ಬಿಬಿಎಂಪಿ ಆವರಣದಲ್ಲಿ ಅಗ್ನಿ ದುರಂತದ ತನಿಖೆಗೆ ಸೂಚನೆ: ಸಿದ್ದರಾಮಯ್ಯ

ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಿಸಲಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಬಿಬಿಎಂಪಿ ಆವರಣದಲ್ಲಿ ಅಗ್ನಿ ದುರಂತದ ತನಿಖೆಗೆ ಸೂಚನೆ: ಸಿದ್ದರಾಮಯ್ಯ
ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್
Edited By: Rakesh Nayak Manchi

Updated on: Aug 11, 2023 | 10:42 PM

ಬೆಂಗಳೂರು, ಆಗಸ್ಟ್ 11: ಬಿಬಿಎಂಪಿ (BBMP) ಕೇಂದ್ರ ಕಚೇರಿ ಆವರಣದಲ್ಲಿನ ಕಟ್ಟದಲ್ಲಿ ನಡೆದ ಅಗ್ನಿ ಅವಘಡ ಪ್ರಕರಣ ಸಂಬಂಧ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ (D. K. Shivakumar) ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಬೆಳಗಾವಿಯಿಂದ ಬೆಂಗಳೂರಿಗೆ ಬರುತ್ತಿದ್ದಂತೆ ನೇರವಾಗಿ ಆಸ್ಪತ್ರೆಗೆ ಭೇಟಿ ನೀಡಿದರು.

ನಂತರ ಮಾತನಾಡಿದ ಸಿದ್ದರಾಮಯ್ಯ, ಘಟನೆ ಸಂಬಂಧ ತನಿಖೆಗೆ ಸೂಚಿಸಿದ್ದೇನೆ ಎಂದರು. ಘಟನೆಯಲ್ಲಿ ಒಬ್ಬರಿಗೆ ಶೇ.38ರಷ್ಟು ಸುಟ್ಟು ಗಾಯಗಳಾಗಿವೆ. 48 ಗಂಟೆಗಳ ಕಾಲ ನಿಗಾದಲ್ಲಿ ಇಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಎಲ್ಲರನ್ನೂ ಐಸಿಯುಗೆ ಶಿಫ್ಟ್ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದರು.

ಘಟನೆಯಲ್ಲಿ ಸಿಬ್ಬಂದಿ ಮುಖ, ಕೈಗಳಿಗೆ ಗಾಯಗಳಾಗಿವೆ, ಅದೃಷ್ಟವಶಾತ್‌ ಕಣ್ಣುಗಳಿಗೆ ಹಾನಿಯಾಗಿಲ್ಲ. ಮೇಲ್ನೋಟಕ್ಕೆ ಎಲ್ಲರೂ ಬದುಕುಳಿಯುತ್ತಾರೆಂಬ ವಿಶ್ವಾಸವಿದೆ. ಆದಷ್ಟು ಬೇಗ ಗುಣಮುಖರಾಗಲಿ ಅಂತಾ ಪ್ರಾರ್ಥಿಸುತ್ತೇನೆ. ಘಟನೆ ಹೇಗಾಯ್ತು ಎಂದು ತನಿಖೆ ನಡೆಸಲು ಆಯುಕ್ತರಿಗೆ ಸೂಚಿಸಿದ್ದೇನೆ. ಬೆಂಕಿ ಪ್ರಕರಣದ ಬಗ್ಗೆ ಎಫ್‌ಐಆರ್ ಸಹ ದಾಖಲಾಗಿದೆ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ: ಬಿಬಿಎಂಪಿ ಗುತ್ತಿಗೆದಾರರಿಂದ ದೂರು: ರಾಜ್ಯಪಾಲರನ್ನು ಭೇಟಿಯಾದ ಬಿಬಿಎಂಪಿ ಮುಖ್ಯ ಆಯುಕ್ತ

ಪಾಲಿಕೆ ಕಚೇರಿಯಲ್ಲಿ ಕ್ವಾಲಿಟಿ ಕಂಟ್ರೋಲ್ ರೂಂನಲ್ಲಿ ರೋಟಿನ್ ಮೀಟಿಂಗ್ ವೇಳೆ ಅವಘಡ ಸಂಭವಿಸಿದೆ. ಕೆಳಗಡೆ ಕೇಮಿಕಲ್ ಇದ್ದು, ಲ್ಯಾಬ್ ಟೆಸ್ಟಿಂಗ್ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ಐದು ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಅವಘಡ ಸಂಭವಿಸುತ್ತಿದ್ದಂತೆ ಇಬ್ಬರು ಅಪರೆಟರ್ಸ್ ಸುರೇಶ್ ಮತ್ತು ಆನಂದ್ ಕೆಳಗಡೆ ಬಂದಿದ್ದಾರೆ. ನಂತರ ಹೊರಗಡೆ ಬರುವಾಗ ಬೆಂಕಿ ತಗುಲಿದೆ. ಕೆಲವರಿಗೆ ಶೇ.28 ರಷ್ಟು, ಇನ್ನೂ ಕೆಲವರಿಗೆ ಶೇ.35 ರಿಂದ 40 ರಷ್ಟು ಗಾಯಗಳಾಗಿವೆ ಎಂದರು.

ಪ್ರತ್ಯೇಕವಾಗಿ ತನಿಖೆ ಮಾಡಿಸುತ್ತೇವೆ: ಡಿಕೆಶಿ

ಗಾಯಾಳುಗಳ ಆರೋಗ್ಯ ವಿಚಾರಿಸಿದ ನಂತರ ಮಾತನಾಡಿದ ಡಿಕೆ ಶಿವಕುಮಾರ್, ಬೆಂಕಿ ಪ್ರಕರಣದ ಬಗ್ಗೆ ಪ್ರತ್ಯೇಕವಾಗಿ ತನಿಖೆ ಮಾಡಿಸುತ್ತೇವೆ. ಗಾಯಗೊಂಡಿರುವ ವ್ಯಕ್ತಿಗಳಿಗೆ ಗುಣಮಟ್ಟದ ಚಿಕಿತ್ಸೆ ಕೊಡಿಸುವ ಕೆಲಸ ಮಾಡುತ್ತೇವೆ. ಈ ಬಗ್ಗೆ ವೈದ್ಯಾಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:38 pm, Fri, 11 August 23

Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
Follow Us