿಸಿದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಬಿ.ಗೀತಾ ಅವರಿದ್ದ ಧಾರವಾಡ ಪೀಠ ಈ ಆದೇಶ ನೀಡಿದೆ. ಅಲ್ಲದೇ, ಮೃತ ಕೋಳಿಗಳಿಗೂ ವಿಮಾ ಕಂಪನಿಯು ಪರಿಹಾರ ನೀಡುವ ಬಾಧ್ಯಸ್ಥನಾಗಿರಲಿದೆ ಎಂದು ಪೀಠ ಹೇಳಿದೆ.

ಅಪಘಾತದಲ್ಲಿ ಕೋಳಿಗಳು ಸತ್ತ ಕಾರಣ ಮಾಲೀಕನಿಗೆ 4.51 ಲಕ್ಷ ರೂ. ಪರಿಹಾರ ನೀಡುವಂತೆ ಅಪಘಾತ ಪರಿಹಾರ ನ್ಯಾಯಮಂಡಳಿ ನೀಡಿದ್ದ ಆದೇಶ ಪ್ರಶ್ನಿಸಿ ವಿಮಾ ಕಂಪನಿ ಸಲ್ಲಿಸಿದ್ದ ಮೇಲ್ಮನವಿಯನ್ನು ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿ, ವಜಾಗೊಳಿಸಿರುವ ನ್ಯಾಯಮೂರ್ತಿ ಕೆ.ಬಿ. ಗೀತಾ ಅವರಿದ್ದ ಏಕಸದಸ್ಯ ನ್ಯಾಯಪೀಠ, ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳಡಿ ಜಾನುವಾರು ಎಂದರೆ ಎಮ್ಮೆ, ಹಸು, ಕುರಿ, ಮೇಕೆ ಮುಂತಾದ ವುಗಳು ಮಾತ್ರ ಬರುತ್ತವೆ. ಅದರಲ್ಲಿ ಕೋಳಿಗಳ ಹೆಸರಿಲ್ಲ ನಿಜ. ಆದರೆ, ಕಾಯ್ದೆ ಅಡಿ ಸರಕುಗಳು ಎಂದು ಗುರುತಿಸಲಾದ ವಿಭಾಗದಲ್ಲಿ ಪ್ರಾಣಿ ಮತ್ತು ಪಕ್ಷಿಗಳು ಬರುತ್ತವೆ. ಆದ್ದರಿಂದ, ಕೋಳಿ ಕೂಡ ಪರಿಹಾರದ ವ್ಯಾಪ್ತಿಗೆ ಬರುತ್ತದೆ ಎಂದು ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ

ಬಳ್ಳಾರಿಯ ಆಂಧ್ರಹಾಳ ಗ್ರಾಮದ ‘ಬಾಲಾಜಿ ಪೌಲ್ಟ್ರಿ ಫಾರ್ಮ್’ ಮಾಲೀಕರಾದ ಕೆ.ವೀರ ನಾರಾಯಣಸ್ವಾಮಿ ಅವರು 2013ರ ಜೂನ್ 18ರಂದು ಚಳ್ಳಕೆರೆ ಪೌಲ್ಟ್ರಿ ಫಾರ್ಮ್‌ನಿಂದ 2,250 ಬ್ರಾಯ್ಲರ್ ಕೋಳಿಗಳನ್ನು ಖರೀದಿಸಿ ಐಚರ್ ವಾಹನದಲ್ಲಿ ಸಾಗಿಸುತ್ತಿದ್ದರು. ಜೂನ್ 19ರಂದು ಮುಂಜಾನೆ 4 ಗಂಟೆ ಸುಮಾರಿಗೆ ಅಯ್ಯಗರಲಪಳ್ಳಿ – ಸೆಟ್ಟೂರು ರಸ್ತೆಯಲ್ಲಿ ವಾಹನ ಅಪಘಾತಕ್ಕೀಡಾಗಿ ಪಲ್ಟಿಯಾಯಿತು. ಪರಿಣಾಮ, ಸುಮಾರು 2,000 ಕೋಳಿಗಳು ಸ್ಥಳದಲ್ಲೇ ಸಾವಿಗೀಡಾದವು ಮತ್ತು 250 ಕೋಳಿಗಳನ್ನು ಸ್ಥಳೀಯರು ತೆಗೆದುಕೊಂಡು ಹೋಗಿದ್ದರು.

ಅಪಘಾತದಲ್ಲಿ ಆದ ನಷ್ಟಕ್ಕಾಗಿ 5,90,000 ರೂ.ಗಳ ಪರಿಹಾರ ನೀಡಬೇಕು ಎಂದು ಕೋರಿ ವೀರ ನಾರಾಯಣಸ್ವಾಮಿ ನ್ಯಾಯಾಧಿಕರಣಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಧಿಕರಣ ಕೋಳಿಗಳಿಗೂ ಪರಿಹಾರ ನೀಡಲು ಸೂಚನೆ ನೀಡಿತ್ತು. ಇದನ್ನು ಪ್ರಶ್ನಿಸಿ ವಿಮಾ ಕಂಪನಿ ಮತ್ತು ಹೆಚ್ಚುವರಿ ಪರಿಹಾರ ಕೋರಿ ವೀರನಾರಾಯಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us