ಇಂದಿರಾಗಾಂಧಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ವರ್ಷವಿಡೀ ಬೆಡ್ ಹಿಡಿದಿದ್ದ ಬಾಲಕ; ಖಾಸಗಿ ಆಸ್ಪತ್ರೆಯ ಚಿಕಿತ್ಸೆಯಿಂದ ಗುಣಮುಖ!

ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಹೊಸಕೋಟೆಯ 14 ವರ್ಷದ ಬಾಲಕ ಸ್ಪೈನ್ ಟ್ಯೂಮರ್‌ನಿಂದ ಒಂದು ವರ್ಷ ಪರಿತಪಿಸಿದ್ದಾನೆ. ಸರಿಯಾದ ಚಿಕಿತ್ಸೆ ನೀಡಲು ವಿಫಲರಾದ ನಂತರ, ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಬಾಲಕನಿಗೆ ಹೊಸ ಜೀವನ ನೀಡಿದ್ದಾರೆ. ಬಡ ಕುಟುಂಬ ಇಂದಿರಾಗಾಂಧಿ ಆಸ್ಪತ್ರೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ದೊರೆಯುವಂತೆ ಆರೋಗ್ಯ ಇಲಾಖೆ ಎಚ್ಚೆತ್ತುಕೊಳ್ಳಬೇಕು.

ಇಂದಿರಾಗಾಂಧಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ವರ್ಷವಿಡೀ ಬೆಡ್ ಹಿಡಿದಿದ್ದ ಬಾಲಕ; ಖಾಸಗಿ ಆಸ್ಪತ್ರೆಯ ಚಿಕಿತ್ಸೆಯಿಂದ ಗುಣಮುಖ!
ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ಮತ್ತು ಬಾಲಕ
Edited By:

Updated on: Mar 31, 2026 | 6:25 PM

ಹೊಸಕೋಟೆ, ಮಾ.31 : ಬಡ ಮಕ್ಕಳಿಗಾಗಿಯೇ ಮೀಸಲಾಗಿರುವ ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದ ಆರೋಪ ಭಾರಿ ಸಂಚಲನ ಮೂಡಿಸಿದೆ. ಸ್ಪೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಹೊಸಕೋಟೆಯ 14 ವರ್ಷದ ಬಾಲಕನಿಗೆ ಸರಿಯಾದ ಚಿಕಿತ್ಸೆ ನೀಡದೇ ಒಂದು ವರ್ಷಗಳ ಕಾಲ ಪರಿತಪಿಸುವಂತೆ ಮಾಡಿದ್ದ ಆಸ್ಪತ್ರೆಯ ವಿರುದ್ಧ ಬಡ ಕುಟುಂಬ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಕಳೆದೊಂದು ವರ್ಷದಿಂದ ಬೆಡ್ ಹಿಡಿದಿದ್ದ ಬಾಲಕನ ಪೋಷಕರು, ಇಂದಿರಾಗಾಂಧಿ ಆಸ್ಪತ್ರೆಗೆ ತಿಂಗಳಾನುಗಟ್ಟಲೆ ಓಡಾಡಿದ್ದಾರೆ. ಆದರೆ ವೈದ್ಯರು ಸಮಸ್ಯೆಯ ಮೂಲವನ್ನು ಪತ್ತೆಹಚ್ಚುವಲ್ಲಿ ವಿಫಲರಾಗಿದ್ದರು. ಬ್ರೈನ್, ಐ ಮತ್ತು ಎಂಆರ್‌ಐ ಸ್ಕ್ಯಾನಿಂಗ್‌ಗಳನ್ನು ಮಾಡಿಸಿದರೂ ಫಲಿತಾಂಶ ಶೂನ್ಯವಾಗಿತ್ತು. ಕೊನೆಯಲ್ಲಿ “ಬಾಲಕನಿಗೆ ಚಿಕಿತ್ಸೆ ಸಾಧ್ಯವಿಲ್ಲ” ಎಂದು ಹೇಳಿ ಆತನನ್ನು ಮನೆಗೆ ಕಳುಹಿಸಿದ್ದರು. ಇದರಿಂದ ಅಸಹಾಯಕಗೊಂಡ ಪೋಷಕರು ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯ ಮೊರೆ ಹೋಗಿದ್ದಾರೆ.

ಸಿಲಿಕಾನ್ ಸಿಟಿ ಆಸ್ಪತ್ರೆಯ ವೈದ್ಯರು ಬಾಲಕನ ಸಮಸ್ಯೆಯನ್ನು ಸರಿಯಾಗಿ ಗುರುತಿಸಿ, ತುರ್ತು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಕೇವಲ ಒಂದು ತಿಂಗಳಲ್ಲೇ ಬಾಲಕ ನಡೆದಾಡುವಂತಾಗಿದ್ದು, ಅವನ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡುಬಂದಿದೆ. “ದೊಡ್ಡ ಸರ್ಕಾರಿ ಆಸ್ಪತ್ರೆಗಳಲ್ಲಿ ಆಗದ ಚಿಕಿತ್ಸೆ ಸಣ್ಣ ಖಾಸಗಿ ಆಸ್ಪತ್ರೆಗಳಲ್ಲಿ ಯಾಕೆ ಸಾಧ್ಯವಾಗುತ್ತಿದೆ?” ಎಂದು ಬಾಲಕನ ಕುಟುಂಬ ಆಕ್ರೋಶ ವ್ಯಕ್ತಪಡಿಸಿದ್ದು, ಇಂದಿರಾಗಾಂಧಿ ಆಸ್ಪತ್ರೆಯ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿದೆ.

ಇದನ್ನೂ ಓದಿ: ‘ನಿಮ್ಮ ದುಃಖ ಸಂತೋಷವಾಗಿ ಬದಲಾಗುತ್ತೆ’: ಸಂತೆಯಲ್ಲೇ ಮತಾಂತರಕ್ಕೆ ಇಳಿದವರಿಗೆ ಸಾರ್ವಜನಿಕರಿಂದ ಧರ್ಮದೇಟು

ಈ ಕುರಿತು ಪ್ರತಿಕ್ರಿಯಿಸಿದ ಖಾಸಗಿ ಆಸ್ಪತ್ರೆಯ ಸರ್ಜನ್ ಡಾ. ಸುಪ್ರಿತ್, “ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಸೂಕ್ತ ಚಿಕಿತ್ಸೆ ಸಮಯಕ್ಕೆ ಸಿಗುತ್ತಿಲ್ಲ. ಸರ್ಕಾರ ವೈದ್ಯರ ನೇಮಕಾತಿಯನ್ನು ಹೆಚ್ಚಿಸಿ ಎಲ್ಲರಿಗೂ ಉತ್ತಮ ಚಿಕಿತ್ಸೆ ದೊರೆಯುವಂತೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ. ಆರೋಗ್ಯ ಇಲಾಖೆ ಈ ಬಗ್ಗೆ ತಕ್ಷಣ ಎಚ್ಚೆತ್ತು ಬಡ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us