
ಬೆಂಗಳೂರು, ಸೆಪ್ಟೆಂಬರ್ 13: ಸೋಮವಾರ ಗಣೇಶೋತ್ಸವ ಹಿನ್ನೆಲೆ ಸಾರ್ವಜನಿಕ ಪೆಂಡಾಲ್ಗಳಿಗೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ಕಲ್ಪಿಸಲು ಬೆಸ್ಕಾಂ ಮಹತ್ವದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸ್ಥಳೀಯ ಪ್ರಾಧಿಕಾರಗಳಿಂದ ನಿರಾಕ್ಷೇಪಣಾ ಪತ್ರ (ಎನ್ಒಸಿ) ಪಡೆದಿರುವುದನ್ನು ಖಚಿತಪಡಿಸಿಕೊಂಡ ನಂತರವೇ ಅಧಿಕಾರಿಗಳು ಪೆಂಡಾಲ್ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಸೂಚಿಸಲಾಗಿದೆ. ಪೆಂಡಾಲ್ಗಳಲ್ಲಿ ವೈರಿಂಗ್ ಸಂಪೂರ್ಣ ಸುರಕ್ಷತಾ ನಿಯಮಗಳಂತೆಯೇ ಇರಬೇಕು ಹಾಗೂ ವಿದ್ಯುತ್ ಸಂಪರ್ಕ ನೀಡುವ ಮುನ್ನ ಅರ್ಥ್ ಲೀಕೇಜ್ ಸರ್ಕ್ಯೂಟ್ ಬ್ರೇಕರ್ ಅಳವಡಿಸುವುದು ಕಡ್ಡಾಯವಾಗಿದೆ.
ಗಣೇಶ ಮೂರ್ತಿ ಮೆರವಣಿಗೆ ಸಾಗುವ ಮಾರ್ಗಗಳಲ್ಲಿನ ವಿದ್ಯುತ್ ತಂತಿಗಳನ್ನು ಮೊದಲೇ ಪರಿಶೀಲಿಸಿ, ಜೋತುಬಿದ್ದ ಅಥವಾ ಸಡಿಲವಾದ ತಂತಿಗಳನ್ನು ತಕ್ಷಣ ಸರಿಪಡಿಸಲು ಸಿಬ್ಬಂದಿಗೆ ನಿರ್ದೇಶಿಸಲಾಗಿದೆ. ವಿದ್ಯುತ್ ಪರಿಕರಗಳ ಬಳಿ ‘ಡೇಂಜರ್ ಝೋನ್’ ಗುರುತು ಹಾಕಬೇಕು, ಪ್ರಿ-ಪೇಯ್ಡ್ ಮೀಟರ್ ಲಭ್ಯವಿಲ್ಲದಿದ್ದಲ್ಲಿ ಸಾಮಾನ್ಯ ಮೀಟರ್ ಅಳವಡಿಸಿ ಬಳಕೆಯ ಪ್ರಮಾಣವನ್ನು ತಂತ್ರಾಂಶದಲ್ಲಿ ನಮೂದಿಸಬೇಕು.
ಇದನ್ನೂ ಓದಿ: ಗಣೇಶ ಚತುರ್ಥಿ ಆಚರಣೆ: ಮಾರ್ಗಸೂಚಿ ಸಡಿಲಿಕೆಗೆ ಆಗ್ರಹಿಸಿ ಗೃಹ ಸಚಿವರಿಗೆ ಶಾಸಕ ಸಿ.ಕೆ. ರಾಮಮೂರ್ತಿ ಪತ್ರ!
ಇದಲ್ಲದೆ, ಯಾವುದೇ ಕಾರಣಕ್ಕೂ ವಿದ್ಯುತ್ ಕಂಬಗಳು ಹಾಗೂ ಬೆಸ್ಕಾಂ ಮೂಲಸೌಕರ್ಯಗಳಿಗೆ ಬ್ಯಾನರ್, ಪೋಸ್ಟರ್ಗಳನ್ನು ಕಟ್ಟುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಇನ್ನು ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆಗೆ ಜಿಬಿಎ ವತಿಯಿಂದ ನಗರದಾದ್ಯಂತ ವ್ಯಾಪಕ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜಧಾನಿಯ ಸುಮಾರು 42 ಕೆರೆಗಳ ಅಂಗಳದಲ್ಲಿ ತಾತ್ಕಾಲಿಕ ಕಲ್ಯಾಣಿಗಳನ್ನು ನಿರ್ಮಿಸಲಾಗಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ 659 ಮೊಬೈಲ್ ಟ್ಯಾಂಕರ್ಗಳ ವ್ಯವಸ್ಥೆ ಮಾಡಲಾಗಿದೆ.
ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ಪ್ರಸಿದ್ಧ ಯಡಿಯೂರು ಕೆರೆ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ತಾತ್ಕಾಲಿಕ ಕಲ್ಯಾಣಿಗಳ ಸ್ವಚ್ಛತಾ ಕಾರ್ಯ ಪೂರ್ಣಗೊಳಿಸಿ ನೀರು ತುಂಬಿಸುವ ಪ್ರಕ್ರಿಯೆ ಭರದಿಂದ ಸಾಗಿದೆ. ಇನ್ನು ಪರಿಸರ ಸಂರಕ್ಷಣೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ, ಪಾಲಿಕೆ ನೇಮಿಸಿರುವ ನಿಯೋಜಿತ ಸ್ವಯಂಸೇವಕರ ಮೂಲಕವೇ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯ ನೆರವೇರಿಸಲು ತೀರ್ಮಾನಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.