ಕಮಿಷನ್​ ದಂಧೆಯ ಬಗ್ಗೆ ಗುತ್ತಿಗೆದಾರರ ಆರೋಪ: ತನಿಖೆಗೆ ಮುಖ್ಯ ಕಾರ್ಯದರ್ಶಿ ಸೂಚನೆ

ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದ ನಂತರ ನಡೆದ ಟೆಂಡರ್ ಪ್ರಕ್ರಿಯೆ ಮತ್ತು ₹ 10 ಕೋಟಿ ಅನುದಾನ ಮೀರಿದ ಎಲ್ಲ ಕಾಮಗಾರಿಗಳ ಟೆಂಡರ್ ಅಥವಾ ಬಿಲ್ ಮಂಜೂರು ವೇಳೆ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ.

ಕಮಿಷನ್​ ದಂಧೆಯ ಬಗ್ಗೆ ಗುತ್ತಿಗೆದಾರರ ಆರೋಪ: ತನಿಖೆಗೆ ಮುಖ್ಯ ಕಾರ್ಯದರ್ಶಿ ಸೂಚನೆ
ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ (ಸಂಗ್ರಹ ಚಿತ್ರ)
Edited By:

Updated on: Nov 26, 2021 | 9:00 PM

ಬೆಂಗಳೂರು: ಕರ್ನಾಟಕದಲ್ಲಿ ಶೇ 40ರಷ್ಟು ಕಮಿಷನ್ ದಂಧೆ ಇದೆ ಎಂಬ ಗುತ್ತಿಗೆದಾರರ ಆರೋಪ‌ದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿ ರವಿಕುಮಾರ್​ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರಿ​ಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ದೇಶನದ ಮೇರೆಗೆ ಈ​ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಕಮಿಷನ್​ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಪತ್ರ ಬರೆದಿದ್ದರು. ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದ ನಂತರ ನಡೆದ ಟೆಂಡರ್ ಪ್ರಕ್ರಿಯೆ ಮತ್ತು ₹ 10 ಕೋಟಿ ಅನುದಾನ ಮೀರಿದ ಎಲ್ಲ ಕಾಮಗಾರಿಗಳ ಟೆಂಡರ್ ಅಥವಾ ಬಿಲ್ ಮಂಜೂರು ವೇಳೆ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಮುಖ್ಯಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

ಕಮಿಷನ್ ದಂಧೆ: ಸರ್ಕಾರ ವಜಾ ಮಾಡಲು ಬಿಜೆಪಿ ಆಗ್ರಹ
ಕರ್ನಾಟಕ ಸರ್ಕಾರದ ವಿವಿಧ ಹಂತಗಳಲ್ಲಿ ಭ್ರಷ್ಟಾಚಾರ ನೆಲೆಗೊಂಡಿರುವ ಬಗ್ಗೆ ಕಾಂಗ್ರೆಸ್ ನಿಯೋಗ ಗುರುವಾರ (ನ.25) ರಾಜ್ಯಪಾಲರಿಗೆ ದೂರು ನೀಡಿದೆ. ಭ್ರಷ್ಟಾಚಾರ ತಾಂಡವವಾಡುತ್ತಿರುವ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕೆಂದು ಕಾಂಗ್ರೆಸ್​ ಮನವಿ ಮಾಡಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕ ರಮೇಶ್​ ಕುಮಾರ್ ಸೇರಿದಂತೆ ಹಲವರು ದೂರು ನೀಡಿದ ನಿಯೋಗದಲ್ಲಿದ್ದರು. ಗುತ್ತಿಗೆದಾರರು ಪ್ರಧಾನಿಗೆ ಬರೆದಿರುವ ಪತ್ರ ಆಧರಿಸಿ ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ಧ ದೂರು ನೀಡಿದ್ದಾರೆ.

ದೂರು ಸಲ್ಲಿಕೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ. ಸಂವಿಧಾನಾತ್ಮಕವಾಗಿ ಸರ್ಕಾರ ನಡೆಯುತ್ತಿಲ್ಲ. 356 ಅಡಿಯಲ್ಲಿ ರಾಷ್ಟ್ರಪತಿ ಅಳ್ವಿಕೆ ಜಾರಿ ಮಾಡುವಂತೆ ಮನವಿ ಮಾಡಿದ್ದೇವೆ. ಸರ್ಕಾರ ವಜಾ ಮಾಡಿ ರಾಷ್ಟ್ರಪತಿ ಅಳ್ವಿಕೆ ಜಾರಿ ಮಾಡಬೇಕು. ಇಂಥ ಭ್ರಷ್ಟ ಸರ್ಕಾರವನ್ನು ನಾವು ಎಂದೂ ಕಂಡಿಲ್ಲ ಎಂದು ಹೇಳಿದರು. ಅಧಿಕಾರದಲ್ಲಿರುವವರು ಗುತ್ತಿಗೆದಾರರದಿಂದ ಶೇ 40ರಷ್ಟು ಕಮಿಷನ್ ಪಡೆಯುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ನರೇಂದ್ರ ಮೋದಿ ಅವರು ಈ ಹಿಂದೆ ಕರ್ನಾಟಕಕ್ಕೆ ಬಂದಿದ್ದಾಗ ನಮ್ಮದು ಕಮಿಷನ್ ಸರ್ಕಾರ ಎಂದು ಆರೋಪ ಮಾಡಿದ್ದರು. ಈಗ ನಡೆಯುತ್ತಿರುವುದೇನೆ ಎಂದು ಪ್ರಶ್ನಿಸಿದರು. ಇಲ್ಲಿ ನಡೆಯುತ್ತಿರುವ ಕಮಿಷನ್ ದಂಧೆಯು ಅಕ್ರಮ ಹಣ ವರ್ಗಾವಣೆ ಕಾಯ್ದೆಯ (ಮನಿ ಲಾಂಡರಿಂಗ್) ಅಡಿಯಲ್ಲಿ ಬರುತ್ತದೆ ಎಂದರು.

ದುಪ್ಪಟ್ಟು ಅಂದಾಜು: ಡಿ.ಕೆ.ಶಿವಕುಮಾರ್ ದೂರು
ಶೇ 40ರಷ್ಟು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ‌ದ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೂಡಲೇ ರಾಜ್ಯ ಸರ್ಕಾರವನ್ನು ರಾಜ್ಯಪಾಲರು ವಜಾ ಮಾಡಿ, ನ್ಯಾಯಾಂಗ ತನಿಖೆ ನಡೆಸಬೇಕು. ಗುತ್ತಿಗೆ ಕಾಮಗಾರಿ ವೇಳೆ ಕಾಮಗಾರಿ ವೆಚ್ಚವನ್ನು ದುಪ್ಪಟ್ಟು ಅಂದಾಜು (ಡಬಲ್ ಎಸ್ಟಿಮೇಷನ್) ಮಾಡಲಾಗುತ್ತಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ. ಹಂತಹಂತವಾಗಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ರಾಜಭವನ ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ಇದನ್ನೂ ಓದಿ: ಯಾರು ಡೀಲ್ ಮಾಡ್ತಿದ್ರು, ಯಾರು ಕಮಿಷನ್ ತಗೊಳ್ತಿದ್ರು ಎಲ್ಲ ಟೈಂ ಬಂದಾಗ ಹೇಳ್ತೀನಿ: ಜಮೀರ್ ವಿರುದ್ಧ ರೇವಣ್ಣ ಗರಂ
ಇದನ್ನೂ ಓದಿ: ಕರ್ನಾಟಕದಲ್ಲಿ ಕಮಿಷನ್ ದಂಧೆ: ರಾಜ್ಯಪಾಲರಿಗೆ ದೂರು ನೀಡಿದ ಕಾಂಗ್ರೆಸ್ ನಿಯೋಗ, ಸರ್ಕಾರ ವಜಾ ಮಾಡಲು ಆಗ್ರಹ

Web contact

TV9 Kannada

Read More
Follow Us