ಅತ್ತಿಬೆಲೆ, ಹಾವೇರಿ ಪಟಾಕಿ ಅಗ್ನಿ ದುರಂತದ ಬಗ್ಗೆ ಸೂಕ್ತ ತನಿಖೆಗೆ ಬೊಮ್ಮಾಯಿ, ಕುಮಾರಸ್ವಾಮಿ ಆಗ್ರಹ

ಈ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು. ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು. ಬದುಕು ಕಳೆದುಕೊಂಡ ಕುಟುಂಬಗಳಿಗೆ ಸರ್ಕಾರ ಆಸರೆಯಾಗಿ ನಿಲ್ಲಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಆಗ್ರಹಿಸಿದರು.

ಅತ್ತಿಬೆಲೆ, ಹಾವೇರಿ ಪಟಾಕಿ ಅಗ್ನಿ ದುರಂತದ ಬಗ್ಗೆ ಸೂಕ್ತ ತನಿಖೆಗೆ ಬೊಮ್ಮಾಯಿ, ಕುಮಾರಸ್ವಾಮಿ ಆಗ್ರಹ
ಬಸವರಾಜ ಬೊಮ್ಮಾಯಿ, ಹೆಚ್​ಡಿ ಕುಮಾರಸ್ವಾಮಿ
Edited By: ವಿವೇಕ ಬಿರಾದಾರ

Updated on: Oct 08, 2023 | 12:00 PM

ಬೆಂಗಳೂರು ಅ.8: ಅತ್ತಿಬೆಲೆ ಪಟಾಕಿ ಗೋಡೌನ್ (Firecrackers Godown) ​ಅಗ್ನಿ ದುರಂತದಲ್ಲಿ 14 ಯುವಕರ ಮೃತರಾಗಿದ್ದು, ಆಘಾತ ತಂದಿದೆ. ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವ ಕೆಲಸ ಮಾಡಬೇಕು. ಒಂದೂವರೆ ತಿಂಗಳಲ್ಲಿ ಎರಡನೇ ಬಾರಿ ಈ ರೀತಿಯ ಘಟನೆ ಆಗಿದೆ. ಈ ಹಿಂದೆಯೂ ಹಾವೇರಿಯಲ್ಲಿ (Haveri) ಇದೇ ರೀತಿಯ ಘಟನೆ ನಡೆದಾಗ ನಾಲ್ಕು ಜನ ಮೃತಪಟ್ಟಿದ್ದರು. ಅತ್ತಿಬೆಲೆ, ಹಾವೇರಿ ಪಟಾಕಿ ಅಗ್ನಿ ದುರಂತ ಬಗ್ಗೆ ಸರ್ಕಾರ ಸೂಕ್ತ ತನಿಖೆ ನಡೆಸಲಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದರು.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ದೊಡ್ಡ ಪ್ರಮಾಣದಲ್ಲಿ ಪಟಾಕಿಗೆ ಸಂಗ್ರಹ ಮಾಡಲು ಅವಕಾಶವಿಲ್ಲ. ಗೋಡೌನ್​ಗೆ ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಅತ್ತಿಬೆಲೆ, ಹಾವೇರಿ ಪಟಾಕಿ ಅಗ್ನಿ ದುರಂತಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಬೇಕು. ಸರ್ಕಾರ ಘೋಷಣೆ ಮಾಡಿರುವ ಪರಿಹಾರವನ್ನು ಶೀಘ್ರವೇ ಬಿಡುಗಡೆ ಮಾಡಲಿ. ಗಾಯಾಳುಗಳಿಗೆ ಸರ್ಕಾರ ಉತ್ತಮ ಚಿಕಿತ್ಸೆ ಕೊಡಿಸಲಿ ಎಂದರು.

ಇದನ್ನೂ ಓದಿ: ಬೆಂಗಳೂರು ಪಟಾಕಿ ಅಗ್ನಿ ದುರಂತ: ಮೃತರ ಗುರುತು ಪತ್ತೆ, ಪರಿಹಾರ ಘೋಷಿಸಿದ ತಮಿಳುನಾಡು ಸರ್ಕಾರ

ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು: ಹೆಚ್​ಡಿ ಕುಮಾರಸ್ವಾಮಿ

ಘಟನೆಯ ಬಗ್ಗೆ ತಿಳಿದು ನನಗೆ ತೀವ್ರ ದಿಗ್ಭ್ರಮೆ ಉಂಟಾಗಿದೆ. ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಈ ಮುಗ್ಧ ಜೀವಗಳು, ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಬಲಿಯಾಗಿರುವ ಘಟನೆ ನನ್ನ ಮನ ಕಲುಕಿದೆ. ಜೀವ ಕಳೆದುಕೊಂಡ ನತದೃಷ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಈ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ಕುಟುಂಬಗಳಿಗೆ ಕರುಣಿಸಲಿ. ಸುರಕ್ಷತೆ ಬಗ್ಗೆ ಮುನ್ನೆಚ್ಚರಿಕೆ ವಹಿಸದೆ ಇದ್ದಿದ್ದೇ ದುರಂತಕ್ಕೆ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಹೇಳಿದರು.

ಈ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು. ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು. ಬದುಕು ಕಳೆದುಕೊಂಡ ಕುಟುಂಬಗಳಿಗೆ ಸರ್ಕಾರ ಆಸರೆಯಾಗಿ ನಿಲ್ಲಬೇಕು ಎಂದು ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us