
ಬೆಂಗಳೂರು, ಫೆಬ್ರವರಿ 10: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕರ್ನಾಟಕ ಸಿಎಂ ಸಿದ್ದರಾಮಯ್ಯ ಮಾಡಿರುವ ಎಕ್ಸ್ ಪೋಸ್ಟ್ ವಿಚಾರವೀಗ ರಾಜಕೀಯ ವಾಗ್ಯುದ್ಧಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿಗಳ ಪೋಸ್ಟ್ ಕಂಡು ಕೆರಳಿರುವ ರಾಜ್ಯದ ಕೆಸರಿ ಪಡೆ ರಾಹುಲ್ ಗಾಂಧಿ ಹೆಸರು ಉಲ್ಲೇಖಿಸಿ ಕೌಂಟರ್ ಕೊಟ್ಟಿದೆ. ಸಿಎಂ ಪದವಿ ವಿಚಾರವಾಗಿ ಕಿತ್ತಾಡುತ್ತಿರುವ ನೀವು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಮೊದಲು ರಾಹುಲ್ ಗಾಂಧಿಯವರು ಎಲ್ಲಿದ್ದಾರೋ ಹುಡುಕಿಕೊಳ್ಳಿ ಎಂದು ತಿವಿದಿದೆ.
ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಿ @narendramodi ಅವರು ಉತ್ತರ ನೀಡದೆ ತಪ್ಪಿಸಿಕೊಂಡಿರುವುದು ಸಂಸತ್ಗೆ ತೋರಿಸಿರುವ ಅಗೌರವ ಮಾತ್ರವಲ್ಲ, ಸತ್ಯವನ್ನು ಎದುರಿಸಲಾಗದ ಹೇಡಿತನವೂ ಆಗಿದೆ
ಭಾರತದ ಸಂಸತ್ತಿನ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರಧಾನ ಮಂತ್ರಿಯವರ ಉತ್ತರ ಇಲ್ಲದೆ ವಂದನಾ ನಿರ್ಣಯವನ್ನು… pic.twitter.com/IGHR4eRHnb
— Siddaramaiah (@siddaramaiah) February 9, 2026
ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡದೆ ತಪ್ಪಿಸಿಕೊಂಡಿರುವುದು ಸಂಸತ್ಗೆ ತೋರಿಸಿರುವ ಅಗೌರವ ಮಾತ್ರವಲ್ಲ, ಸತ್ಯವನ್ನು ಎದುರಿಸಲಾಗದ ಹೇಡಿತನವೂ ಆಗಿದೆ. ಭಾರತದ ಸಂಸತ್ತಿನ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರಧಾನ ಮಂತ್ರಿಯವರ ಉತ್ತರ ಇಲ್ಲದೆ ವಂದನಾ ನಿರ್ಣಯವನ್ನು ಅಂಗೀಕರಿಸಲಾಗಿದೆ. ಓರ್ವ ಪ್ರಧಾನಿ ಸಂಸತ್ತನ್ನು ನಿರ್ಲಕ್ಷಿಸುವುದೆಂದರೆ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ನಡೆ ಎಂದರ್ಥ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಇದನ್ನೂ ಓದಿ: ಸಿಎಂ ಕುರ್ಚಿ ಕಿತ್ತಾಟ; ಡಿಕೆ ಶಿವಕುಮಾರ್ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ
ಪ್ರಧಾನಿ ಮೋದಿ ಕುರಿತು ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯನವರೇ ಪ್ರಧಾನಿ ಎಲ್ಲೂ ತಪ್ಪಿಸಿಕೊಂಡು ಹೋಗಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ ಭವನದಲ್ಲೇ ಇದ್ದರು. ರಾಜ್ಯಸಭೆಯಲ್ಲಿ ನಿಮ್ಮ ಪಕ್ಷ ಹಾಗೂ ವಿರೋಧ ಪಕ್ಷಗಳ ನಡವಳಿಕೆ, ಧೋರಣೆಗಳನ್ನು ಬಯಲಿಗೆಳೆದು ದಿಟ್ಟತನದಿಂದ ಮಾತನಾಡಿದರು. ವಾಸ್ತವವಾಗಿ ತಪ್ಪಿಸಿಕೊಳ್ಳುವ ಸಂಸ್ಕೃತಿ ಇದ್ದರೆ ಅದು ನಿಮ್ಮ ಕಾಂಗ್ರೆಸ್ನ ನೆಲೆಯಿಂದ ಉದ್ಭವಿಸಿದ್ದು.ಇದಕ್ಕೆ ಸಾಕ್ಷಿಯಾಗಿ ರಾಹುಲ್ ಗಾಂಧಿಯೇ ನಮ್ಮ ಕಣ್ಣಮುಂದೆ ಇದ್ದಾರೆ ಎಂದು ಕೌಂಟರ್ ಕೊಟ್ಟಿದ್ದಾರೆ.
ಕರ್ನಾಟಕದಲ್ಲಿ ನಿಮ್ಮ ಆಡಳಿತದ ಪ್ರತಿಫಲವೆಂಬಂತೆ ಅರಾಜಕತೆ ಸೃಷ್ಟಿಯಾಗಿದ್ದು, ಸಿಎಂ ಪದವಿಯ ಸುತ್ತ ಕಳೆದ 1 ವರ್ಷದಿಂದಲೂ ಕಿತ್ತಾಟ ನಡೆಯುತ್ತಿದೆ. ಸಮಸ್ಯೆ ಬಗೆಹರಿಸಬೇಕಾದ ನಿಮ್ಮ ಹೈಕಮಾಂಡ್ ರೂವಾರಿ ರಾಹುಲ್ ಗಾಂಧಿಯವರು ಕೈಗೆ ಸಿಗದೇ ತಪ್ಪಿಸಿಕೊಂಡಿದ್ದಾರೆ. ಅವರನ್ನು ಹುಡುಕಿಕೊಂಡು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದಿನ ಬಿಟ್ಟು ದಿನ ದೆಹಲಿಗೆ ಅಲೆಯುತ್ತಿದ್ದಾರೆ. ಮೊದಲು ನೀವು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ರಾಹುಲ್ ಗಾಂಧಿಯವರು ಎಲ್ಲಿದ್ದಾರೋ ಹುಡುಕಿ ಮುಖ್ಯಮಂತ್ರಿ ಸ್ಥಾನದ ಕಗ್ಗಂಟನ್ನು ಬಿಡಿಸಿಕೊಳ್ಳಿ. ಕರ್ನಾಟಕ ಜನತೆಯ ಶಾಪದಿಂದ ಮುಕ್ತರಾಗಿ ಎಂದು ತಿವಿದಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.