
ಬೆಂಗಳೂರು, ಮೇ 24: ಜೂನ್ 18ರಂದು ನಡೆಯಲಿರುವ ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಕಾಂಗ್ರೆಸ್ನಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಮೂರು ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದ್ದು, ಪಕ್ಷದ ರಾಷ್ಟ್ರೀಯ ನಾಯಕರುಗಳಾದ ಸುಪ್ರಿಯಾ ಶ್ರಿನೇಟ್ ಮತ್ತು ಪವನ್ ಖೇರಾ ಅವರ ಹೆಸರುಗಳು ಮುಂಚೂಣಿಯಲ್ಲಿವೆ ಎನ್ನಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕರ್ನಾಟಕದಿಂದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಸೇರಿದಂತೆ ಹಾಲಿ ಶಾಸಕರ ಅವಧಿ ಪೂರ್ಣಗೊಂಡ ನಂತರ ಜೂನ್ ಮತ್ತು ಜುಲೈನಲ್ಲಿ 24 ಸ್ಥಾನಗಳು ತೆರವಾಗಲಿರುವ ಹಿನ್ನೆಲೆ ಪೈಪೋಟಿ ಜೋರಾಗಿದೆ.
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಈ ಇಬ್ಬರು ನಾಯಕರು ರಾಜ್ಯ ಕಾಂಗ್ರೆಸ್ ಘಟಕದೊಂದಿಗೆ ಸಕ್ರಿಯವಾಗಿ ಕೆಲಸ ಮಾಡಿದ್ದ ಹಿನ್ನೆಲೆ ಅವರನ್ನು ರಾಜ್ಯಸಭೆ ಚುನಾವಣೆಗೆ ಪರಿಗಣಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಜೊತೆಗೆ ಜೂನ್ 30ರಂದು ವಿಧಾನ ಪರಿಷತ್ ಸದಸ್ಯತ್ವ ಅವಧಿ ಮುಗಿಯಲಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಹೆಸರೂ ರಾಜ್ಯಸಭಾ ಚುನಾವಣೆ ಸಂಬಂಧ ಕೇಳಿಬರುತ್ತಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಶಾಶ್ವತ ಸದಸ್ಯರಾಗಿರುವ ಹರಿಪ್ರಸಾದ್, ಹರಿಯಾಣದ ಎಐಸಿಸಿ ಉಸ್ತುವಾರಿಯೂ ಆಗಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ
ಆದರೆ ಪಕ್ಷದ ಕೆಲ ನಾಯಕರು, ಸುಪ್ರಿಯಾ ಶ್ರೀನೇಟ್ ಮತ್ತು ಪವನ್ ಖೇರಾ ಅವರನ್ನು ಅವರವರ ರಾಜ್ಯಗಳಿಂದಲೇ ರಾಜ್ಯಸಭೆಗೆ ಕಳುಹಿಸಬೇಕು. ಕರ್ನಾಟಕದ ನಾಯಕರಿಗೆ ಅವಕಾಶ ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನಿತರ ಆಕಾಂಕ್ಷಿಗಳ ಪಟ್ಟಿಯಲ್ಲಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಮೋಹನ್ ಕಟಾರ್ಕಿ, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, ಮಾಜಿ ರಾಜ್ಯಸಭಾ ಸದಸ್ಯ ರಾಜೀವ್ ಗೌಡ, ಮಾವು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಬಿ.ಸಿ. ಮುದ್ದುಗಂಗಾಧರ್ ಹಾಗೂ ಮಾಜಿ ಕೇಂದ್ರ ಸಚಿವ ಕೆ ರೆಹಮಾನ್ ಖಾನ್ ಅವರ ಪುತ್ರ ಮನ್ಸೂರ್ ಅಲಿ ಖಾನ್ ಅವರ ಹೆಸರುಗಳೂ ಚರ್ಚೆಯಲ್ಲಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:11 am, Sun, 24 May 26