ಹೆತ್ತವರಿಗೆ ಮರ್ಯಾದೆ ಕೊಡಲ್ಲವೆಂದು ಬೈದ ಪತಿ: ಕ್ವಾಟ್ರಸ್​ನಲ್ಲೇ ಆತ್ಮಹತ್ಯೆಗೆ ಶರಣಾದ ಕಾನ್ಸ್​ಟೇಬಲ್​​ನ ಪತ್ನಿ

ಕ್ಷುಲ್ಲಕ ಕಾರಣಕ್ಕೆ ಪೊಲೀಸ್​ ಕಾನ್ಸ್‌ಟೇಬಲ್ ಪತ್ನಿ ಬೆಂಗಳೂರಿನ ಕೆ.ಆರ್.ಪುರಂ ಪೊಲೀಸ್ ಕ್ವಾಟ್ರಸ್​ನಲ್ಲೇ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿದೆ. ಸದ್ಯ ಪತಿ ಮತ್ತು ಕುಟುಂಬಸ್ಥರ ಮೇಲೆ ವರದಕ್ಷಿಣೆ ಕಿರುಕುಳ, ಮಾನಸಿಕ ಮತ್ತು ದೈಹಿಕ ಹಿಂಸೆಯ ಆರೋಪ ಕೇಳಿಬಂದಿದ್ದು, ಕೆ.ಆರ್.ಪುರಂ ಠಾಣೆಯಲ್ಲಿ ದೂರು ದಾಖಲಾಗಿದೆ.

ಹೆತ್ತವರಿಗೆ ಮರ್ಯಾದೆ ಕೊಡಲ್ಲವೆಂದು ಬೈದ ಪತಿ: ಕ್ವಾಟ್ರಸ್​ನಲ್ಲೇ ಆತ್ಮಹತ್ಯೆಗೆ ಶರಣಾದ ಕಾನ್ಸ್​ಟೇಬಲ್​​ನ ಪತ್ನಿ
ಲಕ್ಷ್ಮೀಪ್ರಿಯಾ
Image Credit source: tv9 kannada
Edited By:

Updated on: May 23, 2026 | 10:27 PM

ಬೆಂಗಳೂರು, ಮೇ 23: ತಂದೆ-ತಾಯಿಗೆ ಮರ್ಯಾದೆ ಕೊಡುವುದಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್ ಕಾನ್ಸ್‌ಟೇಬಲ್ ಪತ್ನಿ (wife) ಪೊಲೀಸ್ ಕ್ವಾಟ್ರಸ್​​ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ. ಹೆಚ್‌ಎಎಲ್ ಪೊಲೀಸ್ ಠಾಣೆ ಕಾನ್ಸ್‌ಟೇಬಲ್ ರಾಜೇಶ್ ಆರಾಧ್ಯ ಪತ್ನಿ ಲಕ್ಷ್ಮೀಪ್ರಿಯಾ (27) ಆತ್ಮಹತ್ಯೆಗೆ ಶರಣಾದ ದುರ್ದೈವಿ.

ಮುಖ್ಯಾಂಶಗಳು

  • ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಕಾನ್ಸ್​ಟೇಬಲ್ ಪತ್ನಿ ಆತ್ಮಹತ್ಯೆ
  • ಪತಿ ಮತ್ತು ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ
  • ಕೆ.ಆರ್.ಪುರಂ ಠಾಣೆಯಲ್ಲಿ ಪ್ರಕರಣ ದಾಖಲು

ನಡೆದಿದ್ದೇನು?

ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ರಾಜೇಶ್ ಆರಾಧ್ಯ ಮತ್ತು ಲಕ್ಷ್ಮೀಪ್ರಿಯಾ ಅವರಿಗೆ 2023ರಲ್ಲಿ ಮೈಸೂರಿನಲ್ಲಿ ವಿವಾಹವಾಗಿತ್ತು. ಈ ದಂಪತಿಗೆ ಸದ್ಯ 8 ತಿಂಗಳ ಹಸುಗೂಸಿದೆ. ಕೆ.ಆರ್.ಪುರಂನಲ್ಲಿರುವ ಪೊಲೀಸ್ ಕ್ವಾಟ್ರಸ್​ನಲ್ಲಿ ಈ ಕುಟುಂಬ ವಾಸವಾಗಿತ್ತು. ನಿನ್ನೆ (ಮೇ 22) ಬೆಳಿಗ್ಗೆ ದಂಪತಿ ನಡುವೆ ಕೌಟುಂಬಿಕ ವಿಷಯಕ್ಕೆ ದೊಡ್ಡ ಜಗಳ ಉಂಟಾಗಿದೆ. “ನನ್ನ ತಂದೆ-ತಾಯಿಗೆ ನೀನು ಸರಿಯಾಗಿ ಮರ್ಯಾದೆ ಕೊಡುವುದಿಲ್ಲ” ಎಂದು ಪತಿ ರಾಜೇಶ್ ಪತ್ನಿಗೆ ಬೈದಿದ್ದರು. ಇದೇ ಕಾರಣಕ್ಕೆ ತೀವ್ರ ಬೇಸರಗೊಂಡಿದ್ದ ಲಕ್ಷ್ಮೀಪ್ರಿಯಾ, ನಿನ್ನೆ ರಾತ್ರಿ ರಾಜೇಶ್ ನೈಟ್ ಡ್ಯೂಟಿಗೆ ತೆರಳಿದ್ದಾಗ ಇತ್ತ ಕ್ವಾಟ್ರಸ್​​ನಲ್ಲಿ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ.

ಪತಿ ಮತ್ತು ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

ಇನ್ನು ಘಟನೆ ನಡೆದ ಬೆನ್ನಲ್ಲೇ ಮೃತ ಲಕ್ಷ್ಮೀಪ್ರಿಯಾ ಪೋಷಕರು, ರಾಜೇಶ್​ ಮತ್ತು ಅವರ ಕುಟುಂಬದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮದುವೆಯಾದಾಗಿನಿಂದಲೂ ರಾಜೇಶ್ ಆರಾಧ್ಯ ಹಾಗೂ ಆತನ ಕುಟುಂಬ ಸದಸ್ಯರು ಲಕ್ಷ್ಮೀಪ್ರಿಯಾಗೆ ವರದಕ್ಷಿಣೆಗಾಗಿ ಮಾನಸಿಕ ಹಾಗೂ ದೈಹಿಕವಾಗಿ ತೀವ್ರ ಹಿಂಸೆ ನೀಡುತ್ತಿದ್ದರು. ನಿನ್ನೆ ನಡೆದ ಜಗಳ ಹಾಗೂ ಈ ಹಿಂದಿನ ಕಿರುಕುಳವೇ ಮಗಳ ಆತ್ಮಹತ್ಯೆಗೆ ನೇರ ಕಾರಣ ಎಂದು ಅವರು ಆರೋಪಿಸಿದ್ದಾರೆ.

ಕೆ.ಆರ್.ಪುರಂ ಠಾಣೆಯಲ್ಲಿ ಕೇಸ್ ದಾಖಲು

ಮೃತ ಲಕ್ಷ್ಮೀಪ್ರಿಯಾ ಪೋಷಕರು ನೀಡಿದ ದೂರಿನ ಅನ್ವಯ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪತಿ ರಾಜೇಶ್ ಆರಾಧ್ಯ ಹಾಗೂ ಆತನ ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಸದ್ಯ ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:12 pm, Sat, 23 May 26

Pradeep Chikkati

ಕ್ರೈಂ ವರದಿಗಾರನಾಗಿ ಟಿವಿ9 ಕನ್ನಡದಲ್ಲಿ ಕೆಲಸ

Read More
Follow Us