AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah: ನರೇಂದ್ರ ಮೋದಿ ಮಂಗಳೂರು ಭೇಟಿಗೂ ಮೊದಲು ಟ್ವಿಟರ್​ನಲ್ಲಿ ಪ್ರಶ್ನೆಗಳ ಬಾಣ ಬಿಟ್ಟ ಸಿದ್ದರಾಮಯ್ಯ

ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ ಎಂದು ಮೋದಿ ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ.

Siddaramaiah: ನರೇಂದ್ರ ಮೋದಿ ಮಂಗಳೂರು ಭೇಟಿಗೂ ಮೊದಲು ಟ್ವಿಟರ್​ನಲ್ಲಿ ಪ್ರಶ್ನೆಗಳ ಬಾಣ ಬಿಟ್ಟ ಸಿದ್ದರಾಮಯ್ಯ
ಮಾಜಿ ಸಿಎಂ ಸಿದ್ಧರಾಮಯ್ಯ, ಪ್ರಧಾನಿ ನರೇಂದ್ರ ಮೋದಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 02, 2022 | 11:11 AM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಮಂಗಳೂರಿಗೆ ಆಗಮಿಸಲಿದ್ದಾರೆ. 3,800 ಕೋಟಿ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ. ಬಳಿಕ ಪ್ರಧಾನಿ ಮೋದಿ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ನಡುವೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ರಿಂದ ಟ್ವಿಟರ್, ಫೇಸ್‌ಬುಕ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ. ಸನ್ಮಾನ್ಯ ಪ್ರಧಾನಮಂತ್ರಿ ಯವರಿಗೆ ಮಂಗಳೂರಿಗೆ ಸ್ವಾಗತ. ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ ಎಂದು ಮೋದಿ ವಿರುದ್ಧ ಗುಡುಗಿದ್ದಾರೆ.

ದಕ್ಷಿಣ ಕನ್ನಡದ ಉದ್ಯಮ ಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು ಬ್ಯಾಂಕ್​ಗಳನ್ನು ಹುಟ್ಟುಹಾಕಿದ್ದರು. ನೀವು ಇವುಗಳಲ್ಲಿ ಮೂರು ಬ್ಯಾಂಕುಗಳ ನಾಮಾವಶೇಷ ಮಾಡಿದ್ದೀರಿ. ಇದು ವಿಕಾಸವೋ? ವಿನಾಶವೋ ಎಂದು ಪ್ರಶ್ನಿಸಿದರು. ಕಾರ್ಪೋರೇಷನ್ ಬ್ಯಾಂಕ್ ಸ್ಥಾಪಕರು- ಹಾಜಿ ಅಬ್ದುಲ್ಲಾ (1906), ಸಿಂಡಿಕೇಟ್ ಬ್ಯಾಂಕ್ ಸ್ಥಾಪಕರು ಟಿಎಂಎ ಪೈ, ಉಪೇಂದ್ರ ಪೈ, ವಾಮನ್ ಕುಡ್ವಾ (1925). ವಿಜಯಾ ಬ್ಯಾಂಕ್ ಸ್ಥಾಪಕರು- ಎ.ಬಿ.ಶೆಟ್ಟಿ (1931). ಪ್ರಧಾನಿಯವರೇ, ನಿಮ್ಮ ನಡೆ ಈ ಅಮರವೀರರಿಗೆ ಬಗೆದ ದ್ರೋಹವಲ್ಲವೇ? ಇದು ವಿಕಾಸವೋ? ವಿನಾಶವೋ ಎಂದರು.

ಇದನ್ನೂ ಓದಿ: PM Modi Mangalore Visit: ಇಂದು ಮಂಗಳೂರಿಗೆ ನರೇಂದ್ರ ಮೋದಿ: 3,800 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಚಾಲನೆ

ಬಜ್ಪೆ ವಿಮಾನ ನಿಲ್ದಾಣ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಕೊಡುಗೆ.(25-12-1971) ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ಈ ವಿಮಾನ ನಿಲ್ದಾಣವನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಅರ್ಪಿಸಿದ್ದು, (20-10-2020) ಪ್ರಧಾನಿ ನರೇಂದ್ರ ಮೋದಿ ಇದು ವಿಕಾಸವೋ? ವಿನಾಶವೋ? ನವಮಂಗಳೂರು ಬಂದರು ಮಾಜಿ ಪ್ರಧಾನಿ ಇಂದಿರಾಗಾಂಧಿ ಕೊಡುಗೆ (1975). ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ನವಮಂಗಳೂರು ಬಂದರನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರುತ್ತಿರುವುದು ಪ್ರಧಾನಿ ನರೇಂದ್ರ ಮೋದಿ. ಇದು ವಿಕಾಸನೋ? ವಿನಾಶನೋ?

ಬಜ್ಪೆ ವಿಮಾನ ನಿಲ್ದಾಣ, ಎನ್ ಎಂಪಿಟಿ, ಎನ್ ಎಚ್-66, ರೀಜನಲ್ ಎಂಜನಿಯರಿಂಗ್ ಕಾಲೇಜ್, ಎಂಸಿಎಫ್-ಇವೆಲ್ಲ ಕಾಂಗ್ರೆಸ್ ಸಂಸದರ ಕೊಡುಗೆ. ಬಿಜೆಪಿ ಸಂಸದ ನಳಿನ್ ಕುಮಾರ ಕೊಡುಗೆ ಏನು? ಮಳೆಯಲ್ಲಿ ಮುಳುಗುವ ಮಂಗಳೂರು? ಕೋಮುದ್ವೇಷದ ಬೆಂಕಿಯಲ್ಲಿ ಬೇಯುತ್ತಿರುವ ಮಂಗಳೂರು? ಇದು ವಿಕಾಸವೋ? ವಿನಾಶನೋ? ಎಂದು ಪ್ರಶ್ನಿಸಿದರು. ದಕ್ಷಿಣ ಕನ್ನಡದ ವಿಕಾಸ ಪುರುಷರು ಕಾಂಗ್ರೆಸ್ ಸಂಸದರಾಗಿದ್ದ ಉಳ್ಳಾಲ ಶ್ರೀನಿವಾಸ ಮಲ್ಯ, ಕೆಮ್ತೂರು ಕಾಂತಪ್ಪ ಶೆಟ್ಟಿ ಮತ್ತು ಬೋಳಾರ ಜನಾರ್ಧನ ಪೂಜಾರಿ. ದಕ್ಷಿಣ ಕನ್ನಡದ ವಿನಾಶ ಪುರುಷ- ಬಿಜೆಪಿ ಸಂಸದ ನಳಿನ್ ಕುಮಾರ ಕಟೀಲ್. ಇದು ವಿಕಾಸವೋ? ವಿನಾಶವೋ?

ಜೂನ್ ತಿಂಗಳೊಂದರಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದುವರೆ ಕೋಟಿ ಬೆಲೆಯ ಮಾದಕದ್ರವ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾದಕದ್ರವ್ಯ ಸೇವನೆಯಲ್ಲಿ ದೇಶದಲ್ಲಿಯೇ ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದೆ. ಇದು ವಿಕಾಸನೋ? ವಿನಾಶನೋ? ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗಿದೆ. ಹೆಜ್ಜೆಹೆಜ್ಜೆಗೂ ಗುಂಡಿಬಿದ್ದ ರಸ್ತೆಗಳು, ಕುಸಿದು ಬಿದ್ದಿರುವ ಮನೆಗಳು, ನೆರೆಯಲ್ಲಿ ರೈತರ ಬೆಳೆಗಳು ಕೊಚ್ಚಿಹೋಗಿವೆ. ಪ್ರಧಾನಿ ಭೇಟಿಗಾಗಿ ಮಳೆ ಹುಳುಕನ್ನು ಮುಚ್ಚಿಟ್ಟು ರಸ್ತೆಗಳಿಗೆ ತೇಪೆ ಹಾಕಲಾಗಿದೆ. ಇದು ವಿಕಾಸನೋ? ವಿನಾಶನೋ?

ಕಳೆದ ಮೂರು ವರ್ಷಗಳಲ್ಲಿ ಕಡಲ್ಕೊರೆತ ತಡೆಗೆ ರಾಜ್ಯ ಸರ್ಕಾರ ಖರ್ಚು ಮಾಡಿರುವ ಹಣ ಅಂದಾಜು ರೂ.250 ಕೋಟಿ. ಇದರಲ್ಲಿ 40% ಜನಪ್ರತಿನಿಧಿಗಳ ಜೇಬಿಗೆ, 60% ಕಡಲ ನೀರಿಗೆ. ಕಡಲ್ಕೊರೆತ ಮುಂದುವರಿದಿದೆ. ಇದು ವಿಕಾಸವೋ? ವಿನಾಶನೋ? ಕರಾವಳಿ ಮೀನುಗಾರರ ಮೇಲೆ ಸಿಆರ್ ಜೆಡ್, ಸಿಎಂ ಜೆಡ್ ನಿಯಮಾವಳಿಗಳ ಹೇರಿಕೆ ಮಾಡಲಾಗಿದೆ. ಪ್ರವಾಸೋದ್ಯಮದ ಹೆಸರಲ್ಲಿ ರೆಸಾರ್ಟ್, ಥೀಮ್ ಪಾರ್ಕ್​ಗಳಿಗೆ ಮುಕ್ತ ಪರವಾನಿಗೆ. ಇದು ವಿಕಾಸನೋ? ವಿನಾಶನೋ?

48 ಕಿ.ಮೀ. ಅಂತರದಲ್ಲಿ ಬ್ರಹ್ಮರಕೂಟ್ಲು, ಸುರತ್ಕಲ್, ತಲಪಾಡಿ ಮತ್ತು ಹೆಜಮಾಡಿಗಳಲ್ಲಿ 4 ನಿಯಮಬಾಹಿರ ಟೋಲ್ ಗೇಟ್ ಗಳು. ವಾಹನ ಸಂಚಾರಿಗಳ ಜೇಬು ಖಾಲಿ, ಅಕ್ರಮದ ರೂವಾರಿಗಳಾದ ಬಿಜೆಪಿ ಸಂಸದರು ಮತ್ತು ಶಾಸಕರ ಜೇಬು ಭರ್ತಿ. ಇದು ವಿಕಾಸನೋ? ವಿನಾಶನೋ? #AnswerMadiModi ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಳೆಯನ್ನೇ ಗೈದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 11:07 am, Fri, 2 September 22