ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಸ್ತಾಪಿಸಿ ಸಿದ್ದರಾಮಯ್ಯ ಟೀಕೆ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Aug 25, 2021 | 9:11 PM

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಪುಟ ವಿಸ್ತರಣೆಯ ಸಂಕಟದಿಂದ ಪಾರಾಗಿ ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳ ನಿಯಂತ್ರಣಕ್ಕೆ ಗಮನ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಸ್ತಾಪಿಸಿ ಸಿದ್ದರಾಮಯ್ಯ ಟೀಕೆ
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಾಡಿರುವ ಟ್ವೀಟ್
Follow us on

ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದನ್ನು ಪ್ರಸ್ತಾಪಿಸಿ ರಾಜ್ಯ ಸರ್ಕಾರದ ವೈಫಲ್ಯದ ಬಗ್ಗೆ ಸಿದ್ದರಾಮಯ್ಯ ಟೀಕಿಸಿದ್ದಾರೆ. ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಅವರು ಮೈಸೂರಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ದುರದೃಷ್ಟಕರ ಸಂಗತಿ. ಈ ವೇಳೆ ನಾನು ಸಂತ್ರಸ್ತೆ ಮತ್ತು ಅವರ ಕುಟುಂಬಸ್ಥರ ಪರವಾಗಿ ನಿಲ್ಲುತ್ತೇನೆ. ಮುಖ್ಯಮಂತ್ರಿ ಹಾಗೂ ಗೃಹಸಚಿವರು ನ್ಯಾಯ ದೊರಕಿಸಿಕೊಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ಇತ್ತೀಚೆಗೆ ಅಪರಾಧ ಕೃತ್ಯಗಳು ಹೆಚ್ಚಾಗಿ ವರದಿಯಾಗುತ್ತಿವೆ. ಲೂಟಿ, ಹಲ್ಲೆ ಮತ್ತು ಸರ ಕಸಿಯುವ ಪ್ರಕರಣಗಳು ಸಾಮಾನ್ಯ ಎನಿಸಿವೆ. ಜನರಿಗೆ ತಮ್ಮ ಸುರಕ್ಷೆಯ ಬಗ್ಗೆ ಆತಂಕ ಉಂಟಾಗಿದೆ. ತಮ್ಮ ಸುರಕ್ಷೆ ಮತ್ತು ಭದ್ರತೆಯ ಬಗ್ಗೆ ಅವರು ಚಿಂತಿತರಾಗಿದ್ದಾರೆ. ಕರ್ನಾಟಕದ ಬಿಜೆಪಿ ಸರ್ಕಾರವು ಪಕ್ಷದ ಆಂತರಿಕ ರಾಜಕೀಯ ಬದಿಗಿಟ್ಟು ಜನರ ಬಗ್ಗೆ ಯೋಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮೈಸೂರು ಮಾತ್ರವಲ್ಲ ಇಡೀ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಪುಟ ವಿಸ್ತರಣೆಯ ಸಂಕಟದಿಂದ ಪಾರಾಗಿ ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳ ನಿಯಂತ್ರಣಕ್ಕೆ ಗಮನ ನೀಡಬೇಕು ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರವು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ. ಪೊಲೀಸರು ತಕ್ಷಣ ದುಷ್ಕರ್ಮಿಗಳನ್ನು ಬಂಧಿಸಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಬೇಕು. ಭಯಭೀತ ಜನರಲ್ಲಿ ಧೈರ್ಯ ತುಂಬಬೇಕು ಎಂದು ಹೇಳಿದ್ದಾರೆ.

ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಬಡಾವಣೆಯ ಹೊರವಲಯದಲ್ಲಿ ಈಚೆಗೆ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ. ಆರೋಪಿಗಳಿಂದ ಹಲ್ಲೆಗೆ ಒಳಗಾಗಿರುವ ವಿದ್ಯಾರ್ಥಿನಿಯ ಗೆಳೆಯನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಹಾಗೂ ದರೋಡೆಕೋರರು ವ್ಯಕ್ತಿಯೊಬ್ಬರ ಮೇಲೆ ಗುಂಡು ಹಾರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎಸ್​.ಟಿ.ಸೋಮೇಶೇಖರ್ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದರು.

(Congress Leader Siddaramaiah Alleges Lawlessness in Karnataka rampant Criminal Activities)

ಇದನ್ನೂ ಓದಿ: ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣದ ಮತ್ತಷ್ಟು ಮಾಹಿತಿ ಬೆಳಕಿಗೆ; ಶುಕ್ರವಾರ ಆರಗ ಜ್ಞಾನೇಂದ್ರ ಸಭೆ

ಇದನ್ನೂ ಓದಿ: ಮೈಸೂರು: ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ಎಫ್​ಐಆರ್ ದಾಖಲಿಸಿಕೊಂಡ ಪೊಲೀಸರು