ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಪೈಪೋಟಿ: ಒಬ್ಬರೇ ಆಕಾಂಕ್ಷಿಯಿಂದ ಐದು ಕ್ಷೇತ್ರಕ್ಕೆ ಅರ್ಜಿ

ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ, ಒಬ್ಬರೇ ಆಕಾಂಕ್ಷಿ ಸಚಿನ್ ಮಿಗಾರಿಂದ ಐದು ಕ್ಷೇತ್ರಗಳ ಟಿಕೆಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಪುಲಕೇಶಿ ನಗರ ಕ್ಷೇತ್ರದ ಟಿಕೆಟ್​ಗಾಗಿ ಇಬ್ಬರು ಅರ್ಜಿ ಸಲ್ಲಿಸಿದ್ದು ಅಖಂಡ ಶ್ರೀನಿವಾಸ ಮೂರ್ತಿಗೆ ಪ್ರಸನ್ನ ಕುಮಾರ್ ತೀವ್ರ ಪೈಪೋಟಿ ನೀಡುತ್ತಿದ್ದಾರೆ.

ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಪೈಪೋಟಿ: ಒಬ್ಬರೇ ಆಕಾಂಕ್ಷಿಯಿಂದ ಐದು ಕ್ಷೇತ್ರಕ್ಕೆ ಅರ್ಜಿ
Congress Flag
Edited By: ಆಯೇಷಾ ಬಾನು

Updated on: Nov 15, 2022 | 3:50 PM

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಕಾಂಗ್ರೆಸ್​(Congress) ಟಿಕೆಟ್​ಗಾಗಿ ಅರ್ಜಿ ಸಲ್ಲಿಸಲು ಮಂಗಳವಾರ (ನ 15) ಕೊನೆಯ ದಿನವಾಗಿದ್ದು ಭರ್ಜರಿ ಸ್ಪಂದನೆ ಸಿಕ್ಕಿದೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​​ ಟಿಕೆಟ್​​ಗಾಗಿ ಫೈಟ್ ಉಂಟಾಗಿದೆ. ತೀರ್ಥಹಳ್ಳಿ ಕ್ಷೇತ್ರದ ಮಾಜಿ ಶಾಸಕರಾಗಿರುವ ಕಿಮ್ಮನೆ ರತ್ನಾಕರ್ ಹಾಗೂ ಅದೇ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮಂಜುನಾಥ್​​ ಗೌಡ ಇಬ್ಬರೂ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ.

ಒಬ್ಬರೇ ಆಕಾಂಕ್ಷಿಯಿಂದ ಐದು ಕ್ಷೇತ್ರಕ್ಕೆ ಟಿಕೆಟ್

ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ, ಒಬ್ಬರೇ ಆಕಾಂಕ್ಷಿ ಸಚಿನ್ ಮಿಗಾರಿಂದ ಐದು ಕ್ಷೇತ್ರಗಳ ಟಿಕೆಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಚಿಕ್ಕಮಗಳೂರು, ಶೃಂಗೇರಿ, ತೀರ್ಥಹಳ್ಳಿ, ಪಾಂಡವಪುರ, ದೇವರಹಿಪ್ಪರಗಿ ಸೇರಿದಂತೆ ಒಟ್ಟು 5ಕ್ಷೇತ್ರಗಳ ಟಿಕೆಟ್​ಗೆ ಒಬ್ಬರೇ ಅರ್ಜಿ ಸಲ್ಲಿಸಿದ್ದಾರೆ.

ಸಾಗರ ಕ್ಷೇತ್ರಕ್ಕೆ ಒಂದೇ ಕುಟುಂಬದ ಮೂವರಿಂದ ಟಿಕೆಟ್ ಅರ್ಜಿ

ಕಾಗೋಡು ತಿಮ್ಮಪ್ಪ, ಕಾಗೋಡು ಪುತ್ರಿ ಡಾ.ರಾಜನಂದಿನಿ, ಅಳಿಯ ಬೇಳೂರು ಗೋಪಾಲಕೃಷ್ಣ ಎಂಬ ಒಂದೇ ಕುಟುಂಬದ ಮೂವರು ಸಾಗರ ಕಾಂಗ್ರೆಸ್ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇದರ ಜೊತೆಗೆ ಬಿಆರ್ ಜಯಂತ್, ರತ್ನಾಕರ್ ಹೊನಗೋಡು ಅವರೂ ಕೂಡ ಸಾಗರ ಟಿಕೆಟ್ ಗೆ ಡಿಮ್ಯಾಂಡ್ ಮಾಡಿದ್ದಾರೆ.

ಪುಲಕೇಶಿ ನಗರ ಕ್ಷೇತ್ರದ ಟಿಕೆಟ್​ಗಾಗಿ ಅಖಂಡ ಶ್ರೀನಿವಾಸ ಮೂರ್ತಿ ಅರ್ಜಿ ಸಲ್ಲಿಕೆ

ಪುಲಕೇಶಿ ನಗರ ಕ್ಷೇತ್ರದ ಟಿಕೆಟ್​ಗಾಗಿ ಇಬ್ಬರು ಅರ್ಜಿ ಸಲ್ಲಿಸಿದ್ದು ಅಖಂಡ ಶ್ರೀನಿವಾಸ ಮೂರ್ತಿಗೆ ಪ್ರಸನ್ನ ಕುಮಾರ್ ತೀವ್ರ ಪೈಪೋಟಿ ನೀಡುತ್ತಿದ್ದಾರೆ. ಇನ್ನು ಕಲಘಟಕಿ ಕ್ಷೇತ್ರದಲ್ಲೂ ತೀವ್ರ ಪೈಪೋಟಿ ಇದ್ದು ನಾಗರಾಜ್ ಛಬ್ಬಿ ಹಾಗೂ ಸಂತೋಷ್ ಲಾಡ್ ಕಲಘಟಕಿ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಜೊತೆಗೆ ಸಂತೋಷ್ ಲಾಡ್ ಅವರು ಬಳ್ಳಾರಿ ನಗರದ ಟಿಕೆಟ್ ಕೂಡ ಕೇಳುತ್ತಿದ್ದಾರೆ.

ಕಾಂಗ್ರೆಸ್​ ಟಿಕೆಟ್​ಗೆ 400ಕ್ಕೂ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ: ಸಾವಿರಕ್ಕೂ ಹೆಚ್ಚು ಮಂದಿಯಿಂದ ಅರ್ಜಿ ಸ್ವೀಕಾರ

ಬೆಂಗಳೂರು: ಕಾಂಗ್ರೆಸ್​ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಲು ಮಂಗಳವಾರ (ನ 15) ಕೊನೆಯ ದಿನವಾಗಿದೆ. ಈವರೆಗೆ ಸಾವಿರಾರು ಮಂದಿ ಅರ್ಜಿ ಸ್ವೀಕರಿಸಿದ್ದು, ಸುಮಾರು 400 ಮಂದಿ ಮಾತ್ರವೇ ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ 30 ಶಾಸಕರು ಸೇರಿದ್ದಾರೆ. ಇಂದು ಬಹುತೇಕ ಶಾಸಕರು ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ. ಹಲವು ಶಾಸಕರು ಮತ್ತು ಆಕಾಂಕ್ಷಿಗಳು ಇನ್ನೂ ಅರ್ಜಿ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಕೊನೆಯ ದಿನಾಂಕ ವಿಸ್ತರಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಕಾಂಗ್ರೆಸ್ ಪಕ್ಷವು ಟಿಕೆಟ್​ಗಾಗಿ ಅರ್ಜಿಗೆ ₹ 5,000 ಶುಲ್ಕ ನಿಗದಿಪಡಿಸಿದೆ. ಅರ್ಜಿಯೊಂದಿಗೆ ₹ 2 ಲಕ್ಷ ಡಿಡಿ ನೀಡಬೇಕು ಎಂದು ಕಾಂಗ್ರೆಸ್ ಪಕ್ಷವು ಷರತ್ತು ವಿಧಿಸಿದೆ.

ಕೋಲಾರ ಕ್ಷೇತ್ರಕ್ಕೆ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಅರ್ಜಿ ಪಡೆದಿದ್ದರು. ಆದರೆ ಸಿದ್ದರಾಮಯ್ಯ ಸ್ಪರ್ಧೆ ಖಚಿತವಾದ ಬಳಿಕ ಅರ್ಜಿ ಸಲ್ಲಿಸಲು ಅವರು ಹಿಂದೇಟು ಹಾಕಿದರು. ವಿ.ಆರ್.ಸುದರ್ಶನ್ ಅವರ ಜೊತೆಗೆ ಗೋವಿಂದೆಗೌಡ, ಶ್ರೀನಿವಾಸ್ ಎಂಬುವವರೂ ಅರ್ಜಿ ಪಡೆದಿದ್ದರು ಎನ್ನಲಾಗಿದೆ. ವರುಣ ಹಾಗೂ ಚಾಮುಂಡೇಶ್ವರಿ ಕ್ಷೇತ್ರದಿಂದ ಈವರೆಗೆ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ. ನಂಜನಗೂಡು ಕ್ಷೇತ್ರಕ್ಕೆ ಎಚ್.ಸಿ.ಮಹಾದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅರ್ಜಿ ಸಲ್ಲಿಸಿದ್ದಾರೆ.

Loading...
Unable to load recommendations.
Follow Us