ಭೋವಿ ನಿಗಮ ಬಹುಕೋಟಿ ಹಗರಣ: ಅಕ್ರಮ ಹಣ ವರ್ಗಾವಣೆ ಪತ್ತೆ, ಮಹತ್ವದ ದಾಖಲೆ ಕಲೆಹಾಕಿದ ED
ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿ 97 ಕೋಟಿ ರೂ. ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಪತ್ತೆ ಮಾಡಿದ್ದಾರೆ. ಭೋವಿ ಸಮುದಾಯದ ಏಜೆಂಟರ ಮೂಲಕ ನಕಲಿ ಫಲಾನುಭವಿಗಳ ಖಾತೆ ಬಳಸಿಕೊಂಡು ಹಣ ವರ್ಗಾವಣೆ ಮಾಡಲಾಗಿದೆ. ಇದರಲ್ಲಿ ಮಾಜಿ ವ್ಯವಸ್ಥಾಪಕ ನಿರ್ದೇಶಕ ನಾಗರಾಜಪ್ಪ ಭಾಗಿಯಾಗಿರುವುದು ಪತ್ತೆ ಆಗಿದೆ.

ಬೆಂಗಳೂರು, ಏಪ್ರಿಲ್ 07: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ (Karnataka Bhovi Development Corporation) ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ವ್ಯವಸ್ಥಾಪಕ ನಿರ್ದೇಶಕ ಬಿಕೆ ನಾಗರಾಜಪ್ಪರನ್ನು (BK Nagarajappa) ಬಂಧಿಸಿದ್ದು, 14 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ. ಇ.ಡಿ ತನಿಖೆ ವೇಳೆ ಭೋವಿ ಸಮುದಾಯದ ಏಜೆಂಟರ ಮೂಲಕ ಅಕ್ರಮ ಹಣ ವರ್ಗಾವಣೆ ನಡೆದಿದ್ದು ಪತ್ತೆ ಆಗಿದೆ. ಹೀಗಾಗಿ ಬಿಕೆ ನಾಗರಾಜಪ್ಪರನ್ನು ಬಂಧಿಸಿ ಹೆಚ್ಚಿನ ತನಿಖೆ ಮಾಡಲಾಗುತ್ತಿದೆ.
ಏಪ್ರಿಲ್ 4ರಂದು ನಗರದ ಅಂಬೇಡ್ಕರ್ ರಸ್ತೆಯ ವಿವಿ ಟವರ್ನಲ್ಲಿರುವ ನಿಗಮದ ಕಚೇರಿ ಸೇರಿದಂತೆ ಹಗರಣದ ಆರೋಪಿಗಳು ಮತ್ತು ಅನುಮಾನ ಇರುವವರಿಗೆ ಸಂಬಂಧಿಸಿದ ಸ್ಥಳಗಳಲ್ಲ ದಾಳಿ ಮಾಡಿ ಇಡಿ ಅಧಿಕಾರಿಗಳು ಶೋಧ ಮಾಡಿದ್ದರು. ಈ ವೇಳೆ ನಾಗರಾಜಪ್ಪ ಅಕ್ರಮ ವರ್ಗಾವಣೆಯಲ್ಲಿ ಭಾಗಿಯಾಗಿದ್ದು ಪತ್ತೆ ಆಗಿದೆ.
ಇದನ್ನೂ ಓದಿ: ಕೋಟ್ಯಂತರ ರೂ. ಅವ್ಯವಹಾರ ಆರೋಪ; ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಸಿಐಡಿ ಅಧಿಕಾರಿಗಳ ದಾಳಿ
ನಕಲಿ ಫಲಾನುಭವಿಗಳ ಖಾತೆ ಬಳಸಿಕೊಂಡು ಕೆಬಿಡಿಸಿಯಿಂದ ಹಣವನ್ನು ಫ್ರೆಂಡ್ಸ್, ಕುಟುಂಬ ಸದಸ್ಯರ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಹಾಗಾಗಿ ದಾಳಿ ವೇಳೆ ಸಂಗ್ರಹಿಸಿದ ಪುರಾವೆಗಳ ಆಧಾರದಡಿ ಬಂಧಿಸಲಾಗಿದೆ. ಬಳಿಕ ಅವರನ್ನು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ಇ.ಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಏನು ಹಗರಣ?
2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದ್ದು, ಲಕ್ಷಾಂತರ ರೂ ಸಾಲ ಕೊಡಿಸುವುದಾಗಿ ಸಾರ್ವಜನಿಕ ದಾಖಲೆ ದುರ್ಬಳಕೆ ಜೊತೆಗೆ 10 ಕೋಟಿ ರೂ. ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪ ಕೇಳಿಬಂದಿತ್ತು.
ಇದನ್ನೂ ಓದಿ: Kodi Mutt Swamiji: ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ಬಳಿಕ ಪ್ರಕರಣ ಮುಚ್ಚಿಹಾಕಲು ನಿಗಮದ ಅಧೀಕ್ಷಕ ಸುಬ್ಬಪ್ಪ, ಭೋವಿ ಅಭಿವೃದ್ಧಿ ನಿಗಮದ ಲೆಕ್ಕಪತ್ರ ಕಡತ, ನಗದು ಪುಸ್ತಕಗಳು, ಯೋಜನಾ ಕಡತ, ಬ್ಯಾಂಕ್ ಚೆಕ್ ಸೇರಿ 200ಕ್ಕೂ ಹೆಚ್ಚು ಕಡತಗಳನ್ನು ಕಳವು ಮಾಡಿದ್ದ ಕುರಿತು ಬೆಂಗಳೂರು, ಬೆಂಗಳೂರು ಗ್ರಾಮಾಂತರ ಕಲಬುರಗಿ ಜಿಲ್ಲೆಯಲ್ಲಿ ದೂರು ದಾಖಲಾಗಿತ್ತು.
ಇತ್ತೀಚೆಗೆ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಿತ್ತು. ಸಿಐಡಿ ಅಧಿಕಾರಿಗಳು ಭೋವಿ ನಿಗಮದ ಅಧೀಕ್ಷಕ ಸುಬ್ಬಪ್ಪನನ್ನ ಬಂಧಿಸಿದ್ದರು. ಇದೇ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಎದುರಿಸಿದ್ದ ಉದ್ಯಮಿ ಜೀವಾ, ಬೆಂಗಳೂರಿನ ಪದ್ಮನಾಭನಗರದ ರಾಘವೇಂದ್ರ ಲೇಔಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:50 pm, Mon, 7 April 25