‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಎಂದು ಪೋಸ್ಟರ್ ಅಂಟಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್
ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರನ್ನು ಕರೆಂಟ್ ಕಳ್ಳ ಎಂದು ಅವಹೇಳನಕಾರಿ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಆರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಬೆಂಗಳೂರು, (ನವೆಂಬರ್ 16): ಅಕ್ರಮ ವಿದ್ಯುತ್ ಸಂಪರ್ಕ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು, ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಅವರನ್ನು ಕರೆಂಟ್ ಕಳ್ಳ ಎಂದು ಬಿತ್ತಿಪತ್ರ ಅಂಟಿಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದ ಹೋಡೆಗಳಿಗೆ ಪೋಸ್ಟರ್ ಅಂಟಿಸಿದ್ದು, ಈ ಸಂಬಂಧ ಜೆಡಿಎಸ್ ನಗರ ಘಟಕದ ಅಧ್ಯಕ್ಷ ರಮೇಶ್ಗೌಡ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತರಾದ ಬಿಂದುಗೌಡ, ನವೀನ್ಗೌಡ ಸೇರಿದಂತೆ ಒಟ್ಟು 6 ಜನರು ವಿರುದ್ಧ ಎಫ್ಐಆರ್ ದಾಖಲಾಗಿದೆ.
ಜೆಡಿಎಸ್ ಕಚೇರಿಗೆ ಅತಿಕ್ರಮ ಪ್ರವೇಶ ಮಾಡಿ ಪೋಸ್ಟರ್ ಅಂಟಿಸಿದ್ದಾರೆ. ಹಾಗೂ ಇದನ್ನು ತಡೆಯಲು ಬಂದ ಸೆಕ್ಯೂರಿಟಿ ಮೇಲೆ ಕೀ ಬಂಚ್ನಿಂದ ಹಲ್ಲೆ ಮಾಡಿದ್ದಾರೆ ಎಂದು ರಮೇಶ್ ಗೌಡ ಅವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅವಹೇಳನಕಾರಿ ಪೋಸ್ಟರ್ ಅಂಟಿಸಿ ಸೆಕ್ಯೂರಿಗೆ ಬೆದರಿಸಿದ ಆರೋಪ ಮೇರೆಗೆ ಶ್ರೀರಾಮಪುರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 448, 504, 324, 506, 149 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದಲ್ಲಿ ಬಿಂದುಗೌಡ A-5, ನವೀನ್ಗೌಡ A-6 ಆರೋಪಿಯಾಗಿದ್ದಾರೆ.
ಇದನ್ನೂ ಓದಿ: ಜೆಡಿಎಸ್ ಕಚೇರಿಯ ಗೋಡೆಗೆ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಸ್ಟರ್ ಅಂಟಿಸಿದ ಕಾಂಗ್ರೆಸ್ ಕಾರ್ಯಕರ್ತರು
ಕುಮಾರಸ್ವಾಮಿ ಅವರು ತಮ್ಮ ನಿವಾಸದ ದೀಪಾಲಂಕಾರಕ್ಕೆ ಬೀದಿ ದೀಪದ ಕಂಬದಿಂದ ಅನಧಿಕೃತವಾಗಿ ವಿದ್ಯುತ್ ಪಡೆದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಅಲ್ಲದೇ ಈ ಬಗ್ಗೆ ವಿಡಿಯೋ ಸಹ ಬಿಡುಗಡೆ ಮಾಡಿತ್ತು. ಈ ಸಂಬಂಧ ಬೆಸ್ಕಾಂ ಸಿಬ್ಬಂದಿ ಸಹ ಹೆಚ್ಡಿಕೆ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಬಳಿಕ ಮೊನ್ನೇ ರಾತ್ರಿ ಅಂದರೆ ಮಂಗಳವಾರ ಬೆಂಗಳೂರಿನ ಜೆಡಿಎಸ್ (JDS) ಕಚೇರಿಯ ಗೋಡೆಗಳಲ್ಲಿ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಎಂಬ ಪೋಸ್ಟರ್ಗಳನ್ನು ಅಂಟಿಸಿದ್ದರು ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ಕುಮಾರಸ್ವಾಮಿ ವಿರುದ್ಧ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಭಾರತೀಯ ವಿದ್ಯುತ್ ಕಾಯ್ದೆ 135ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ