
ಬೆಂಗಳೂರು, ಸೆಪ್ಟೆಂಬರ್ 11: ಕ್ರೀಡಾ ಚಟುವಟಿಕೆಗೆ ಗೈರಾದ ಕಾರಣಕ್ಕೆ ಸಬ್ಇನ್ಸ್ಪೆಕ್ಟರ್ ಮೇಲೆ ಪೇಪರ್ ವೇಯ್ಟ್ ಎಸೆದು ಹಲ್ಲೆ ಮಾಡಿರುವ ಆರೋಪ ಎದುರಿಸುತ್ತಿರುವ ಐಪಿಎಸ್ ಅಧಿಕಾರಿ ವಿಕಾಶ್ ಕುಮಾರ್ ವಿಕಾಶ್ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಅಧೀನ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ ರದ್ದುಪಡಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ರವಿ ವಿ. ಹೊಸಮನಿ ಅವರಿದ್ದ ಹೈಕೋರ್ಟ್ ಪೀಠ ವಜಾಗೊಳಿಸಿ ಆದೇಶಿಸಿದೆ.
2012ರ ಜನವರಿ 2 ರಂದು ಈ ಘಟನೆ ನಡೆದಿತ್ತು. ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ಇಲಾಖೆಯ ಕ್ರೀಡಾ ಚಟುವಟಿಕೆಗಳಿಗೆ ಮಲ್ಲಂದೂರು ಠಾಣೆಯ ಪಿಎಸ್ಐ ಜಿಎಸ್ ಚಂದ್ರಶೇಖರ್ ಗೈರಾಗಿದ್ದರು. ಇದರಿಂದ ಆಕ್ರೋಶಗೊಂಡ ಅಂದು ಚಿಕ್ಕಮಗಳೂರು ಎಸ್ಪಿ ಆಗಿದ್ದ ವಿಕಾಶ್ ಕುಮಾರ್ ವಿಕಾಶ್, ಪಿಎಸ್ಐ ಚಂದ್ರಶೇಖರ್ರನ್ನು ಎಸ್ಪಿ ಕಚೇರಿಗೆ ಕರೆಸಿಕೊಂಡು ಪೇಪರ್ ವೇಯ್ಟ್ ಎಸೆದು ಹಲ್ಲೆ ನಡೆಸಿದ್ದರು. ಪಿಎಸ್ಐ ಹಣೆಗೆ ರಕ್ತ ಬರುವಷ್ಟು ಗಾಯವಾಗಿತ್ತು ಎಂದು ಆರೋಪಿಸಲಾಗಿತ್ತು.
ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ದೂರಿನ ತನಿಖೆ ನಡೆಸಿದ ಪೊಲೀಸರು, ಅಂತಿಮವಾಗಿ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿದ್ದರು. ಆದರೆ ಅಧೀನ ನ್ಯಾಯಾಲಯವು ಪೊಲೀಸರ ಬಿ ರಿಪೋರ್ಟ್ ಅನ್ನು ಒಪ್ಪದೆ ತಿರಸ್ಕರಿಸಿತ್ತು. ಅಷ್ಟೇ ಅಲ್ಲದೆ, ಐಪಿಎಸ್ ಅಧಿಕಾರಿ ವಿಕಾಶ್ ಕುಮಾರ್ ವಿಕಾಶ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೆ ಆದೇಶಿಸಿತ್ತು.
ಇದನ್ನೂ ಓದಿ: ಯಶವಂತಪುರ ಎಪಿಎಂಸಿಗೆ ದಿಢೀರ್ ಭೇಟಿ, ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ನಡೆಗೆ ಹೈಕೋರ್ಟ್ನಿಂದ ಪ್ರಶಂಸೆ
ಅಧೀನ ನ್ಯಾಯಾಲಯ ನೀಡಿದ್ದ ಸಮನ್ಸ್ ಹಾಗೂ ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ವಿಕಾಶ್ ಕುಮಾರ್ ವಿಕಾಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ವಿ. ಹೊಸಮನಿ ಅವರ ಪೀಠವು ಅರ್ಜಿ ವಜಾಗೊಳಿಸಿದೆ. ಹೀಗಾಗಿ ಐಪಿಎಸ್ ಅಧಿಕಾರಿಗೆ ಕಾನೂನು ಸಂಕಷ್ಟ ಎದುರಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.