ಸುಳ್ಳುಗಳ ಸೃಷ್ಟಿಕರ್ತ, ಟರ್ಮಿನೇಟರ್‌, ಚಾಮುಂಡೇಶ್ವರಿ ಕ್ಷೇತ್ರ ತಿರಸ್ಕೃತನಿಂದ ಈಗ ‘JDF’ ಸಿದ್ದ ಜಪ – ಹೆಚ್.ಡಿ. ಕುಮಾರಸ್ವಾಮಿ ಟ್ವೀಟಾಸ್ತ್ರ

ಸುಳ್ಳು ಸ್ಲೋಗನ್‌ಗಳ ಸೃಷ್ಟಿಕರ್ತ, ಟರ್ಮಿನೇಟರ್‌, ಸಿದ್ದಕಲೆಯ ನಿಪುಣಾಗ್ರೇಸರು ಈಗ ʼJDFʼ ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳುನೀರು ಬಿಟ್ಟಿದ್ದಾರೆ. ಸಹಕಾರ ಸಚಿವರ ಸಹಾಯಕನನ್ನು ಗೆಲ್ಲಿಸಿಕೊಳ್ಳಲು ಜಾತಿ ಸಹಕಾರದ ಮೊರೆ ಹೋಗಿದ್ದಾರೆ....

ಸುಳ್ಳುಗಳ ಸೃಷ್ಟಿಕರ್ತ, ಟರ್ಮಿನೇಟರ್‌, ಚಾಮುಂಡೇಶ್ವರಿ ಕ್ಷೇತ್ರ ತಿರಸ್ಕೃತನಿಂದ ಈಗ ‘JDF’ ಸಿದ್ದ ಜಪ - ಹೆಚ್.ಡಿ. ಕುಮಾರಸ್ವಾಮಿ ಟ್ವೀಟಾಸ್ತ್ರ
ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ
Edited By: ಆಯೇಷಾ ಬಾನು

Updated on: Dec 08, 2021 | 11:03 AM

ಬೆಂಗಳೂರು: ಮಾಜಿ ಸಿಎಂಗಳ ನಡುವಿನ ಟ್ವೀಟಾಸ್ತ್ರ ಮುಂದುವರೆದಿದೆ. ಕೆಲದಿನಗಳ ಹಿಂದೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈಗ ಮತ್ತೆ ಹೆಚ್.ಡಿ. ಕುಮಾರಸ್ವಾಮಿ ಅವರು ಸರಣಿ ಟ್ವೀಟ್‌ ಮೂಲಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಸುಳ್ಳು ಸ್ಲೋಗನ್‌ಗಳ ಸೃಷ್ಟಿಕರ್ತ, ಟರ್ಮಿನೇಟರ್‌, ಸಿದ್ದಕಲೆಯ ನಿಪುಣಾಗ್ರೇಸರು ಈಗ ʼJDFʼ ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳುನೀರು ಬಿಟ್ಟಿದ್ದಾರೆ. ಸಹಕಾರ ಸಚಿವರ ಸಹಾಯಕನನ್ನು ಗೆಲ್ಲಿಸಿಕೊಳ್ಳಲು ಜಾತಿ ಸಹಕಾರದ ಮೊರೆ ಹೋಗಿದ್ದಾರೆ. ಅಯ್ಯೋ, ಎಂಥಾ ದುರ್ವಿಧಿ ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ಟೀಕೆ ಮಾಡಿದ್ದಾರೆ.

ಮತ ಫಸಲಿಗಾಗಿ ಜಾತಿ ರಾಜಕೀಯ ಮಾಡುತ್ತಿರುವ ನಕಲಿ ಜಾತ್ಯತೀತ ಶೂರನ ಅಸಲಿ ರೂಪ ಕಳಚಿದೆ. ಸಮುದಾಯದ ಅಧ್ಯಕ್ಷರೊಬ್ಬರು, ನೀವು ಮತ ಹಾಕುವುದು ಕಾಂಗ್ರೆಸ್‌ ಪಕ್ಷಕ್ಕಲ್ಲ, ನಮ್ಮ ಸಮುದಾಯದ ಸಿದ್ದಕಲಾಕೋವಿದನಿಗೆ ಎಂದು ಮಂಡ್ಯದಲ್ಲಿ ಮನೆಮನೆಗೂ ಹೋಗಿ ಪ್ರಚಾರ ಮಾಡುತ್ತಿದ್ದಾರೆ. ಹೇಳುವುದು ಒಂದು, ಮಾಡುವುದು ಮತ್ತೊಂದು.

ಅವರಿಗೆ ಜೆಡಿಎಸ್‌ ಫೋಬಿಯಾ ಕಾಡುತ್ತಿದೆ. ಚುನಾವಣೆ ಬಂದರೆ ಜೆಡಿಎಸ್‌ ಚಳಿ-ಜ್ವರ ಹತ್ತುತ್ತದೆ. ಈ ಜ್ವರ ಬಿಡಿಸಿಕೊಳ್ಳಲು ಸಿದ್ದಸೂತ್ರದಾರ ಬಳಸುವ ಹೊಸ ಔಷಧವೇ ʼJDFʼ. ಅವರನ್ನು ಉಳಿಸುವ ಟಾನಿಕ್‌ ಹೆಸರೇ ಜೆಡಿಎಸ್‌ ಕುಟುಂಬ ರಾಜಕಾರಣ. ಹಾಗಾದರೆ, ಅವರದ್ದು SCF (ಸಿದ್ದಸೂತ್ರದಾರ ಕಾಂಗ್ರೆಸ್‌ ಫ್ಯಾಮಿಲಿ) ಅಲ್ಲವೆ? ಎಂದು ಹೆಚ್ಡಿಕೆ ಟ್ವೀಟ್ ಮಾಡಿದ್ದಾರೆ.

ಅಲ್ಲದೆ ಜೆಡಿಎಸ್‌, ಬಿಜೆಪಿ ಬಿ ಟೀಂ ಎಂದು ಭಜನೆ ಮಾಡುವವರು, ಸಹಕಾರ ಸಚಿವರ ಸಹಾಯಕನನ್ನು ಅಭ್ಯರ್ಥಿ ಮಾಡಿದ್ದು ಯಾರಿಗೆ ಸಹಕಾರ ನೀಡಲಿಕ್ಕೆ? ಜಾತ್ಯತೀತತೆಯ ಮುಖವಾಡ ಹಾಕಿಕೊಂಡು ಬಿಜೆಪಿಯನ್ನು ಬೈಯ್ಯುವವರು ಅದೇ ಪಕ್ಷದ ಸಚಿವರ ಪಿಎಗೆ ಟಿಕೆಟ್‌ ಕೊಟ್ಟಿದ್ದರ ಒಳಲೆಕ್ಕ ಏನು? ಇದು ಯಾರ ಲೆಕ್ಕ ಚುಕ್ತಾ ಮಾಡಲಿಕ್ಕೆ? ಇದೆಂಥಾ ಒಳ ಒಪ್ಪಂದ?

ಜಾತ್ಯತೀತತೆಯ ಜಗಜಟ್ಟಿ ಮೈಸೂರಿನಲ್ಲಿ ಮಾಡಿದ ಜಾತಿ ರಾಜಕಾರಣ ಗೊತ್ತಿದೆ. ʼಸಂದೇಶ ಸನ್ನಿಧಿʼಯಲ್ಲಿ ಕೂತು ಕಾಂಗ್ರೆಸ್‌ ಮತದಾರರ 2ನೇ ಪ್ರಾಶಸ್ತ್ಯದ ಮತಗಳು ಬಿಜೆಪಿಗೇ ಹೋಗಬೇಕು, ಜೆಡಿಎಸ್‌ʼಗಲ್ಲ ಎಂದು ಫರ್ಮಾನು ಹೊರಡಿಸಿದ ʼಚಾಮುಂಡೇಶ್ವರಿ ಕ್ಷೇತ್ರ ತಿರಸ್ಕೃತʼ ಸುಳ್ಳು ಸ್ಲೋಗನ್‌ʼಗಳ ಸೃಷ್ಟಿಕರ್ತನ ನಾಟಕದ ಪರದೆ ಜಾರಿಬಿದ್ದಿದೆ.

ರಾಜಕೀಯ ಆರಂಭಿಸಿದ ಮಾತೃಪಕ್ಷವನ್ನೇ ಕ್ರೂರವಾಗಿ ಮುಳುಗಿಸಲು ಹೊರಟ ಆ ನಾಯಕರು, ಕೈ ಹಿಡಿದ ಸ್ವಪಕ್ಷವನ್ನೂ ಸ್ವಾಹಾ ಮಾಡುತ್ತಿದ್ದಾರೆ. ʼವಿನಾಶಕಾಲೇ ವಿಪರೀತ ಸುಳ್ಳು!ʼ. ಆ ಸುಳ್ಳುಗಳೇ ಅವರನ್ನು ಸುಡುತ್ತವೆ. ಆಟ ಈಗ ಆರಂಭ ಎಂದು ಹೆಸರು ಬಳಸದೆ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಭೇಟಿ ಮಾಡುವುದು ತಪ್ಪಾ? ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

Web contact

TV9 Kannada

Read More
Follow Us