ಹೆಚ್ಚುವರಿ ಶುಲ್ಕ ವಸೂಲಿ ಸೇರಿದಂತೆ ವಿವಿಧ ನಿಯಮ ಉಲ್ಲಂಘನೆ: ಖಾಸಗಿ ಬಸ್ಗಳ ವಿರುದ್ಧ 3,756 ಕೇಸ್
ಗಣೇಶ ಚತುರ್ಥಿ ಹಬ್ಬದ ವೇಳೆ ಪ್ರಯಾಣಿಕರಿಂದ ಹೆಚ್ಚುವರಿ ದರ ವಸೂಲಿ ಹಾಗೂ ನಿಯಮ ಉಲ್ಲಂಘಿಸಿದ ಖಾಸಗಿ ಬಸ್ಗಳ ವಿರುದ್ಧ ಕಾರ್ಯಾಚರಣೆ ನಡೆಸಿದ ಆರ್ಟಿಒ ಅಧಿಕಾರಿಗಳು, 3,756 ಪ್ರಕರಣ ದಾಖಲಿಸಿ 33 ವಾಹನಗಳನ್ನು ಜಪ್ತಿ ಮಾಡಿದ್ದಾರೆ. ದಾಖಲೆಗಳ ಪರಿಶೀಲನೆ ಮತ್ತು ತಪಾಸಣೆ ವೇಳೆ ಹಲವು ನಿಯಮ ಉಲ್ಲಂಘನೆಗಳು ಕಂಡುಬಂದಿದ್ದು, ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರಿಂದ ಬಂದ ದೂರುಗಳನ್ನು ಹೆಚ್ಚಿನ ಕ್ರಮಕ್ಕಾಗಿ ಸಂಬಂಧಪಟ್ಟ ನೋಂದಣಿ ಪ್ರಾಧಿಕಾರಗಳಿಗೆ ಕಳುಹಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರೊಬ್ಬರು ಮಾಹಿತಿ ನೀಡಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 18: ಹೆಚ್ಚುವರಿ ಶುಲ್ಕ ವಸೂಲಿ ಸೇರಿದಂತೆ ವಿವಿಧ ನಿಯಮ ಉಲ್ಲಂಘನೆಗಳ ವಿರುದ್ಧ ಕರ್ನಾಟಕದಾದ್ಯಂತ ಕಳೆದ 5 ದಿನಗಳಲ್ಲಿ ಕಾರ್ಯಾಚರಣೆ ನಡೆಸಿರುವ ಆರ್ಟಿಒ ಅಧಿಕಾರಿಗಳು, ಖಾಸಗಿ ಬಸ್ಗಳ ವಿರುದ್ಧ 3,756 ಪ್ರಕರಣಗಳನ್ನು ದಾಖಲಿಸಿ, 33 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ನಿರ್ವಾಹಕರು ಪ್ರಯಾಣಿಕರಿಂದ ದುಬಾರಿ ದರ ವಸೂಲಿ ಮಾಡುತ್ತಿದ್ದಾರೆ ಎಂಬ ಹಲವು ದೂರುಗಳು ಸಾರಿಗೆ ಇಲಾಖೆಗೆ ಬಂದಿದ್ದವು. ಬೆಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣಿಸಲು ಕೆಲ ಪ್ರಯಾಣಿಕರಿಂದ 7,000 ರೂಪಾಯಿ ವಸೂಲಿ ಮಾಡಿರುವ ಆರೋಪವೂ ಕೇಳಿಬಂದಿತ್ತು.
ಒಟ್ಟು 73.6 ಲಕ್ಷ ರೂಪಾಯಿ ಸಂಗ್ರಹ
ಸೆಪ್ಟೆಂಬರ್ 11ರಿಂದ 15ರವರೆಗೆ ಆರ್ಟಿಒ ಅಧಿಕಾರಿಗಳು ಅಂತಾರಾಜ್ಯ ಸೇವೆ ಸೇರಿದಂತೆ 14,987 ಖಾಸಗಿ ಬಸ್ಗಳನ್ನು ಪರಿಶೀಲಿಸಿದ್ದಾರೆ. ಪರವಾನಗಿ ನಿಯಮ ಉಲ್ಲಂಘನೆ, ಹೆಚ್ಚುವರಿ ಶುಲ್ಕ ವಸೂಲಿ ಹಾಗೂ ತೆರಿಗೆ ವಂಚನೆ ಸೇರಿದಂತೆ ವಿವಿಧ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಅಧಿಕಾರಿಗಳು ಒಟ್ಟು 73.6 ಲಕ್ಷ ರೂಪಾಯಿ ಸಂಗ್ರಹಿಸಿದ್ದು, ಇದರಲ್ಲಿ 40.3 ಲಕ್ಷ ರೂಪಾಯಿ ದಂಡದ ಮೊತ್ತವಾಗಿದೆ.
ಇದನ್ನೂ ಓದಿ: ಆರೆಂಜ್ ಲೈನ್ ಮೆಟ್ರೋ ಡಬಲ್ ಡೆಕ್ಕರ್ಗೆ ಮತ್ತೆ ಅನುಮತಿ ಕೋರಿದ ಬಿಎಂಆರ್ಸಿಎಲ್: ಕೇಂದ್ರದ ಅನುಮತಿ ಸಿಗೋದು ಅನುಮಾನ
ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿತ್ತು. ದಾಖಲೆಗಳ ಪರಿಶೀಲನೆ ಮತ್ತು ತಪಾಸಣೆ ವೇಳೆ ಹಲವು ನಿಯಮ ಉಲ್ಲಂಘನೆಗಳು ಕಂಡುಬಂದಿದ್ದು, ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರಿಂದ ಬಂದ ದೂರುಗಳನ್ನು ಹೆಚ್ಚಿನ ಕ್ರಮಕ್ಕಾಗಿ ಸಂಬಂಧಪಟ್ಟ ನೋಂದಣಿ ಪ್ರಾಧಿಕಾರಗಳಿಗೆ ಕಳುಹಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರೊಬ್ಬರು ಮಾಹಿತಿ ನೀಡಿದ್ದಾರೆ. ಪ್ರಯಾಣಿಕರ ಲಗೇಜ್ ಸಾಗಿಸುವ ಸಂದರ್ಭದಲ್ಲೂ ಬಸ್ ನಿರ್ವಾಹಕರು ನಿಯಮ ಉಲ್ಲಂಘಿಸಿರುವುದು ಅಧಿಕಾರಿಗಳ ಪರಿಶೀಲನೆ ವೇಳೆ ಪತ್ತೆಯಾಗಿದೆ ಎನ್ನಲಾಗಿದೆ.
ಹಬ್ಬದ ಸಂದರ್ಭಗಳಲ್ಲಿ ಖಾಸಗಿ ಬಸ್ ನಿರ್ವಾಹಕರು ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿರುವುದು ಪದೇಪದೆ ಕೇಳಿಬರುತ್ತಿರುವ ಸಮಸ್ಯೆಯಾಗಿದೆ. ವಿಶೇಷವಾಗಿ ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ದುಬಾರಿ ಪ್ರಯಾಣ ದರಗಳ ಬಗ್ಗೆ ಆಗಾಗ್ಗೆ ದೂರು ನೀಡುತ್ತಿದ್ದಾರೆ. ಹೀಗಿದ್ದರೂ ಕೆಲ ಖಾಸಗಿ ಬಸ್ಗಳ ಸುಲಿಗರ ಬಗ್ಗೆ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪವೂ ಪದೇ ಪದೇ ಕೇಳಿಬರುತ್ತಿದ್ದು, ಸಾರಿಗೆ ಸಚಿವರು ಇತ್ತ ಗಮನಹರಿಸಬೇಕಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.




