ಆರ್​ಸಿಬಿ ಅಭಿಮಾನಿಗಳಿಗೆ ಡಿಕೆಶಿ ಗುಡ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಯೋಜನೆ ಬಗ್ಗೆ ಮಹತ್ವದ ಮಾಹಿತಿ

ಆರ್​ಸಿಬಿ ಐಪಿಎಲ್ ವಿಜಯೋತ್ಸವ ಕಾಲ್ತುಳಿತ ಘಟನೆಯಿಂದಾಗಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇನ್ನು ಮುಂದೆ ಐಪಿಎಲ್ ಪಂದ್ಯಗಳೇ ನಡೆಯುವುದಿಲ್ಲ ಎಂದು ಬೇಸರದಲ್ಲಿದ್ದ ರಾಜ್ಯ ಕ್ರಿಕೆಟ್ ಪ್ರೇಮಿಗಳಿಗೆ ಕರ್ನಾಟಕ ಸಚಿವ ಸಂಪುಟ ಗುರುವಾರ ಸಂಜೆ ಗುಡ್ ನ್ಯೂಸ್ ಕೊಟ್ಟಿತ್ತು. ಇದೀಗ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆ ಬಗ್ಗೆ ಮಾಹಿತಿ ನೀಡಿದ್ದಾರೆ.

ಆರ್​ಸಿಬಿ ಅಭಿಮಾನಿಗಳಿಗೆ ಡಿಕೆಶಿ ಗುಡ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಯೋಜನೆ ಬಗ್ಗೆ ಮಹತ್ವದ ಮಾಹಿತಿ
ಆರ್​ಸಿಬಿ (ಸಾಂದರ್ಭಿಕ ಚಿತ್ರ)

Updated on: Dec 12, 2025 | 11:26 AM

ಬೆಂಗಳೂರು, ಡಿಸೆಂಬರ್ 12: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಐಪಿಎಲ್ (IPL) ಮತ್ತು ಇತರ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಮಹತ್ವದ ಹೇಳಿಕೆ ನೀಡಿದ್ದಾರೆ. ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿ ಸಚಿವ ಸಂಪುಟ ಈಗಾಗಲೇ ನಿರ್ಧಾರ ಕೈಗೊಂಡಿದೆ. ಕ್ರಿಕೆಟ್ ಪ್ರಿಯರಿಗೆ ಶುಭ ಸುದ್ದಿ ನೀಡಿದ್ದೇವೆ ಎಂದು ಅವರು ಹೇಳಿದ್ದಾರೆ. ಕ್ರೀಡಾಂಗಣದಲ್ಲಿ ಭವಿಷ್ಯದಲ್ಲಿ ಯಾವುದೇ ಅನಾಹುತಗಳು ಸಂಭವಿಸುವುದನ್ನು ತಡೆಯಲು ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಕ್ರೀಡಾಂಗಣದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಸಂಬಂಧಪಟ್ಟ ಎಲ್ಲರನ್ನು ಕರೆದು ಮಾತನಾಡಲಿದ್ದಾರೆ. ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಸಮಿತಿ ಸಲ್ಲಿಸಿರುವ ಶಿಫಾರಸುಗಳನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ಸೂಚಿಸಲಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಕೆಎಸ್​​ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರ ನೇತೃತ್ವದ ತಂಡ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವರು ಸಭೆ ನಡೆಸಿ, ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಬೆಂಗಳೂರಿನ ಗೌರವವನ್ನು ಕಾಪಾಡುವುದು ತಮ್ಮ ಕರ್ತವ್ಯ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಗೃಹ ಸಚಿವರು ಕೈಗೊಳ್ಳಲಿರುವ ನಿರ್ಧಾರಗಳು ಕ್ರೀಡಾಂಗಣದಲ್ಲಿನ ಸುರಕ್ಷತೆಯನ್ನು ಖಚಿತಪಡಿಸುವುದು ಮತ್ತು ಭವಿಷ್ಯದ ಕಾರ್ಯಕ್ರಮಗಳಿಗೆ ಸೂಕ್ತ ವ್ಯವಸ್ಥೆಗಳನ್ನು ರೂಪಿಸುವುದನ್ನು ಒಳಗೊಂಡಿವೆ ಎಂದು ಅವರು ಹೇಳಿದ್ದಾರೆ.

ಡಿಕೆ ಶಿವಕುಮಾರ್ ಹೇಳಿಕೆಯ ವಿಡಿಯೋ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆಗೆ ಗ್ರೀನ್ ಸಿಗ್ನಲ್​​ ನೀಡುವ ಮೂಲಕ ಸಚಿವ ಸಂಪುಟ ಗುರುವಾರ ಮಹತ್ವದ ನಿರ್ಧಾರ ಕೈಗೊಂಡಿತ್ತು. ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಸಮಿತಿ ವರದಿ ಶಿಫಾರಸುಗಳನ್ನು ಅಳವಡಿಸಿಕೊಂಡು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಡಿಸುವುದಕ್ಕೆ ಸಂಪುಟ ಅವಕಾಶ ನೀಡಿದೆ. ಈ ಬಗ್ಗೆ ಗೃಹ ಇಲಾಖೆಗೆ ಜವಾಬ್ದಾರಿ ವಹಿಸಿದೆ.

ಇದನ್ನೂ ಓದಿ: ಒಳ ಮೀಸಲಾತಿ ಬಡ್ತಿಗೆ ಒಪ್ಪಿಗೆ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡಿಸುವುದಕ್ಕೆ ಸಂಪುಟ ಅಸ್ತು

ಕ್ರಿಕೆಟ್ ಪಂದ್ಯಗಳು ನಡೆಯುವ ಸಂದರ್ಭದಲ್ಲಿ ಭದ್ರತೆ ಒದಗಿಸುವ ಬಗ್ಗೆ ಗೃಹ ಇಲಾಖೆ ಜೊತೆಗೆ ಕೆಎಸ್‌ಸಿಎ ಚರ್ಚಿಸಬೇಕು ಎಂದು ಸಂಪುಟ ಸೂಚನೆ ನೀಡಿದೆ. ಕೆಎಸ್‌ಸಿಎಎಗೆ ಕೆಲವು ಷರತ್ತುಗಳನ್ನು ವಿಧಿಸುವುದಕ್ಕೂ ಸಂಪುಟ ನಿರ್ಧರಿಸಿದೆ. ಗೃಹ ಇಲಾಖೆ ಸೂಚಿಸುವ ಷರತ್ತುಗಳು ಮತ್ತು ನಿಬಂಧನೆಗಳನ್ನು ಅಳವಡಿಸಿಕೊಂಡು ಕ್ರೀಡಾಂಗಣದಲ್ಲಿ ಪಂದ್ಯ ಆಯೋಜಿಸಬಹುದಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:26 am, Fri, 12 December 25