ಕುರ್ಚಿ ಕಾದಾಟದ ನಡುವೆಯೂ ಡಿಕೆಶಿ ಗುಣಗಾನ ಮಾಡಿದ ಸಿದ್ದರಾಮಯ್ಯ: ಕಾರಣ ಇಲ್ಲಿದೆ
ಮುಖ್ಯಮಂತ್ರಿ ಕುರ್ಚಿ ಕಾದಾಟದ ನಡುವೆಯೂ ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಅವರನ್ನು ಗುಣಗಾನ ಮಾಡಿದ್ದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅವರ ಸಂಘಟನಾ ಚಾತುರ್ಯ, ಪಕ್ಷ ನಿಷ್ಠೆ ಮತ್ತು ಉಜ್ವಲ ರಾಜಕೀಯ ಭವಿಷ್ಯದ ಬಗ್ಗೆ ಎಕ್ಸ್ ಪೋಸ್ಟ್ ಮಾಡಿ ಮುಖ್ಯಮಂತ್ರಿಗಳು ಅಭಿನಂದಿಸಿದ್ದಾರೆ.

ಬೆಂಗಳೂರು, ಮಾರ್ಚ್ 10: ಕರ್ನಾಟಕದ ಸಿಎಂ ಕುರ್ಚಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಡುವಿನ ತಿಕ್ಕಾಟ ಎಲ್ಲರಿಗೂ ಗೊತ್ತಿರುವ ವಿಷಯ. ಹೀಗಿದ್ದರೂ ಉಭಯ ನಾಯಕರು ಇಲ್ಲಿಯವರೆಗೂ ಎಲ್ಲಿಯೂ ಒಬ್ಬರ ವಿರುದ್ಧ ಮತ್ತೊಬ್ಬರು ಬಹಿರಂಗ ಸಮರ ಸಾರಿಲ್ಲ. ಮೊನ್ನೆ ಮೊನ್ನೆಯಷ್ಟೇ ನಮ್ಮಿಬ್ಬರದ್ದು ಹಾಲು-ಜೇನಿನ ಸಂಬಂಧ ಎಂದು ಸಿದ್ದರಾಮಯ್ಯ ಹೇಳಿದ್ದಿದ್ದು ಹಲವರ ಹುಬ್ಬೇರಿಸಿತ್ತು. ಈ ನಡುವೆ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ 6 ವರ್ಷ ಪೂರ್ಣಗೊಳಿಸಿದ ಹಿನ್ನೆಲೆ ಎಕ್ಸ್ ಖಾತೆಯ ಮೂಲಕ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ಅಕ್ಷರಶಃ ಕೆಪಿಸಿಸಿ ಅಧ್ಯಕ್ಷರ ಗುಣಗಾನ ಮಾಡಿದ್ದಾರೆ.
ಡಿಕೆಶಿಗೆ ಉಜ್ವಲ ರಾಜಕೀಯ ಭವಿಷ್ಯವಿದೆ ಎಂದ ಸಿಎಂ
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು. ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ದತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವನಾಯಕರಿಗೆ ಮಾದರಿಯಾದುದು.
ವಿರೋಧ ಪಕ್ಷವಾದ ಬಿಜೆಪಿ ಸುಳ್ಳು ಕೇಸ್ ಗಳನ್ನು ಹಾಕಿ ಬಗೆಬಗೆಯ ಕಿರುಕಳ… pic.twitter.com/PTipmn8wqi
— Siddaramaiah (@siddaramaiah) March 10, 2026
ಡಿ.ಕೆ.ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ಧತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವ ನಾಯಕರಿಗೆ ಮಾದರಿ. ವಿಪಕ್ಷ ಬಿಜೆಪಿ ಸುಳ್ಳು ಕೇಸ್ಗಳನ್ನು ಹಾಕಿ ಬಗೆಬಗೆಯ ಕಿರುಕುಳ ನೀಡಿದರೂ ಡಿ.ಕೆ.ಶಿವಕುಮಾರ್ ಅವರು ಮಣಿಯದೆ ಪಕ್ಷಕ್ಕೆ ನಿಷ್ಠರಾಗಿ ಉಳಿದಿರುವುದು ಕಾಂಗ್ರೆಸ್ ಪಕ್ಷದ ಬಗ್ಗೆ ಅವರಲ್ಲಿರುವ ರಾಜಿಯಿಲ್ಲದ ನಿಷ್ಠೆಗೆ ಸಾಕ್ಷಿಯಾಗಿದೆ. ಇದು ಕಾಂಗ್ರೆಸ್ನ ಕಾರ್ಯಕರ್ತರಿಗೆ ಸ್ಫೂರ್ತಿದಾಯಕ ನಡವಳಿಕೆಯೂ ಹೌದು. ಕೋಮುವಾದಿ ಶಕ್ತಿಗಳನ್ನು ಸೋಲಿಸಿ ಕಾಂಗ್ರೆಸ್ ಅಧಿಕಾರಕ್ಕೆ ತರುವುದಕ್ಕೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಜೊತೆ ಡಿಕೆಶಿಯವರು ದುಡಿದಿದ್ದಾರೆ. ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಮತ್ತೆ ಕಟ್ಟುವಲ್ಲಿ ಶಿವಕುಮಾರ್ ನನ್ನ ಹೆಗಲಿಗೆ ಹೆಗಲಾಗಿ ನಿಂತಿದ್ದಾರೆ ಎಂದು ಸಿದ್ದರಾಮಯ್ಯ ಹಾಡಿ ಹೊಗಳಿದ್ದಾರೆ.
ಇದನ್ನೂ ಓದಿ: ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ; ಕಾಂಗ್ರೆಸ್ನಿಂದ ಮಾತ್ರ ಸಾಧ್ಯ ಎಂದು ಬಾಣ!
ನನಗಿಂತ ಕಿರಿಯರಾದ ಡಿ.ಕೆ. ಶಿವಕುಮಾರ್ ಅವರಿಗೆ ಉಜ್ವಲವಾದ ರಾಜಕೀಯ ಭವಿಷ್ಯವಿದೆ. 2028ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಬೇಕು ಎನ್ನುವುದು ನಮ್ಮ ಬಯಕೆ. ಪಕ್ಷದ ಸಂಘಟನೆ ಮತ್ತು ಹೋರಾಟದಲ್ಲಿ ನಾನು ಕೂಡ ಜೊತೆಯಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ. ಸಿಎಂ ಕುರ್ಚಿ ವಿಚಾರದಲ್ಲಿ ಇಬ್ಬರ ನಡುವೆ ಅದೆಷ್ಟೇ ತಿಕ್ಕಾಟಗಳು ನಡೆದು, ವಿಷಯ ಹೈಕಮಾಂಡ್ ಅಂಗಳ ತಲುಪಿದ್ದರೂ ಉಭಯ ನಾಯಕರ ನಡೆ ಮಾತ್ರ ಭಾರೀ ಕುತೂಹಲ ಮೂಡಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
