ಅಧಿಕಾರಿಗಳ ಜತೆ ಸಿಎಂ ಡಿಕೆ ಶಿವಕುಮಾರ್ ಸಭೆ: ಯೋಜನೆಗಳ ಜಾರಿ, ಭ್ರಷ್ಟಾಚಾರಕ್ಕೆ ಕಡಿವಾಣಕ್ಕೆ ಖಡಕ್ ಸೂಚನೆ

ಮುಖ್ಯಮಂತ್ರಿಯಾದ ಬೆನ್ನಲ್ಲೇ ವಿಧಾನಸೌಧದಲ್ಲಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಸಭೆ ನಡೆಸಿದ ಡಿಕೆ ಶಿವಕುಮಾರ್, ಉಚಿತ ಬಸ್ ಪಾಸ್ ಒಳಗೊಂಡ 6 ಯೋಜನೆಗಳ ಜಾರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಭ್ರಷ್ಟಾಚಾರ, ಡ್ರಗ್ಸ್ ಹಾಗೂ ರೌಡಿಸಂ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಅಧಿಕಾರಿಗಳ ಜತೆ ಸಿಎಂ ಡಿಕೆ ಶಿವಕುಮಾರ್ ಸಭೆ: ಯೋಜನೆಗಳ ಜಾರಿ, ಭ್ರಷ್ಟಾಚಾರಕ್ಕೆ ಕಡಿವಾಣಕ್ಕೆ ಖಡಕ್ ಸೂಚನೆ
ಡಿಕೆ ಶಿವಕುಮಾರ್
Image Credit source: tv9

Updated on: Jun 04, 2026 | 2:44 PM

ಬೆಂಗಳೂರು, ಜೂನ್ 4: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿಕೆ ಶಿವಕುಮಾರ್ (DK Shivakumar) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ರಾಜ್ಯದ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಮಹತ್ವದ ಜಂಟಿ ಸಭೆ ನಡೆಸಿದ ಅವರು, ಮೊದಲ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದಿರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿದಂತೆ ಎಲ್ಲಾ 6 ಪ್ರಮುಖ ಯೋಜನೆಗಳನ್ನು ತಕ್ಷಣವೇ ಜಾರಿಗೆ ತರುವಂತೆ ಖಡಕ್ ಸೂಚನೆ ನೀಡಿದ್ದಾರೆ. ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು ಎಂದಿರುವ ಸಿಎಂ, ಯಾವುದೇ ಕಾರಣಕ್ಕೂ ಆಡಳಿತ ಹಾದಿ ತಪ್ಪಲು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಮುಖ್ಯಾಂಶಗಳು

  • 6 ಪ್ರಮುಖ ಯೋಜನೆಗಳನ್ನು ತಕ್ಷಣ ಜಾರಿಗೆ ತರಲು ಸಿಎಂ ಆದೇಶ.
  • ಸಿಎಸ್ಆರ್ (CSR) ಫಂಡ್ ದುರ್ಬಳಕೆ ಮತ್ತು ಭ್ರಷ್ಟಾಚಾರಕ್ಕೆ ತಕ್ಷಣವೇ ಕಡಿವಾಣ ಹಾಕಲು ಸೂಚನೆ.
  • ರೌಡಿಗಳ ಹೆಡೆಮುರಿ ಕಟ್ಟಿ, ಜೂಜು, ಡ್ರಗ್ಸ್ ಹಾಗೂ ಕಾನೂನುಬಾಹಿರ ಚಟುವಟಿಕೆಗಳಿಗೆ ತಡೆಯೊಡ್ಡಲು ಪೊಲೀಸರಿಗೆ ಸೂಚನೆ.

ಭ್ರಷ್ಟಾಚಾರಕ್ಕೆ ಕಡಿವಾಣ, ಅಧಿಕಾರಿಗಳಿಗೆ ಸಿಎಂ ಕಿವಿಮಾತು

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ‘ರಾಜ್ಯದಲ್ಲಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿ ದುರ್ಬಳಕೆಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದಕ್ಕೆ ತಕ್ಷಣವೇ ಬ್ರೇಕ್ ಹಾಕಿ, ಆಡಳಿತದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು’ ಎಂದು ಗುಡುಗಿದ್ದಾರೆ. ಪ್ರತಿಯೊಬ್ಬ ಅಧಿಕಾರಿಯೂ ನಿಮ್ಮ ಆತ್ಮಸಾಕ್ಷಿ ಒಪ್ಪುವ ಹಾಗೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ, ಸರ್ಕಾರದ ಯೋಜನೆಗಳನ್ನು ಸಮರ್ಥವಾಗಿ ಜನರಿಗೆ ತಲುಪಿಸಬೇಕು. ಅಭಿವೃದ್ಧಿಯ ಹಾದಿಗೆ ಮೆಟ್ಟಿಲಾಗಿ ಜನ ಮೆಚ್ಚುವಂತೆ ಕೆಲಸ ಮಾಡುವ ಮೂಲಕ ಸರ್ಕಾರಕ್ಕೂ ಒಳ್ಳೆಯ ಹೆಸರು ತನ್ನಿ, ನೀವೂ ಉತ್ತಮ ಹೆಸರು ಗಳಿಸಿ ಎಂದು ಕರೆ ನೀಡಿದ್ದಾರೆ.

ರೌಡಿಗಳ ಹೆಡೆಮುರಿ ಕಟ್ಟಲು ಐಪಿಎಸ್ ಅಧಿಕಾರಿಗಳಿಗೆ ಸೂಚನೆ

ಇದೇ ವೇಳೆ, ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಪೊಲೀಸ್ ಅಧಿಕಾರಿಗಳಿಗೆ ಕಠಿಣ ಸೂಚನೆ ನೀಡಿದ ಸಿಎಂ, ‘ರಾಜ್ಯದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳಿಗೆ ಆಸ್ಪದ ಕೊಡಬಾರದು’ ಎಂದಿದ್ದಾರೆ. ರೌಡಿಗಳ ಹೆಡೆಮುರಿ ಕಟ್ಟಿ, ಜೂಜು ಮತ್ತು ಡ್ರಗ್ಸ್ ದಂಧೆಯನ್ನು ಬೇರುಸಹಿತ ಕಿತ್ತೊಗೆಯಬೇಕು. ಸಾರ್ವಜನಿಕರ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ಯಾವುದೇ ರಾಜಕೀಯ ಅಥವಾ ಬಾಹ್ಯ ಒತ್ತಡಗಳಿಗೆ ಮಣಿಯದೆ ಮುಕ್ತವಾಗಿ ಕೆಲಸ ಮಾಡಿ ಎಂದು ಐಪಿಎಸ್ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದಾರೆ.

ಇದನ್ನೂ ಓದಿ: ವಿಶೇಷ ಪೂಜೆ ಸಲ್ಲಿಸಿ ಸಿಎಂ ಕುರ್ಚಿಯಲ್ಲಿ ಕೂತ ಸಿಎಂ ಡಿಕೆ ಶಿವಕುಮಾರ್​

ಸಿಎಂ ಅವರ ಈ ಮೊದಲ ಸಭೆಯು ಇಡೀ ಆಡಳಿತ ಮತ್ತು ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ.

ವರದಿ: ಈರಣ್ಣ ಬಸವ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:42 pm, Thu, 4 June 26

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us