AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ: ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಇದು ಕೇವಲ ಪೂರ್ವಭಾವಿ ಮಂಜೂರಾತಿಯಾಗಿದ್ದು, ನಿಯಮಾನುಸಾರವೇ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇಲಾಖೆಗೆ ಸಲ್ಲಿಸಲಾಗಿರುವ ಮನವಿಗಳಲ್ಲಿ ಕುರುಬ ಸಮುದಾಯಕ್ಕೆ ಸೇರಿರುವ ಮನವಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರಣಕ್ಕೆ ಆ ಸಮುದಾಯಕ್ಕೆ ಹೆಚ್ಚಿನ ಅನುದಾನ ಸಂದಾಯವಾಗಿದೆಯೇ ಹೊರತು ಉದ್ದೇಶಪೂರ್ವಕವಾಗಿ ಯಾವುದೇ ಬಗೆಯ ತಾರತಮ್ಯ ಮಾಡಲಾಗಿಲ್ಲ ಎಂದವರು ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ: ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಸಿದ್ದರಾಮಯ್ಯImage Credit source: PTI
ಪ್ರಸನ್ನ ಹೆಗಡೆ
|

Updated on:Jun 12, 2026 | 2:08 PM

Share

ಬೆಂಗಳೂರು, ಜೂನ್​​ 12: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆದಿದೆ ಎಂಬ ಆರೋಪಗಳು ಕೇಳಿಬಂದ ಬೆನ್ನಲ್ಲೇ ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನೀಡಲಾಗಿದ್ದ ಮನವಿಗಳನ್ನು ಪರಿಶೀಲಿಸಿ ಸುಮಾರು 155 ಹಿಂದುಳಿದ ವರ್ಗಗಳ ಸಂಘ – ಸಂಸ್ಥೆಗಳಿಗೆ 71.85 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಪೂರ್ವಭಾವಿ ಮಂಜೂರಾತಿಯನ್ನು ಇಲಾಖೆ ನೀಡಿದೆ. ಇದೇನು ಫಲಾನುಭವಿಗಳ ಅಂತಿಮ ಪಟ್ಟಿ ಅಲ್ಲ ಎಂದವರು ತಿಳಿಸಿದ್ದಾರೆ.

ಎಕ್ಸ್​​ ಪೋಸ್ಟ್​​ ಮೂಲಕ ಮಾಹಿತಿ

ಇಲಾಖೆಗೆ ಸಲ್ಲಿಸಲಾಗಿರುವ ಮನವಿಗಳಲ್ಲಿ ಕುರುಬ ಸಮುದಾಯಕ್ಕೆ ಸೇರಿರುವ ಮನವಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರಣಕ್ಕೆ ಆ ಸಮುದಾಯಕ್ಕೆ ಹೆಚ್ಚಿನ ಅನುದಾನ ಸಂದಾಯವಾಗಿದೆಯೇ ಹೊರತು ಉದ್ದೇಶಪೂರ್ವಕವಾಗಿ ಯಾವುದೇ ಬಗೆಯ ತಾರತಮ್ಯ ಮಾಡಲಾಗಿಲ್ಲ. ಬೇರೆ ಬೇರೆ ಹಿಂದುಳಿದ ಜಾತಿಗಳು ನೀಡಿರುವ ಮನವಿಗಳನ್ನು ಕೂಡಾ ಪರಿಶೀಲಿಸಿ, ಅವುಗಳಿಗೆ ಮುಂದಿನ ದಿನಗಳಲ್ಲಿ ಅನುದಾನವನ್ನು ಬಿಡುಗಡೆ ಮಾಡಲಾಗುವುದು.

ಇದನ್ನೂ ಓದಿ: ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ; ಅಷ್ಟಕ್ಕೂ ಆಗಿದ್ದೇನು?

ಕುರುಬ ಜನಾಂಗದ ಜೊತೆಗೆ ಮಡಿವಾಳ, ಲಿಂಗಾಯಿತ, ಒಕ್ಕಲಿಗ, ಬೆಸ್ತ, ಬಲಿಜ, ಗೊಲ್ಲ, ಜೆಟ್ಟಿ, ಕುಂಬಾರ, ಅರಸು, ಹೆಳವ, ಸವಿತಾ ಸಮಾಜ, ಉಪ್ಪಾರ, ಗಾಣಿಗ, ಕುರುಹಿನ ಶೆಟ್ಟಿ, ಹಾಲಕ್ಕಿ, ರೆಡ್ಡಿ ಈ ಜನಾಂಗದವರ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ಕಟ್ಟಡಗಳ ನಿರ್ಮಾಣಕ್ಕೆ ಪೂರ್ವಭಾವಿ ಆದೇಶವನ್ನು ಹೊರಡಿಸಲಾಗಿದೆ. ಈ ಆದೇಶವು ಅನುದಾನದ ಬಿಡುಗಡೆಯ ಆದೇಶ ಅಲ್ಲ. ಅನುದಾನ ಬಿಡುಗಡೆಗೆ ಸಂಘ ಸಂಸ್ಥೆಗಳು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮುಖಾಂತರ ಜಮೀನು /ನಿವೇಶನ ಅವರ ಹೆಸರಿನಲ್ಲಿ ಇರುವ ಬಗ್ಗೆ ಸ್ಥಳೀಯ ಪುರಸಭೆ / ಪಂಚಾಯತಿಯಿಂದ ಕಟ್ಟಡ ಲೈಸೆನ್ಸ್‌, ಸಂಘ ಸಂಸ್ಥೆಯ 3 ವರ್ಷದ ಆಡಿಟ್‌ ವರದಿ ಇತ್ಯಾದಿ ದಾಖಲಾತಿಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಕಳುಹಿಸಬೇಕಾಗುತ್ತದೆ.

ಅನುದಾನ ಬಿಡುಗಡೆ ಮಾಡಲು ಸರ್ಕಾರದಿಂದ ಮಾರ್ಗ ಸೂಚಿಗಳನ್ನು ಹೊರಡಿಸಲಾಗಿದೆ. ಈ ಮಾರ್ಗಸೂಚಿಗಳ ಅನುಸಾರ ಅನುದಾನವನ್ನು 3 ಹಂತದಲ್ಲಿ ಪ್ರಗತಿಯನ್ನು ಪರಿಶೀಲನೆ ಮಾಡಿ ಅನುದಾನ ಬಿಡುಗಡೆ ಮಾಡಲಾಗುವುದು. ಕಾಮಗಾರಿಯ ಪ್ರಗತಿಯನ್ನು ಪ್ರತಿವರ್ಷ ಪರಿಶೀಲಿಸಿ ಅದರ ಆಧಾರದಲ್ಲಿ ಮಂಜೂರಾಗಿರುವ ಹಣವನ್ನು ಬಿಡುಗಡೆ ಮಾಡಲಾಗುವುದು. ಇದು ನಿರಂತರವಾಗಿ ನಡೆಯುತ್ತಿರುವ ಪ್ರಕ್ರಿಯೆಯಾಗಿದೆ. ಈ ರೀತಿ ಅನುದಾನವನ್ನು ಬಿಡುಗಡೆ ಮಾಡುವಾಗ ಸರ್ಕಾರದ ಆದೇಶಕ್ಕೆ ಪ್ರವರ್ಗ 1 ಮತ್ತು ಪ್ರವರ್ಗ 2A ನಲ್ಲಿ ಬರುವ ಜಾತಿಗಳಿಗೆ ಶೇ.70ರಷ್ಟು ಮತ್ತು ಪ್ರವರ್ಗ 3A ಮತ್ತು 3Bನಲ್ಲಿ ಬರುವ ಜಾತಿಗಳಿಗೆ ಶೇ.30ರಷ್ಟು ಅನುದಾನವನ್ನು ಮಂಜೂರು ಮಾಡಲಾಗುವುದು. ಪ್ರವರ್ಗ 1 ಮತ್ತು 2A ಹೆಚ್ಚಿನ ಸಂಖ್ಯೆಯಲ್ಲಿ ಜಾತಿಗಳು ಇರುವ ಕಾರಣಕ್ಕಾಗಿ ಕೆಲವು ಸಮುದಾಯಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗಿದೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:08 pm, Fri, 12 June 26

Follow Us