
ಬೆಂಗಳೂರು, ಸೆ.9: ಜೂನ್ 24ರಂದು ಸಚಿವ ಸತೀಶ್ ಜಾರಕಿಹೊಳಿ ಅವರ ಭಾವ ವೈ. ಮಂಜುನಾಥ್ ಅವರ ಮೇಲೆ ಇಡಿ ದಾಳಿಯನ್ನು ನಡೆಸಿತ್ತು. ಇದೀಗ ಅದರ ಮುಂದುವರಿದ ತನಿಖೆಯ ಭಾಗವಾಗಿ ಲೋಕೋಪಯೋಗಿ (PWD) ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು (ಸೆಪ್ಟೆಂಬರ್ 9) ಮುಂಜಾನೆಯಿಂದಲೇ ಮೆಗಾ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.ಅಕ್ರಮ ಹಣ ವರ್ಗಾವಣೆ ಹಾಗೂ ಅಬಕಾರಿ ಇಲಾಖೆಯಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಅಕ್ರಮದ ಆರೋಪಗಳಿಗೆ ಸಂಬಂಧಿಸಿದಂತೆ ಈ ಬೃಹತ್ ಕಾರ್ಯಾಚರಣೆ ನಡೆದಿದೆ.
ಇಡಿ ಅಧಿಕಾರಿಗಳ ಪ್ರಾಥಮಿಕ ತನಿಖೆಯ ವೇಳೆ ಬರೋಬ್ಬರಿ 178 ಕೋಟಿ ರೂ.ಗೂ ಅಧಿಕ ಅಬಕಾರಿ ಅಕ್ರಮ ನಡೆದಿರುವ ಸುಳಿವು ಲಭ್ಯವಾಗಿದೆ. ಅಷ್ಟೇ ಅಲ್ಲದೆ, ಕೋಟ್ಯಾಂತರ ರೂಪಾಯಿ ಮೊತ್ತದ ವಿದೇಶಿ ಹಣ ವರ್ಗಾವಣೆ ನಡೆದಿರುವ ಶಂಕೆಯಿದ್ದು, ಅಧಿಕಾರಿಗಳು ಆಸ್ತಿ ಪಾಸ್ತಿ ಕಡತಗಳು, ಬ್ಯಾಂಕ್ ಖಾತೆಗಳು ಹಾಗೂ ಮಹತ್ವದ ದಾಖಲೆಗಳ ಸಮಗ್ರ ತನಿಖೆ ನಡೆಸುತ್ತಿದ್ದಾರೆ. ಪ್ರಸ್ತುತ PWD ಸಚಿವ ಸತೀಶ್ ಜಾರಕಿಹೊಳಿ ಅವರು ಬೆಂಗಳೂರಿನ ತಮ್ಮ ಸರ್ಕಾರಿ ನಿವಾಸದಲ್ಲೇ ಇದ್ದು, ಇಡಿ ಅಧಿಕಾರಿಗಳ ತಂಡ ಸ್ಥಳದಲ್ಲೇ ಸಚಿವರು ಹಾಗೂ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸುತ್ತಿದೆ.
ಸುಮಾರು 25ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಅತ್ಯಂತ ಯೋಜಿತವಾಗಿ ಬೆಳಗಿನ ಜಾವ 4 ಗಂಟೆಯಿಂದಲೇ ದಾಳಿಗೆ ಯೋಜನೆ ರೂಪಿಸಿಕೊಂಡು, ಮುಂಜಾನೆ 7 ಗಂಟೆಗೆ ಭದ್ರತಾ ಸಿಬ್ಬಂದಿಯೊಂದಿಗೆ ಏಕಕಾಲಕ್ಕೆ ಸಚಿವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಚಿವರ ಅಧಿಕೃತ ಹಾಗೂ ಸರ್ಕಾರಿ ನಿವಾಸ ಸೇರಿದಂತೆ ರಾಜಧಾನಿಯ ಒಟ್ಟು 6 ಕಡೆಗಳಲ್ಲಿ ಪರಿಶೀಲನೆ ಮುಂದುವರಿದಿದೆ. ಸಚಿವರ ಆಪ್ತ ಮಂಜುನಾಥ್ ಅವರಿಗೆ ಸೇರಿದ ಕಚೇರಿಗಳು ಹಾಗೂ ಮನೆಗಳ ಮೇಲೆ ಗೋವಾದಲ್ಲೂ ಇಡಿ ತಂಡಗಳು ಹಠಾತ್ ದಾಳಿ ನಡೆಸಿ ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿವೆ.
ಇದನ್ನೂ ಓದಿ: ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿ (ಭಾವ) ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿರುವ ವೈ. ಮಂಜುನಾಥ್ ಅವರಿಗೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ದಾಳಿಯನ್ನು ನಡೆಸಿದರು. ಅಲ್ಲಿಂದ ಸತೀಶ್ ಜಾರಕಿಹೊಳಿಗೆ ಸಂಕಷ್ಟ ಶುರುವಾಗಿತ್ತು. ಬೇನಾಮಿ ಆಸ್ತಿ ಗಳಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪಗಳ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಮುಂಜಾನೆ 5.30 ಕ್ಕೆ ಏಕಕಾಲದಲ್ಲಿ ಬೆಂಗಳೂರು, ಬೆಳಗಾವಿ, ಮೈಸೂರು ಸೇರಿದಂತೆ ರಾಜ್ಯದ ಒಟ್ಟು 6 ಪ್ರಮುಖ ಸ್ಥಳಗಳಲ್ಲಿ ಭಾರಿ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಇದೀಗ ಆ ತನಿಖೆಯ ಮುಂದುವರಿದ ಭಾಗವಾಗಿ ಈ ದಾಳಿಯನ್ನು ನಡೆಸಲಾಗಿದೆ.
ಕರ್ನಾಟಕದ ಲೋಕೋಪಯೋಗಿ (PWD) ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಭಾವ (ಸಹೋದರಿಯ ಪತಿ), ಬೆಳಗಾವಿ ವಲಯ ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಇತ್ತೀಚೆಗೆ ಜೂನ್ 24ರಂದು ಇದೇ ಸಚಿವ ಸತೀಶ್ ಜಾರಕಿಹೊಳಿ ಅವರ ಬಾಮೈದ ಮಂಜುನಾಥ್ ಮನೆ ಹಾಗೂ ಕಚೇರಿಗಳ ಮೇಲೆ ಮೊದಲ ಬಾರಿಗೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು, ಬೃಹತ್ ಪ್ರಮಾಣದ ನಗದು, ಚಿನ್ನಾಭರಣ ಮತ್ತು ಅಕ್ರಮ ಆಸ್ತಿ ದಾಖಲೆಗಳನ್ನು ಜಪ್ತಿ ಮಾಡಿದ್ದರು. ಬರೋಬ್ಬರಿ 5.5 ಕೋಟಿ ರೂ. ನಗದು ಹಣ ಜಪ್ತಿ, 7.8 ಕೋಟಿ ರೂ. ಮೌಲ್ಯದ ಬಂಗಾರ ಹಾಗೂ ಬೆಳ್ಳಿ ಆಭರಣಗಳು ಪತ್ತೆ. 3.3 ಲಕ್ಷ ಮೌಲ್ಯದ ವಿವಿಧ ದೇಶಗಳ ವಿದೇಶಿ ನಾಣ್ಯ/ಕರೆನ್ಸಿ ಜಪ್ತಿ ಮಾಡಲಾಗಿತ್ತು.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:25 am, Wed, 9 September 26