
ಬೆಂಗಳೂರು, ಸೆಪ್ಟೆಂಬರ್ 11: ಗೌರಿ ಗಣೇಶ ಹಬ್ಬ ಹಿನ್ನೆಲೆ ಸಾಲು ಸಾಲು ರಜೆ ಇರುವುದರಿಂದ ರಾಜಧಾನಿ ಬೆಂಗಳೂರಿನಿಂದ ತಮ್ಮ ಸ್ವಂತ ಊರುಗಳಿಗೆ ಪ್ರಯಾಣಿಕರು ತೆರಳುತ್ತಿದ್ದಾರೆ. ರಾಜ್ಯದ ಪ್ರಮುಖ ಜಿಲ್ಲೆಗಳು ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ತೆರಳುವ ಬಸ್ಗಳಿಗೆ ಭಾರಿ ಬೇಡಿಕೆ ವ್ಯಕ್ತವಾಗಿದ್ದು, ಬೆಂಗಳೂರಿನ ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಟರ್ಮಿನಲ್ 1 ಮತ್ತು 2 ರಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ಖಾಸಗಿ ಬಸ್ಗಳು ಟಿಕೆಟ್ ದರವನ್ನು ದುಪ್ಪಟ್ಟು ಏರಿಕೆ ಮಾಡಿರುವುದು ಸಾರ್ವಜನಿಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
ಸಾಲು ಸಾಲು ರಜೆಯನ್ನು ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್ ಆಪರೇಟರ್ಗಳು ಎಸಿ ಮತ್ತು ನಾನ್ ಎಸಿ ಸ್ಲೀಪರ್ ಕೋಚ್ಗಳ ದರವನ್ನು ಶೇಕಡಾ 40 ರಿಂದ 100 ರಷ್ಟು ಏರಿಕೆ ಮಾಡಿದ್ದಾರೆ. ‘ನೂರು-ಇನ್ನೂರು ರೂ ಹೆಚ್ಚಳವಾದರೆ ಭರಿಸಬಹುದು, ಆದರೆ 1 ರಿಂದ 2 ಸಾವಿರ ರೂಪಾಯಿಗಳಷ್ಟು ದರ ಏರಿಸಿದರೆ ಪ್ರಯಾಣಿಸುವುದು ಹೇಗೆ’ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಪ್ರಯಾಣಿಕರನ್ನು ಸುಲಿಗೆ ಮಾಡುತ್ತಿದ್ದರೂ ಟಿಕೆಟ್ ಬೆಲೆ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಳ್ಳದ ಆರ್ಟಿಒ ಅಧಿಕಾರಿಗಳ ಕಾರ್ಯವೈಖರಿಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸುವ ದೃಷ್ಟಿಯಿಂದ ಇಂದಿನಿಂದ ಎರಡು ದಿನಗಳ ಕಾಲ ಬೆಂಗಳೂರಿನಿಂದ 2,400 ಹೆಚ್ಚುವರಿ ವಿಶೇಷ ಕೆಎಸ್ಆರ್ಟಿಸಿ ಬಸ್ಗಳು ಕಾರ್ಯಾಚರಣೆ ನಡೆಸುತ್ತಿವೆ. ಇದರ ಜೊತೆಗೆ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ಬಸ್ಗಳನ್ನೂ ಹೊರರಾಜ್ಯಗಳಿಗೆ ಸೇವೆಗೆ ನಿಯೋಜಿಸಲಾಗಿದೆ.
ಇದನ್ನೂ ಓದಿ: ಗಣೇಶ ಚತುರ್ಥಿ ಹಬ್ಬದ ವಿಶೇಷ: ಯಶವಂತಪುರ ಹಾಗೂ ಬೀದರ್ ನಡುವೆ ವಿಶೇಷ ರೈಲು ಸಂಚಾರ
ಇದನ್ನೂ ಓದಿ: ಬಳ್ಳಾರಿಯಲ್ಲಿ ಕೊಲ್ಕತ್ತಾ ಕಲಾವಿದರ ಕೈಚಳಕ: 20 ಅಡಿ ಎತ್ತರದ ರಾಧಾಕೃಷ್ಣ ಮಾದರಿ ಗಣಪತಿಗಳಿಗೆ ಫುಲ್ ಡಿಮ್ಯಾಂಡ್
ಇನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಲ್ಲಿ ಮುಂಗಡ ಆಸನ ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ. ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಬುಕಿಂಗ್ ಮಾಡಿದರೆ ಶೇಕಡಾ 5 ರಷ್ಟು ರಿಯಾಯಿತಿ ಸಿಗಲಿದೆ. ಹಾಗೆಯೇ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ಗಳನ್ನು ಒಟ್ಟಿಗೆ ಕಾಯ್ದಿರಿಸಿದಲ್ಲಿ ಮರಳಿ ಬರುವ ಪ್ರಯಾಣ ದರದಲ್ಲಿ ಶೇಕಡಾ 10 ರಷ್ಟು ವಿಶೇಷ ರಿಯಾಯಿತಿ ದೊರೆಯಲಿದೆ ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:35 pm, Fri, 11 September 26