ಶಶಿಕಲಾಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ಕಲ್ಪಿಸಲು ಲಂಚ ಪಡೆದ ಆರೋಪ: ಪೊಲೀಸರ ವಿರುದ್ಧದ ಪ್ರಕರಣ ಹೈಕೋರ್ಟ್​​ನಲ್ಲಿ ರದ್ದು

ತಮಿಳುನಾಡು ಮಾಜಿ ಮುಖ್ಯ ಮಂತ್ರಿ ಜೆ. ಜಯಲಲಿತಾ ಆಪ್ತೆ ಮತ್ತು ವಿ.ಕೆ. ಶಶಿಕಲಾಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ಕಲ್ಪಿಸಲು ಲಂಚ ಪಡೆದ ಆರೋಪ ಸಂಬಂಧ ಪೊಲೀಸರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಶಶಿಕಲಾಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ಕಲ್ಪಿಸಲು ಲಂಚ ಪಡೆದ ಆರೋಪ: ಪೊಲೀಸರ ವಿರುದ್ಧದ ಪ್ರಕರಣ ಹೈಕೋರ್ಟ್​​ನಲ್ಲಿ ರದ್ದು
ಶಶಿಕಲಾಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ಕಲ್ಪಿಸಲು ಲಂಚ ಪಡೆದ ಆರೋಪ ಸಂಬಂಧ ಪೊಲೀಸರ ವಿರುದ್ಧದ ಪ್ರಕರಣ ಹೈಕೋರ್ಟ್​​ನಲ್ಲಿ ರದ್ದು
Rakesh Nayak Manchi

Updated on: May 23, 2023 | 11:02 PM

ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯ ಮಂತ್ರಿ ಜೆ. ಜಯಲಲಿತಾ (J Jayalalitha) ಆಪ್ತೆ ಮತ್ತು ವಿ.ಕೆ. ಶಶಿಕಲಾಗೆ (VK Sasikala) ಜೈಲಿನಲ್ಲಿ ಐಷಾರಾಮಿ ಸೌಲಭ್ಯ ಕಲ್ಪಿಸಲು ಲಂಚ ಪಡೆದ ಆರೋಪ ಸಂಬಂಧ ಬೆಳಗಾವಿ ಕೇಂದ್ರ ಕಾರಾಗೃಹದ (Belagavi Central Jail) ಮುಖ್ಯ ಅಧೀಕ್ಷಕ ಕೃಷ್ಣ ಕುಮಾರ್, ಕರ್ನಾಟಕ ಕಾರಾಗೃಹ ಅಕಾಡೆಮಿಯ ಉಪ ನಿರ್ದೇಶಕಿ ಡಾ.ಆರ್. ಅನಿತಾ ಮತ್ತು ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಇನ್ಸ್‌ಪೆಕ್ಟರ್ ಗಜರಾಜ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ಪ್ರಕರಣ ಕುರಿತ ಪ್ರಾಸಿಕ್ಯೂಷನ್‌ಗೆ ತಮ್ಮ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ರಾಜ್ಯ ರದ್ದುಪಡಿಸುವಂತೆ ಕೋರಿ ಪೊಲೀಸ್ ಅಧಿಕಾರಿಗಳಾದ ಗಜರಾಜ ಮಾಕನೂರ್, ಡಾ.ಆರ್.ಅನಿತಾ ಮತ್ತು ಕೃಷ್ಣ ಕುಮಾರ್ ಸಲ್ಲಿಸಿದ್ದ ಮೂರು ಪ್ರತ್ಯೇಕ ಅರ್ಜಿಗಳನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ಪೀಠ ಈ ಆದೇಶ ಹೊರಡಿಸಿದೆ.

ಪ್ರಕರಣದಲ್ಲಿ ಶಶಿಕಲಾ ಅವರಿಂದ 2 ಕೋಟಿ ರೂ. ಲಂಚ ಪಡೆದು ಐಷಾರಾಮಿ ಸೌಲಭ್ಯ ಕಲ್ಪಿಸಿದ್ದರು ಎನ್ನಲಾಗಿದ್ದ ಕಾರಾಗೃಹ ಇಲಾಖೆಯ ನಿವೃತ್ತ ಡಿಜಿಪಿ ಎಚ್.ಎನ್. ಸತ್ಯನಾರಾಯಣ ಅವರು ಪ್ರಮುಖ ಆರೋಪಿಯಾಗಿದ್ದರು. ಅವರ ವಿರುದ್ಧ ಆರೋಪಗಳನ್ನು ಕೈ ಬಿಡಲಾಗಿದೆ. ಆದರೆ, ಎಸಿಬಿ ತನಿಖಾಧಿಕಾರಿಗಳು ಡಾ.ಅನಿತಾ ಮತ್ತು ಇತರೆ ಸಿಬ್ಬಂದಿಯನ್ನು ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ಡಾ.ಅನಿತಾ ಅವರು ತಮ್ಮ ಉನ್ನತಾಧಿಕಾರಿಯಾಗಿದ್ದ ಮುಖ್ಯ ಜೈಲು ಅಧೀಕ್ಷಕ ಕೃಷ್ಣ ಕುಮಾರ ಸೂಚನೆಯಂತೆ ನಡೆದುಕೊಂಡಿದ್ದಾರೆ. ಆದರೆ, ಅನಿತಾ ವಿರುದ್ಧದ ವಿಚಾರಣೆಯನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣ (ಕೆಎಟಿ) ರದ್ದುಪಡಿಸಿದ್ದು, ಅದರ ಆಧಾರದ ಮೇಲೆ ಆಕೆ ವಿರುದ್ಧ ವಿಚಾರಣೆ ಸರ್ಕಾರ ಕೈಬಿಟ್ಟಿದೆ.

ಇದನ್ನೂ ಓದಿ: ಚಿತ್ರದುರ್ಗ ಮುರುಘಾಮಠಕ್ಕೆ ಸರ್ಕಾರದ ಆಡಳಿತಾಧಿಕಾರಿ ನೇಮಕ ರದ್ದು ಪಡಿಸಿದ ಹೈಕೋರ್ಟ್

ಆದರೂ ಇದೇ ಆರೋಪ ಸಂಬಂಧ ಅನಿತಾ ವಿರುದ್ಧ ಕ್ರಮ ಜರುಗಿಸಲು ಮತ್ತೊಮ್ಮೆ ಪೂರ್ವಾನುಮತಿ ನೀಡಲಾಗಿದೆ. ಇದು ಕಾನೂನಿನ ದುರ್ಬಳಕೆಯಾಗಿದೆ. ಆಕೆಯ ವಿರುದ್ಧ ಆರೋಪ ಮಾಡಲು ದೋಷಾರೋಪ ಪಟ್ಟಿಯಲ್ಲಿ ಸೂಕ್ತ ಕಾರಣಗಳನ್ನೇ ನೀಡಿಲ್ಲ. ಆದ್ದರಿಂದ ಅನಿತಾ ವಿರುದ್ಧ ಪ್ರಾಸಿಕ್ಯೂಷನ್‌ಗೆ 2021 ರ ಡಿ.30ರಂದು ನೀಡಲಾಗಿದ್ದ ಪೂರ್ವಾನುಮತಿ ಕಾನೂನು ಬಾಹಿರವಾಗಿದ್ದು, ರದ್ದುಪಡಿಸಲು ಅರ್ಹವಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

ಕೃಷ್ಣ ಕುಮಾರ್ ವಿರುದ್ಧ ತನಿಖಾಧಿಕಾರಿಗಳು ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಕೃಷ್ಣ ಕುಮಾರ್ ಅವರು ಲಂಚಕ್ಕೆ ಬೇಡಿಕೆಯಿಟ್ಟ ಮತ್ತು ಸ್ವೀಕರಿಸಿದ ಬಗ್ಗೆ ನೇರ-ನಿರ್ದಿಷ್ಟ ಆರೋಪಗಳು ಇಲ್ಲ. ಅವರ ವಿರುದ್ಧ ಇಲಾಖೆ ವಿಚಾರಣೆ ಇನ್ನೂ ಪೂರ್ಣಗೊಂಡಿಲ್ಲ ಮತ್ತು ದೋಷಿಯಾಗಿ ಸಾಬೀತಾಗಿಲ್ಲ. ಹೀಗಿರುವಾಗ ಇದೇ ಆರೋಪದ ಸಂಬಂಧ ಡಾ.ಅನಿತಾ ವಿರುದ್ಧ ಪ್ರಕರಣಗಳನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಆದರೆ, ಕೃಷ್ಣ ಕುಮಾರ್ ವಿರುದ್ಧದ ಪ್ರಕರಣ ಮುಂದುವರಿಸಲು ಸರ್ಕಾರ ತೀರ್ಮಾನಿಸಿದೆ.

ಮತ್ತೊಂದಡೆ ಸತ್ಯನಾರಾಯಣ ವಿರುದ್ಧದ ಆರೋಪಗಳನ್ನು ಸರ್ಕಾರ ಕೈಬಿಡಲಾಗಿದೆ. ಹೀಗಿರುವಾಗ ಕೃಷ್ಣ ಕುಮಾರ್ ವಿರುದ್ಧದ 2021ರ ಡಿ.30ರಂದು ಪೂರ್ವಾನುಮತಿ ನೀಡಿರುವ ರಾಜ ಗೃಹ ಇಲಾಖೆ ಅಧೀನ ಕಾರ್ಯದರ್ಶಿಯ ಕ್ರಮ ವಿವೇಚನೆ ರಹಿತವಾಗಿದೆ. ಆದ್ದರಿಂದ ಕೃಷ್ಣ ಕುಮಾರ್ ವಿರುದ್ಧದ ಪ್ರಕರಣ ಮತ್ತು ಅವರ ವಿರುದ್ಧ ಕ್ರಮ ಜರುಗಿಸಲು ನೀಡಿರುವ ಪೂರ್ವಾನುಮತಿ ರದ್ದುಪಡಿಸಲು ಅರ್ಹವಾಗಿದೆ ಎಂದು ಆದೇಶಿಸಿದೆ.

ಇದೇ ವೇಳೆ ಪ್ರಕರಣದ ಮೊದಲನೇ ಆರೋಪಿಯಾಗಿರುವ ಕೃಷ್ಣ ಕುಮಾರ್ ವಿರುದ್ಧ ವಿವೇಚನೆ ಬಳಸಿ ಪೂರ್ವಾನುಮತಿ ನೀಡುವ ಕುರಿತಂತೆ ಕಾನೂನು ಪ್ರಕಾರ ಸೂಕ್ತ ಆದೇಶ ಹೊರಡಿಸಲು ಸಕ್ಷಮ ಪ್ರಾಧಿಕಾರ ಮುಕ್ತವಾಗಿದೆ ಎಂದು ತಿಳಿಸಿದೆ.

ಗಜರಾಜ ಮಾಕನೂರ್ ಅವರು ನಾಲ್ಕನೇ ಆರೋಪಿಯಾಗಿದ್ದಾರೆ. ತನಿಖೆ ವೇಳೆ ಎಸಿಬಿ ಪೊಲಿಸರು ಗಜರಾಜ ಅವರ ಮನೆ ಮೇಲೆ ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ಗಜರಾಜ ವಿರುದ್ಧದ ಲಂಚಕ್ಕೆ ಬೇಡಿಕೆಯಿಟ್ಟ ಆರೋಪಗಳನ್ನು ಸಾಬೀತುಪಡಿಸುವ ಯಾವುದೇ ವಸ್ತು/ದಾಖಲೆಗಳು ದೊರೆತಿಲ್ಲ. ಅವರ ವಿರುದ್ಧ ಲಂಚಕ್ಕೆ ಬೇಡಿಕೆಯಿಟ್ಟ ಮತ್ತು ಲಂಚ ಸ್ವೀಕರಿಸಿದ ಆರೋಪಗಳಿಲ್ಲ. ಪ್ರಕರಣ ಕುರಿತು ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ಅವರಿಂದ ವರದಿ ಸ್ವೀಕರಿಸಿದ್ದ ಸರ್ಕಾರ, ಸಹ ಗಜರಾಜ ವಿರುದ್ಧ ಯಾವುದೇ ವಿಚಾರಣೆಗೆ ಆದೇಶಿಸಿಲ್ಲ.

ಇದನ್ನೂ ಓದಿ: Gyanvapi Mosque Case: ಜ್ಞಾನವಾಪಿ ಮಸೀದಿಯಲ್ಲಿ ‘ಶಿವಲಿಂಗ’ ವೈಜ್ಞಾನಿಕ ಸಮೀಕ್ಷೆಗೆ ಅನುಮತಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಗಜರಾಜ ವಿರುದ್ಧ ಯಾವುದೇ ಆರೋಪಗಳು ಇಲ್ಲ ಎಂಬುದು ಸರ್ಕಾರಕ್ಕೆ ಚೆನ್ನಾಗಿ ಗೊತ್ತಿತ್ತು. ಸರ್ಕಾರ ವಿಚಾರಣೆಗೆ ಆದೇಶ ಮಾಡದೆ ಹೋದರೂ ಎಸಿಬಿ ಮಾತ್ರ ಗಜರಾಜ ವಿರುದ್ಧ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ಪಡೆದು ದೋಷಾರೋಪ ಪಟ್ಟಿ ಸಲ್ಲಿಸಿದೆ. ಸರ್ಕಾರ ಸಹ ಗಜರಾಜ ವಿರುದ್ಧ ನಿರ್ದಿಷ್ಟ ಆರೋಪಗಳನ್ನು ಸಾಬೀತುಪಡಿಸುವ ಯಾವುದೇ ದಾಖಲೆ ಪರಿಶೀಲನೆಗೆ ಒಳಪಡಿಸದೆ ಕಣ್ಣು ಮುಚ್ಚಿಕೊಂಡು ಪ್ರಾಸಿಕ್ಯೂಷನ್‌ಗೆ 2021ರ ಅ.5 ರಂದು ಸರ್ಕಾರ ಅನುಮತಿ ನೀಡಿದೆ. ಇದು ಕಾನೂನು ದುರ್ಬಳಕೆ ಮತ್ತು ವಿವೇಚನ ರಹಿತವಾಗಿದ್ದು, ಅದನ್ನು ರದ್ದುಪಡಿಸಲು ಅರ್ಹವಾಗಿದೆ ಎಂದು ತಿಳಿಸಿದೆ.

ಪ್ರಕರಣದ ಹಿನ್ನೆಲೆ

ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ 2017ರಲ್ಲಿ ಶಿಕ್ಷೆಗೆ ಒಳಗಾಗಿದ್ದ ಶಶಿಕಲಾ ಮತ್ತವರ ಸಂಬಂಧಿ ಇಳವರಸಿಗೆ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ಎರಡು ಕೋಟಿ ರೂಪಾಯಿ ಲಂಚ ಪಡೆದ ಆರೋಪ ಸಂಬಂಧ ಅರ್ಜಿದಾರರ ವಿರುದ್ಧ ಆರೋಪ ಕೇಳಿಬಂದಿತ್ತು. ಈ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದಲ್ಲಿ ವಿಚಾರಣೆ ನಡೆಸಿ ವರದಿ ಸಲ್ಲಿಸಲಾಗಿತ್ತು. ನಂತರ ಸರ್ಕಾರ ತನಿಖೆಯನ್ನು ಎಸಿಬಿಗೆ ವರ್ಗಾಯಿಸಿತ್ತು. ತನಿಖೆ ಪೂರ್ಣಗೊಳಿಸಿದ್ದ ಎಸಿಬಿಗೆ, ಅರ್ಜಿದಾರರ ವಿರುದ್ಧ ಪ್ರಾಸಿಕ್ಯೂಷನ್‌ಗಾಗಿ ಪೂರ್ವಾನುಮತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us