Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ಸಿದ್ದರಾಮಯ್ಯ ಚಾಲನೆ

ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಮೂರು ದಿನಗಳ ಕಾಲ ನಡೆಯುವ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ (ಮಿಲೇಟ್ಸ್) ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಕಾರ್ಯಕ್ರಮ ಉದ್ಘಾಟನೆ ಬಳಿಕ ಸಿಎಂ ಸಿದ್ದರಾಮಯ್ಯ ಮೇಳದಲ್ಲಿನ ಮಳಿಗೆಗಳನ್ನು ವೀಕ್ಷಿಸಿದರು.

ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ಸಿದ್ದರಾಮಯ್ಯ ಚಾಲನೆ
ಸಿಎಂ ಸಿದ್ದರಾಮಯ್ಯ
Follow us
TV9 Web
| Updated By: ವಿವೇಕ ಬಿರಾದಾರ

Updated on: Jan 05, 2024 | 12:59 PM

ಬೆಂಗಳೂರು, ಜನವರಿ 05: ಬೆಂಗಳೂರಿನ (Bengaluru) ಅರಮನೆ ಮೈದಾನದ (Palace Ground) ತ್ರಿಪುರವಾಸಿನಿಯಲ್ಲಿ ಮೂರು ದಿನಗಳ ಕಾಲ ನಡೆಯುವ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ (ಮಿಲೇಟ್ಸ್) ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್‌ (Nirmala Sitharaman), ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರದ ರಾಜ್ಯ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ರಾಜ್ಯ ಕೃಷಿ ಸಚಿವ ಚಲುವರಾಯಸ್ವಾಮಿ ಮತ್ತು ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು. ಕಾರ್ಯಕ್ರಮ ಉದ್ಘಾಟನೆ ಬಳಿಕ ಸಿಎಂ ಸಿದ್ದರಾಮಯ್ಯ ಮೇಳದಲ್ಲಿನ ಮಳಿಗೆಗಳನ್ನು ವೀಕ್ಷಿಸಿದರು.

ಕೃಷಿ ಇಲಾಖೆ, ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ಸಹಯೋಗದೊಂದಿಗೆ ಮೇಳ ನಡೆಯುತ್ತಿದೆ. ಒಡಿಶಾ, ಕೇರಳ, ಅರಬ್‌, ಜಪಾನ್‌ ದೇಶಗಳಿಂದಲೂ ಉದ್ಯಮಿಗಳು ಮೇಳಕ್ಕೆ ಆಗಮಿಸಿದ್ದಾರೆ. ಸರಕಾರಿ, ಖಾಸಗಿ ಸಂಸ್ಥೆಗಳ ಉತ್ಪನ್ನಗಳ ಪ್ರದರ್ಶನಕ್ಕಾಗಿ 250ಕ್ಕೂ ಹೆಚ್ಚಿನ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿದೆ. ರಾಜ್ಯದ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳ ಪ್ರದರ್ಶನಕ್ಕಾಗಿ ಪ್ರತ್ಯೇಕ 100 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಬಿಸ್‌ನೆಸ್‌ ಟು ಬಿಸ್‌ನೆಸ್‌ (ಬಿಟುಬಿ) ಸಭೆಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಸಿರಿಧಾನ್ಯ ಬಳಸಿದರೆ ಮೆಡಿಸಿನ್​ಗಳ ಅಗತ್ಯವೇ ಇರುವುದಿಲ್ಲ; ಮಿಲೆಟ್ ಮಹಿಮೆ ಬಿಚ್ಚಿಟ್ಟ ಖಾದರ್ ವಲಿ

ಮೇಳದಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ, ರೈತರ‌ ಕಾರ್ಯಾಗಾರ ಆಯೋಜಿಸಲಾಗಿದೆ. ಸಾರ್ವಜನಿಕರಿಗಾಗಿ ಸಿರಿಧಾನ್ಯ ಹಾಗೆ ಸಾವಯುವ ಖಾನಾವಳಿಯ ಪುಡ್‌ ಕೋರ್ಟ್‌ ನಿರ್ಮಾಣ ಮಾಡಲಾಗಿದೆ. ಮೇಳದ ಮುಖಾಂತರ ಸಿರಿಧಾನ್ಯದ ಉತ್ಪಾದನೆ ಮತ್ತು ರಫ್ತು ಚಟುವಟಿಕೆ ಎರಡರಿಂದ ಮೂರು ಪಟ್ಟು ಹೆಚ್ಚಿಸುವ ಗುರಿ ಹೊಂದಲಾಗಿದೆ. ಆರೋಗ್ಯ ದೃಷ್ಟಿಯಿಂದ ಜನರಿಗೆ ಸಿರಿಧಾನ್ಯಗಳ ಬಳಕೆ ಅರಿವು ಮೂಡಿಸುವುದು ಮೇಳದ ಮುಖ್ಯ ಉದ್ದೇಶವಾಗಿದೆ.

2022-23ನೇ ಸಾಲಿನಲ್ಲಿ ರಾಜ್ಯದಿಂದ 7,764 ಮೆಟ್ರಿಕ್‌ ಟನ್‌ ಸಿರಿಧಾನ್ಯ, ಮೌಲ್ಯವರ್ಧಿತ ಉತ್ಪನ್ನ ರಫ್ತು ಮಾಡಲಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಸಿರಿಧಾನ್ಯವನ್ನು 15.61 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆಯಲಾಗುತ್ತಿದೆ. ಸರ್ಕಾರ ಒಂದು ಹೆಕ್ಟೇರ್‌ ಉತ್ಪಾದನೆಗೆ ಹತ್ತು ಸಾವಿರ ರೂ. ಪ್ರೋತ್ಸಾಹಧನ ನೀಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ