
ಬೆಂಗಳೂರು, ಮೇ 19: ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಆಗಾಗ್ಗೆ ಮಳೆ (Bengaluru Rains) ಸುರಿಯುತ್ತಿದೆ. ಭಾನುವಾರ ಸಂಜೆ ಹಾಗೂ ರಾತ್ರಿ ಕೂಡ ಚಾಮರಾಜಪೇಟೆ, ಜಯನಗರ, ವಿಜಯನಗರ, ಮೆಜೆಸ್ಟಿಕ್, ಸಿಟಿ ಮಾರ್ಕೆಟ್ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಅಷ್ಟೇ ಅಲ್ಲದೆ, ರಾತ್ರಿಯಿಡೀ ಮಳೆ ಸುರಿದಿದೆ. ಶನಿವಾರ ರಾತ್ರಿ ಸುರಿದಿದ್ದ ಮಳೆಗೆ ರಸ್ತೆಗಳಲ್ಲಿ ಗುಂಡಿಗಳು ಬಾಯ್ತೆರೆದಿದ್ದವು. ಗ್ರೇಟರ್ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳದ್ದೇ ದರ್ಬಾರ್ ಆಗಿದ್ದು, ಕಿತ್ತುಹೋಗಿರುವ ರಸ್ತೆಗಳನ್ನು ಸರಿಪಡಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿರುವುದು ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ. ಇದರ ಮಧ್ಯೆ ಇದೀಗ ಭಾನುವಾರ ರಾತ್ರಿ ಇಡೀ ಸುರಿದ ಮಳೆ ಮತ್ತಷ್ಟು ಅಧ್ವಾನ ಮಾಡಿಹಾಕಿದೆ. ಹೆಬ್ಬಾಳ, ಗೊರಗುಂಟೆಪಾಳ್ಯ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಗುಂಡಿಗಳಲ್ಲಿ ನೀರು ತುಂಬಿಕೊಂಡು ಸಂಚಾರ ಕಷ್ಟವಾಗಿದೆ.
ಭಾನುವಾರ ರಾತ್ರಿ ಸುರಿದ ಧಾರಾಕಾರ ಸುರಿದ ಮಳೆಗೆ ವಾಹನ ಸವಾರರು ಪರದಾಡಿದರು. ಭಾನುವಾರ ಎಂದು ಹೊರಗೆ ಬಂದಿದ್ದವರೆಲ್ಲ ಫಜೀತಿ ಅನುಭವಿಸಿದ್ದಾರೆ.
ಶನಿವಾರ ಸುರಿದಿದ್ದ ಮಳೆಗೆ ಸಾಯಿ ಲೇಔಟ್ ಜನರು ಇನ್ನೂ ಪರದಾಡುತ್ತಿದ್ದಾರೆ. ಇಡೀ ಏರಿಯಾಗೇ ಏರಿಯಾನೇ ಜಲಾವೃತಗೊಂಡಿದೆ. ರಸ್ತೆ ತುಂಬ ನೀರು, ಮನೆಗಳಿಗೂ ನೀರು ನುಗ್ಗಿ ಸಾಯಿಲೇಔಟ್ ಕೆರೆಯಂತಾಗಿದೆ. ರಾತ್ರಿಯಿಡಿ ಜಾಗರಣೆ ಮಾಡಿ ಬೆಳಗ್ಗೆಯಾದ್ರೂ ಮನೆಗಳಿಗೆ ನುಗ್ಗಿದ್ದ ರಾಜಕಾಲುವೆ ನೀರು ತಗ್ಗದೇ ನಿವಾಸಿಗಳು ಹಿಂಸೆ ಅನುಭವಿಸಿದರು.
ಭಾನುವಾರ ಮಧ್ಯಾಹ್ನ ಸಾಯಿ ಲೇಔಟ್ಗೆ ಭೇಟಿ ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಟ್ರ್ಯಾಕ್ಟರ್ ಏರಿ ಏರಿಯಾ ಪರಿಶೀಲಿಸಿದ್ದಾರೆ. ಇದೇ ವೇಳೆ ಬಿಬಿಎಂಪಿ ಕಮಿಷನರ್ ಎದುರು ಮಹಿಳೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಮುಂದಿನ 12 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ನಗರದ ಹೊರ ಹೋಗುವ ಮತ್ತು ಒಳ ಬರುವ ಕಡೆಗೆ ನಿಧಾನಗತಿಯ ಸಂಚಾರ ಇದೆ. ವಿದ್ಯಾಶಿಲ್ಪ ರೈಲ್ವೆ ಅಂಡರ್ಪಾಸ್ ನಿಂದ ಏರ್ಪೋರ್ಟ್ ಕಡೆಗೂ ಸಂಚಾರ ನಿಧಾನ ಇದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಇಷ್ಟೇ ಅಲ್ಲದೆ, ಇನ್ನೂ ಅನೇಕ ಪ್ರದೇಶಗಳಲ್ಲಿ ನಿಧಾನಗತಿಯ ಸಂಚಾರ ಇರುವುದಾಗಿ ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದಾರೆ. ಆ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಇದನ್ನೂ ಓದಿ: ಮಳೆಯಿಂದ ಹೊಳೆಯಂತಾದ ಬೆಂಗಳೂರಿನ ರಸ್ತೆಗಳು
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:03 am, Mon, 19 May 25