
ಬೆಂಗಳೂರು, ಜೂನ್ 24: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಆರ್ಸಿಬಿ ಅಭಿಮಾನಿಗಳು (Chinnaswamy stadium Stampede) ಮೃತಪಟ್ಟಿದ್ದಾರೆ. ಆರ್ಸಿಬಿ (RCB) ತಂಡದ ಗೆಲುವಿನ ವಿಜಯೋತ್ಸವ ಆಚರಿಸಬೇಕಾದ ಕನ್ನಡಿಗರು ಶೋಕಾಚರಣೆ ಆಚರಿಸುವಂತಾಗಿತ್ತು. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿಜಯೋತ್ಸವ ಸಂಭ್ರಮಾಚರಣೆಯನ್ನು ವೀಕ್ಷಿಸಲು ಬಂದ ಅಭಿಮಾನಿಗಳು ಕಾಲ್ತುಳಿತದಲ್ಲಿ ಪ್ರಾಣಬಿಟ್ಟರು. ಕಾಲ್ತುಳಿತ ವಿಚಾರ ದೇಶಾದ್ಯಂತ ಚರ್ಚೆಯಾಯಿತು. ಈ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಸೇರಿದಂತೆ ಐದು ಮಂದಿ ಪೊಲೀಸ್ ಅಧಿಕಾರಿಗಳನ್ನು ಸರ್ಕಾರ ಅಮಾನತು ಮಾಡಿದೆ. ಸರ್ಕಾರದ ಈ ನಿರ್ಧಾರವನ್ನು ನ್ಯಾಯಮಂಡಳಿ ಪ್ರಶ್ನಸಿದ್ದು, ಸರ್ಕಾರಕ್ಕೆ ಚಾಟಿ ಬೀಸಿದೆ.
ತಮ್ಮನ್ನು ಅಮಾನತು ಮಾಡಿದ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ, ಮ್ಯಾಜಿಸ್ಟೀರಿಯಲ್ ತನಿಖೆ ವರದಿ ಬರುವ ಮುನ್ನವೇ ಅಮಾನತು ಮಾಡಿದ್ದೇಕೆ? ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆಗೆ ಪೊಲೀಸರು ಅನುಮತಿ ನೀಡಿಲ್ಲ. ಹಾಗಿದ್ದಾಗ ಪೊಲೀಸ್ ಅಧಿಕಾರಿಗಳ ಅಮಾನತಿಗೆ ಆಧಾರವೇನು? ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿದೆ. ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಸಿಎಟಿ ಆದೇಶ ಕಾಯ್ದಿರಿಸಿದೆ.
ಕಾಲ್ತುಳಿತ ಪ್ರಕರಣ ಸಂಬಂಧ ಸರ್ಕಾರ ಗುರುವಾರ (ಜೂನ್ 05) ರಾತ್ರೋರಾತ್ರಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಹೆಚ್.ಟಿ.ಶೇಖರ್, ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಹೆಚ್.ಟಿ.ಶೇಖರ್, ಎಸಿಪಿ ಬಾಲಕೃಷ್ಣ, ಕಬ್ಬನ್ಪಾರ್ಕ್ ಇನ್ಸ್ಪೆಕ್ಟರ್ ಗಿರೀಶ್.ಎ.ಕೆ ಅವರನ್ನು ಅಮಾನತು ಮಾಡಲಾಗಿದೆ.
ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ: ಅಮೈಕಸ್ ಕ್ಯೂರಿ ನೇಮಿಸಿದ ಕೋರ್ಟ್, ಹೀಗಂದ್ರೇನು
ಕಾಲ್ತುಳಿತ ಪ್ರಕರಣ ಸಂಬಂಧ ಸರ್ಕಾರ ಐವರು ಅಧಿಕಾರಿಗಳನ್ನು ಅಮಾನತು ಮಾಡಿದ್ದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಸರ್ಕಾರ ತಾನು ಮಾಡಿದ ತಪ್ಪಿಗೆ ಅಧಿಕಾರಿಗಳನ್ನು ಹೊಣೆಗಾರಿಕೆ ಮಾಡಿದೆ. ಇದು ಸರಿಯಾದ ಕ್ರಮವಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ, ಅಮಾನತು ವಿರೋಧಿಸಿ ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದರು. ಅಲ್ಲದೇ, ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದರು. ಜೊತೆಗೆ ಸಾರ್ವಜನಿಕರು ಕೂಡ ಸರ್ಕಾರದ ನಿರ್ಧಾರದ ವಿರುದ್ಧ ಧರಣಿ ನಡೆಸಿದ್ದರು.
Published On - 6:24 pm, Tue, 24 June 25