ಹೆಚ್​​.ಸಿ. ಮಹದೇವಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ: ರಾಜ್ಯಪಾಲರಿಗೆ ದೂರು ಸಲ್ಲಿಕೆ

ಕಾಂಗ್ರೆಸ್ ನಾಯಕ ಹೆಚ್.ಸಿ. ಮಹದೇವಪ್ಪ ವಿರುದ್ಧ ಸಮಾಜ ಕಲ್ಯಾಣ ಇಲಾಖೆಯ ಟೆಂಡರ್‌ಗಳಲ್ಲಿ ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗ ಎಸಗಿರುವ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬೆಂಗಳೂರಿನ ವ್ಯಕ್ತಿಯೋರ್ವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಅಲ್ಲದೆ, ಆರೋಪಗಳು ಸಾಬೀತಾದಲ್ಲಿ ಸಾರ್ವಜನಿಕ ನಿಧಿಗೆ ಉಂಟಾದ ನಷ್ಟವನ್ನು ವಸೂಲಿ ಮಾಡುವುದರ ಜೊತೆಗೆ ಮಹದೇವಪ್ಪ ಅವರನ್ನು ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.

ಹೆಚ್​​.ಸಿ. ಮಹದೇವಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ: ರಾಜ್ಯಪಾಲರಿಗೆ ದೂರು ಸಲ್ಲಿಕೆ
H.C.ಮಹದೇವಪ್ಪ
Image Credit source: HC Mahadevappa X Account

Updated on: Jun 17, 2026 | 9:31 AM

ಬೆಂಗಳೂರು, ಜೂನ್​​ 17: ಕಾಂಗ್ರೆಸ್ ಶಾಸಕ H.C.ಮಹದೇವಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಬೆಂಗಳೂರು ನಿವಾಸಿಯೊಬ್ಬರು ಈ ಸಂಬಂಧ ರಾಜ್ಯಪಾಲರಿಗೆ ದೂರು ಸಲ್ಲಿಕೆ ಮಾಡಿದ್ದಾರೆ. ಹೆಚ್​.ಸಿ.ಮಹದೇವಪ್ಪ ಸಚಿವರಾಗಿದ್ದ ಅವಧಿಯಲ್ಲಿ ಸಾಮಾಜಿಕ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KREIS) ಹಾಗೂ ಅಂಬೇಡ್ಕರ್ ಅಭಿವೃದ್ಧಿ ನಿಗಮ/ಮಂಡಳಿಯ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ, ಭ್ರಷ್ಟಾಚಾರ, ದಾಖಲೆಗಳ ನಕಲಿ ಸೃಷ್ಟಿ ಹಾಗೂ ಅಧಿಕಾರ ದುರುಪಯೋಗ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮನವಿಯ ಪ್ರಕಾರ, ಹೆಚ್.ಸಿ. ಮಹದೇವಪ್ಪ ಅವರು ಸಾಮಾಜಿಕ ಕಲ್ಯಾಣ ಸಚಿವರಾಗಿದ್ದ ಅವಧಿಯಲ್ಲಿ KREIS ಅಡಿಯಲ್ಲಿ ನಡೆದ ಹಲವು ಟೆಂಡರ್‌ಗಳನ್ನು ಪಾರದರ್ಶಕ ಹಾಗೂ ಸ್ಪರ್ಧಾತ್ಮಕ ಪ್ರಕ್ರಿಯೆಯ ಬದಲು ನಿರ್ದಿಷ್ಟ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಅನುಕೂಲವಾಗುವಂತೆ ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸಂಸ್ಥೆಗಳು ನಕಲಿ, ತಿರುಚಿದ ಹಾಗೂ ನಕಲಿ ಅನುಭವ ಪ್ರಮಾಣಪತ್ರಗಳು, ಯೋಜನೆ ಪೂರ್ಣಗೊಳಿಸಿದ ದಾಖಲೆಗಳು ಮತ್ತು ಇತರೆ ಪೂರಕ ಮಾಹಿತಿ ನೀಡಿ ಟೆಂಡರ್ ಅರ್ಹತೆ ಪಡೆದಿವೆ ಎಂದೂ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ನಾಳೆಯೇ ಪರಿಷತ್​​ ಚುನಾವಣೆ; 5ನೇ ಅಭ್ಯರ್ಥಿ ಗೆಲುವಿಗೆ ‘ಕೈ’ ತಂತ್ರ, ಏಕೈಕ ಕ್ಯಾಂಡಿಡೇಟ್​​ ವಿಜಯಕ್ಕೆ ಜೆಡಿಎಸ್​​ ಕಸರತ್ತು

ಹೀಗಾಗಿ ಸ್ವತಂತ್ರ, ನಿಷ್ಪಕ್ಷಪಾತ ಮತ್ತು ಕಾಲಮಿತಿಯೊಳಗಿನ ತನಿಖೆ ನಡೆಸುವಂತೆ ಹಾಗೂ ಟೆಂಡರ್ ಪ್ರಕ್ರಿಯೆ, ಅರ್ಹತಾ ದಾಖಲೆಗಳು, ಸರ್ಕಾರಿ ಅಧಿಕಾರಿಗಳ ಪಾತ್ರ, GeM ಪೋರ್ಟಲ್ ನಿಯಮ ಪಾಲನೆ ಬಗ್ಗೆ ಸಮಗ್ರ ಪರಿಶೀಲನೆ ನಡೆಸುವಂತೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ. ಅಲ್ಲದೆ, ಆರೋಪಗಳು ಸಾಬೀತಾದಲ್ಲಿ ಸಾರ್ವಜನಿಕ ನಿಧಿಗೆ ಉಂಟಾದ ನಷ್ಟವನ್ನು ವಸೂಲಿ ಮಾಡುವುದರ ಜೊತೆಗೆ ಹೆಚ್.ಸಿ. ಮಹದೇವಪ್ಪ ಅವರನ್ನು ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us