
ಬೆಂಗಳೂರು, ಆಗಸ್ಟ್ 04: ರಾಜ್ಯ ಸರ್ಕಾರದ ಕೃಷಿ ಇಲಾಖೆ ವಿರುದ್ಧ ಕೃಷಿ ಪದವೀಧರರು ತೀವ್ರ ಆಕ್ರೋಶ ಹೊರಹಾಕಿದ್ದು, ಹೋರಾಟದ ಹಾದಿ ಹಿಡಿದಿದ್ದಾರೆ. ನೇಮಕಾತಿ ನಿಯಮಗಳನ್ನು ಗಾಳಿಗೆ ತೂರಿ ಕೃಷಿ ಅಧಿಕಾರಿ (AO) ಹಾಗೂ ಕೃಷಿ ಸಹಾಯಕ ಅಧಿಕಾರಿ (AAO) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (GKVK) ವಿದ್ಯಾರ್ಥಿಗಳು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.
ಇತ್ತೀಚೆಗಷ್ಟೇ ಸರ್ಕಾರವು 900ಕ್ಕೂ ಹೆಚ್ಚು ಕೃಷಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಆದರೆ, ಕೃಷಿ ಸಂಬಂಧಿತ ಪಠ್ಯಕ್ರಮಗಳನ್ನು ಓದಿದ ಪದವೀಧರರ ಬದಲಿಗೆ ಬಿ.ಇ/ಬಿ.ಟೆಕ್ನಲ್ಲಿ ಬಯೋ ಕೆಮಿಸ್ಟ್ರಿ ಓದಿದ ಅಭ್ಯರ್ಥಿಗಳಿಗೂ ಈ ಹುದ್ದೆಗಳಿಗೆ ಅವಕಾಶ ಕಲ್ಪಿಸಿರುವುದು ಕೃಷಿ ವಿದ್ಯಾರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ. “ವರ್ಷಗಟ್ಟಲೆ ಕೃಷಿ ವಿಷಯಗಳಲ್ಲೇ ಪದವಿ ಪಡೆದ ನಮಗೂ, ತಂತ್ರಜ್ಞಾನ ಪದವಿಯಲ್ಲಿ ಬಯೋ ಕೆಮಿಸ್ಟ್ರಿ ಓದಿದವರಿಗೂ ವ್ಯತ್ಯಾಸವಿಲ್ಲವೇ?” ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ.
ಕಳೆದ 15 ದಿನಗಳಿಂದ ಜಿಕೆವಿಕೆ ಆವರಣದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಸರ್ಕಾರದಿಂದ ಸೂಕ್ತ ಸ್ಪಂದನೆ ಸಿಕ್ಕಿಲ್ಲ. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಜಿಕೆವಿಕೆ ಡೀನ್ ಕಚೇರಿಗೆ ಬೀಗ ಜಡಿದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೃಷಿ ಶಿಕ್ಷಣದ ಅಸ್ತಿತ್ವಕ್ಕೇ ಧಕ್ಕೆ ತರುತ್ತಿರುವ ಈ ತಾರತಮ್ಯದ ನೇಮಕಾತಿ ನಿಯಮಾವಳಿಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಕೃಷಿ ವಿದ್ಯಾರ್ಥಿನಿ ರೇಷ್ಮಾ ಮಾತನಾಡಿ, “ಸರ್ಕಾರ ನಮ್ಮ ಭವಿಷ್ಯದ ಜೊತೆ ಆಟವಾಡುತ್ತಿದೆ. ನಮ್ಮ ಬೇಡಿಕೆಗಳಿಗೆ ಸರ್ಕಾರ ತಕ್ಷಣವೇ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಸಮಾವೇಶ ನಡೆಸಿ, ವಿಧಾನಸೌಧ ಮುತ್ತಿಗೆ ಹಾಕಲಿದ್ದೇವೆ” ಎಂದು ಎಚ್ಚರಿಕೆ ನೀಡಿದ್ದಾರೆ. ಸದ್ಯ ಕೃಷಿ ವಿದ್ಯಾರ್ಥಿಗಳ ಈ ಉಗ್ರ ಹೋರಾಟಕ್ಕೆ ಸರ್ಕಾರ ಹೇಗೆ ಸ್ಪಂದಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:36 am, Tue, 4 August 26