
ಬೆಂಗಳೂರು, ಜೂನ್ 22: ಡಿಸಿಎಂ ಜಿ. ಪರಮೇಶ್ವರ್ (G Parameshwara) ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದರು. ವೈರಲ್ ಸೋಂಕಿನಿಂದ ಬಳಲಿದ್ದ ಅವರು, ವೈದ್ಯರ ಸಲಹೆಯಂತೆ ವಿಶ್ರಾಂತಿಯಲ್ಲಿದ್ದರು. ಅನಾರೋಗ್ಯದ ಮಧ್ಯೆ ವಿಧಾನಪರಿಷತ್ ಚುನಾವಣೆಯಲ್ಲಿ ಮತ ಕೂಡ ಚಲಾಯಿಸಿದ್ದರು. ಇದೀಗ ಒಂದು ವಾರದ ನಂತರ ಕಾಣಿಸಿಕೊಂಡರು. ಇಲಾಖೆಯ ಕೆಲಸ ನಿಮಿತ್ತ ವಿಧಾನಸೌಧಕ್ಕೆ ಬಂದಿದ್ದ ಪರಮೇಶ್ವರ್, ಇದೇ ವೇಳೆ ಕಂದಾಯ ಇಲಾಖೆಯ ಹಿರಿಯ ಅಧಿಕಾರಗಳೊಂದಿಗೆ ಸಭೆ ಮಾಡಿ ಸಲಹೆ, ಸೂಚನೆಗಳನ್ನು ನೀಡಿದ್ದಾರೆ.
ವಿಧಾನಸೌಧದಲ್ಲಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ಮಾಡಿ ಡಿಸಿಎಂ ಜಿ. ಪರಮೇಶ್ವರ್, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಚುರಕುಗೊಳಿಸಬೇಕು. ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಡ್ತಿ ನೀಡುವ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ವಿಳಂಬ ಉಂಟಾಗಬಾರದು. ಜೇಷ್ಠತಾ ಪಟ್ಟಿಯನ್ನು ಶೀಘ್ರ ಪ್ರಕಟಿಸಿ, ನಿಯಮಾನುಸಾರ ಪಾರದರ್ಶಕವಾಗಿ ಬಡ್ತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ಇದನ್ನೂ ಓದಿ: ಪರಿಷತ್ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್: ಆಣೆ ಪ್ರಮಾಣಕ್ಕೆ ಮುಂದಾದ ಬಿಜೆಪಿಗರಿಗೆ ಹೆಚ್.ಡಿ. ಕುಮಾರಸ್ವಾಮಿ ಕಿವಿಮಾತು
ಕಂದಾಯ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸಲು ಸಹಾಯಕ ಆಯುಕ್ತರಿಗೆ (AC) ಹೆಚ್ಚಿನ ಜವಾಬ್ದಾರಿ ನೀಡಬೇಕು. ಬಾಕಿ ಉಳಿದಿರುವ ಕಡತಗಳನ್ನು ಶೀಘ್ರ ವಿಲೇವಾರಿ ಮಾಡಿದೆ. ಪರವಾನಗಿ ಭೂಮಾಪಕರ ಸಮಸ್ಯೆಗಳ ಕುರಿತು ಗಮನ ಹರಿಸಬೇಕು. ಭೂಮಾಪಕರ ಸಭೆಯನ್ನು ಕರೆದು ಅವರ ಅಹವಾಲುಗಳು ಹಾಗೂ ಬೇಡಿಕೆಗಳನ್ನು ಆಲಿಸಬೇಕು. ಭೂಮಾಪಕರ ಸೇವಾ ಹಾಗೂ ವೃತ್ತಿಪರ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಂಡು, ತ್ವರಿತವಾಗಿ ಇತ್ಯರ್ಥಪಡಿಸಬೇಕು ಎಂದರು.
ಇ-ಪೌತಿ ಖಾತೆ ಸೇರಿದಂತೆ ಇಲಾಖೆಯ ಎಲ್ಲಾ ಆನ್ಲೈನ್ ಮತ್ತು ಸಾರ್ವಜನಿಕ ಸೇವೆಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ನಾಗರಿಕರು ಕಚೇರಿಗಳಿಗೆ ಅನಗತ್ಯವಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗದಂತೆ ಸೇವೆಗಳ ವಿತರಣೆಯಲ್ಲಿ ದಕ್ಷತೆ ಮತ್ತು ಪಾರದರ್ಶಕತೆ ಕಾಪಾಡಬೇಕು. ಭೂ ದಾಖಲೆ, ಖಾತೆ ಬದಲಾವಣೆ, ಸರ್ವೇ ಕಾರ್ಯ, ಮ್ಯುಟೇಷನ್ ಹಾಗೂ ಇತರೆ ಕಂದಾಯ ಸೇವೆಗಳ ವಿಲೇವಾರಿಯಲ್ಲಿ ವಿಳಂಬ ಕಡಿಮೆ ಮಾಡುವ ನಿಟ್ಟಿನಲ್ಲಿ ನಿರಂತರ ಮೇಲ್ವಿಚಾರಣೆ ನಡೆಸುವಂತೆ ನಿರ್ದೇಶಿಸಿದರು.
ಇಲಾಖೆಯ ಎಲ್ಲಾ ಕಾರ್ಯಗಳ ಪ್ರಗತಿಯನ್ನು ನಿಯಮಿತವಾಗಿ ಪರಿಶೀಲಿಸಿ, ಗುರಿ ಸಾಧನೆಯತ್ತ ಗಮನ ಹರಿಸಬೇಕು. ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಆಡಳಿತಾತ್ಮಕ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡುವಂತೆ ಅಧಿಕಾರಿಗಳಿಗೆ ಡಿಸಿಎಂ ಜಿ. ಪರಮೇಶ್ವರ್ ಸೂಚನೆ ನೀಡಿದರು.
ವರದಿ: ಈರಣ್ಣ ಬಸವ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:27 pm, Mon, 22 June 26