ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ಕಂದನಿಗೆ ಆಸರೆಯಾದ ದಿನೇಶ್ ಗುಂಡೂರಾವ್

ಎರಡು ವರ್ಷದ ಪುಟ್ಟ ಮಗುವಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು 48 ಲಕ್ಷ ರೂ. ವೆಚ್ಚದ ಚಿಕಿತ್ಸೆ ಉಚಿತವಾಗಿ ಕೊಡಿಸಿ ಆಸರೆಯಾಗಿದ್ದಾರೆ. ಸ್ಪೈನಲ್ ಮಸ್ಕ್ಯುಲಾರ್ ಅಟ್ರೋಫಿ (ಎಸ್‌ಎಂಎ) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಆರ್ಯನ್ ಇದೀಗ ಆರೋಗ್ಯ ಸಚಿವರ ಆಸರೆಯಿಂದ ಹೊಸ ಜೀವನವನ್ನು ಪಡೆದುಕೊಂಡಿದೆ.

ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ಕಂದನಿಗೆ ಆಸರೆಯಾದ ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್

Updated on: Jul 11, 2024 | 4:09 PM

ಬೆಂಗಳೂರುಮ (ಜುಲೈ 11): ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಎರಡು ವರ್ಷದ ಕಂದಮ್ಮಗೆ ಉಚಿತವಾಗಿ ಲಕ್ಷಾಂತರ ರೂಪಾಯಿ ವೆಚ್ಚದ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ಹೌದು… ಸ್ಪೈನಲ್ ಮಸ್ಕ್ಯುಲಾರ್ ಅಟ್ರೋಫಿ (ಎಸ್‌ಎಂಎ) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಆರ್ಯನ್ ಎನ್ನುವ ಮಗುವಿಗೆ 48 ಲಕ್ಷ ರೂ. ಚಿಕಿತ್ಸೆಯನ್ನು ಉಚಿತವಾಗಿ ಕೊಡಿಸಿದ್ದಾರೆ. ಇನ್ನೂ ಆಡಿ ಬೆಳೆಯಬೇಕಿರುವ ಪುಟ್ಟ ಕಂದನ ಮುಖ ನೋಡಿ ಮರುಗಿದ ಸಚಿವ ದಿನೇಶ್ ಗುಂಡೂರಾವ್, ಚಿಕಿತ್ಸೆ ಕೊಡಿಸುವ ನಿಟ್ಟಿನಲ್ಲಿ ನೆರವಾಗಿದ್ದಾರೆ.

ಆರ್ಯನ್ ಮೂರ್ತಿ, SMA ಟೈಪ್-2 ನಿಂದ ಬಳಲುತ್ತಿದ್ದು, ಇದು ಕ್ಷೀಣಗೊಳ್ಳುವ ಜೆನೆಟಿಕ್ ಡಿಸಾರ್ಡರ್ ಮತ್ತು ಪ್ರಗತಿಶೀಲ ಸ್ನಾಯು ಕ್ಷೀಣತೆ ಮತ್ತು ದೌರ್ಬಲ್ಯವನ್ನು ಉಂಟುಮಾಡುತ್ತದೆ. ಇದರಿಂದಾಗಿ ನಡೆಯಲು ಮತ್ತು ಅಂತಿಮವಾಗಿ ಉಸಿರಾಟದ ತೊಂದರೆ ಉಂಟಾಗುತ್ತದೆ. ಆರ್ಯನ್ ಗೆ ಜೀನ್ ಥೆರಪಿ ಇಂಜೆಕ್ಷನ್ ಝೋಲ್ಜೆನ್ಸ್ಮಾ ಚಿಕಿತ್ಸೆ ಅಗತ್ಯವಾಗಿದ್ದು ಇದಕ್ಕೆ ಬರೋಬ್ಬರಿ 16 ಕೋಟಿ ವೆಚ್ಚವಾಗಲಿದೆ. ಈ ನಿಟ್ಟಿನಲ್ಲಿ ಮಗುವಿನ ಪಾಲಕರು ಕ್ರೌಡ್ ಫಂಡಿಂಗ್ ಕಲೆಹಾಕುವ ಪ್ರಯತ್ನ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಸ್ವಿಮ್ಮಿಂಗ್; ಇಲ್ಲಿದೆ ವಿಡಿಯೋ

ದುಬಾರಿ ಚಿಕಿತ್ಸೆ ಹಿನ್ನೆಲೆಯಲ್ಲಿ ಮಗುವಿನ ಪಾಲಕರು ಸಹಾಯಕ್ಕಾಗಿ ಆರೋಗ್ಯ ಸಚಿವರನ್ನು ಸಂಪರ್ಕಿಸಿದ್ದರು. ಮುಗುವಿನ ಮುಗ್ದ ಮುಖ ನೋಡಿ ಮರುಗಿದ ಸಚಿವ ದಿನೇಶ್ ಗುಂಡೂರಾವ್, ಮುಗಿವಿಗೆ ಚಿಕಿತ್ಸೆ ಕೊಡಿಸುವ ನಿಟ್ಟಿನಲ್ಲಿ ನೆರವಾಗಿದ್ದಾರೆ. ಇಂದಿರಾ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಚೈಲ್ಡ್ ಹೆಲ್ತ್ ಮತ್ತು ಕೇರ್ ಅಂಡ್ ಪ್ರೊಟೆಕ್ಷನ್ ಆಫ್ ಚಿಲ್ಡ್ರನ್ ಟ್ರಸ್ಟ್ ಎಂಬ ಎನ್‌ಜಿಒ ಮೂಲಕ ಆರ್ಯನ್‌ಗೆ ಜೀವಮಾನದ ಔಷಧಿಯನ್ನು ಒದಗಿಸಲು ಒಪ್ಪಂದವನ್ನು ಮಾಡಿಸಿ ಕೊಟ್ಟಿದ್ದಾರೆ.

ಈ ರೀತಿಯ ರೋಗಗಳಿಗೆ ದುಬಾರಿ ಮೊತ್ತದ ಚಿಕಿತ್ಸೆ ಒದಗಿಸಲು ಆರೋಗ್ಯ ಇಲಾಖೆಯಲ್ಲಿ ಅವಕಾಶ ಕಲ್ಪಿಸುವತ್ತ ಮಾರ್ಗೋಪಾಯಗಳನ್ನ ಕಂಡುಕೊಳ್ಳುವಂತೆ ಸಚಿವ ದಿನೇಶ್ ಗುಂಡೂರಾವ್, ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ಎಸ್‌ಸಿ/ಎಸ್‌ಟಿ) ರೋಗಿಗಳಿಗೆ ಅಪರೂಪದ, ಅಧಿಕ ವೆಚ್ಚದ ಕಾಯಿಲೆಗಳಿಗೆ ನೀಡಲಾಗುವ ವಿತ್ತೀಯ ನೆರವಿನಡಿಯಲ್ಲಿ SMA ರೋಗವನ್ನ ಸೇರಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ.

ಪ್ರಸ್ರುತ ಮಗುವಿಗೆ ರಿಸ್ಡಿಪ್ಲಾಮ್ ಔಷಧದ ಚಿಕಿತ್ಸೆಯನ್ನ ನೀಡಲಾಗುತ್ತಿದ್ದು, ಮಗುವಿನ 11 ಕೆಜಿ ತೂಕದ ಆಧಾರದ ಮೇಲೆ ವರ್ಷಕ್ಕೆ 48 ಲಕ್ಷ ರೂ. ವೆಚ್ಚವಾಗಲಿದೆ. ಮಗು 20 ಕೆಜಿ ತಲುಪಿದಾಗ ಈ ವೆಚ್ಚವು 73 ಲಕ್ಷಕ್ಕೆ ಏರುವ ನಿರೀಕ್ಷೆಯಿದೆ. ಸಚಿವರಿಂದ ಸಿಕ್ಕ ಸ್ಪಂದನೆಗೆ ಅಭಿನಂದನೆ ಸಲ್ಲಿಸಿರುವ ಮಗುವಿನ ಪಾಲಕರು, ಸಾರ್ವಜನಿಕರಲ್ಲಿ ಹೆಚ್ಚಿನ ನೆರವಿನ ಹಸ್ತ ಚಾಚಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:32 pm, Thu, 11 July 24

Loading...
Unable to load recommendations.
Follow Us