ಗಣೇಶ ಚತುರ್ಥಿ ಆಚರಣೆ: ಮಾರ್ಗಸೂಚಿ ಸಡಿಲಿಕೆಗೆ ಆಗ್ರಹಿಸಿ ಗೃಹ ಸಚಿವರಿಗೆ ಶಾಸಕ ಸಿ.ಕೆ. ರಾಮಮೂರ್ತಿ ಪತ್ರ!
ಬೆಂಗಳೂರಿನಲ್ಲಿ ಗಣೇಶ ಚತುರ್ಥಿ ಆಚರಣೆಗೆ ಬಿಬಿಎಂಪಿ ಹಾಗೂ ಪೊಲೀಸರು ವಿಧಿಸಿರುವ ಕಠಿಣ ಮಾರ್ಗಸೂಚಿಗಳಿಂದ ಆಯೋಜಕರಿಗೆ ಕಿರುಕುಳವಾಗುತ್ತಿದೆ ಎಂದು ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ. ನಿಯಮಗಳನ್ನು ಸರಳಗೊಳಿಸಿ ಜನಸ್ನೇಹಿ ಕ್ರಮಗಳನ್ನು ಕೈಗೊಳ್ಳದಿದ್ದಲ್ಲಿ ಸಾರ್ವಜನಿಕರ ಪರವಾಗಿ ಹೋರಾಟ ನಡೆಸುವುದಾಗಿ ಶಾಸಕರು ಎಚ್ಚರಿಸಿದ್ದಾರೆ.

ಮುಖ್ಯಾಂಶಗಳು
- ಗಣೇಶೋತ್ಸವ ಮಾರ್ಗಸೂಚಿ ಸಡಿಲಗೊಳಿಸುವಂತೆ ಗೃಹ ಸಚಿವರಿಗೆ ಶಾಸಕ ರಾಮಮೂರ್ತಿ ಪತ್ರ.
- ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಗೆ ಪೊಲೀಸರ ಕಿರುಕುಳಕ್ಕೆ ಆಕ್ರೋಶ.
- ನಿಯಮ ಸಡಿಲಿಸದಿದ್ದರೆ ಸಾರ್ವಜನಿಕರ ಪರವಾಗಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ.
ಬೆಂಗಳೂರು, ಸೆಪ್ಟೆಂಬರ್ 13: ಗಣೇಶ ಚತುರ್ಥಿ ಹಬ್ಬದ ಆಚರಣೆಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಆಯೋಜಕರಿಗೆ ನೀಡುತ್ತಿರುವ ಕಿರುಕುಳವನ್ನು ತಡೆಯಲು ಹಾಗೂ ನಿಯಮಗಳನ್ನು ಸರಳಗೊಳಿಸಲು ಆಗ್ರಹಿಸಿ ಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಸಿ.ಕೆ. ರಾಮಮೂರ್ತಿ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.
ಸಾರ್ವಜನಿಕರಿಗೆ ಪೊಲೀಸ್ ಕಿರುಕುಳ ಆರೋಪ
ಗಣೇಶೋತ್ಸವವು ಜನರ ಧಾರ್ಮಿಕ ಭಾವನೆಗಳು ಹಾಗೂ ಸಾಂಸ್ಕೃತಿಕ ಆಚರಣೆಯ ಪ್ರಮುಖ ಭಾಗವಾಗಿದೆ. ಆದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯ ಬಿಗಿಯಾದ ಮಾರ್ಗಸೂಚಿ ಮತ್ತು ನಿಬಂಧನೆಗಳ ನೆಪದಲ್ಲಿ ಅಧಿಕಾರಿಗಳು ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಗೆ ತೊಂದರೆ ನೀಡುತ್ತಿದ್ದಾರೆ ಎಂದು ಶಾಸಕರು ಆಪಾದಿಸಿದ್ದಾರೆ. ನಿಯಮಗಳ ಹೆಸರಿನಲ್ಲಿ ಸಾರ್ವಜನಿಕರಿಗೆ ಮತ್ತು ಹಬ್ಬದ ಆಯೋಜಕರಿಗೆ ಕಿರುಕುಳ ನೀಡುತ್ತಿರುವುದು ಖಂಡನೀಯ ಎಂದಿದ್ದಾರೆ.
ಜನಸ್ನೇಹಿ ಕ್ರಮಗಳಿಗೆ ಆಗ್ರಹ
ಸಾರ್ವಜನಿಕರ ಸಾಂಪ್ರದಾಯಿಕ ಆಚರಣೆಗೆ ಅನುಕೂಲವಾಗುವಂತೆ ಹಾಲಿ ಇರುವ ಮಾರ್ಗಸೂಚಿಗಳನ್ನು ತಕ್ಷಣವೇ ಸಡಿಲಗೊಳಿಸಬೇಕು. ಹಬ್ಬದ ಸಂಭ್ರಮಕ್ಕೆ ಅಡ್ಡಿಯಾಗದಂತೆ ಸರಳ ಹಾಗೂ ಜನಸ್ನೇಹಿ ಕ್ರಮಗಳನ್ನು ಕೈಗೊಳ್ಳಬೇಕು. ಗಣೇಶೋತ್ಸವವನ್ನು ಶಾಂತಿಯುತ, ಸುವ್ಯವಸ್ಥಿತ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸಲು ಸಹಕರಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಅವರು ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಒಂದು ವೇಳೆ ಪೊಲೀಸ್ ಇಲಾಖೆ ಹಾಗೂ ಸರ್ಕಾರ ಆಯೋಜಕರಿಗೆ ಅನಗತ್ಯ ಕಿರುಕುಳ ನೀಡುವುದನ್ನು ಮುಂದುವರಿಸಿದರೆ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸಾರ್ವಜನಿಕರ ಪರವಾಗಿ ಹೋರಾಟ ನಡೆಸುವುದಾಗಿ ಶಾಸಕ ರಾಮಮೂರ್ತಿ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




