
ಬೆಂಗಳೂರು, ಮೇ 25: ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ನಿನ್ನೆ (ಮೇ 24) ನಡೆದ ಎಸ್ಐಆರ್ ಸಭೆಯಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚಿಸಲಾಗಿದ್ದು, ಫಲಾನುಭವಿಗಳ ಅರ್ಹತೆಯನ್ನು ಸಮಗ್ರವಾಗಿ ಪರಿಶೀಲಿಸಲು ಸರಕಾರ ಮುಂದಾಗಿದೆ. ಈ ನಿರ್ಧಾರಕ್ಕೆ ಪ್ರಮುಖ ಕಾರಣಗಳೆಂದರೆ, ಯೋಜನೆಯಲ್ಲಿ ಪಾರದರ್ಶಕತೆ ಮತ್ತು ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ದೊರೆಯುವಂತೆ ಮಾಡುವುದಾಗಿದೆ.
ಗೃಹಲಕ್ಷ್ಮಿ ಯೋಜನೆಯಡಿ ಹಣವು ಮೃತಪಟ್ಟವರ ಹೆಸರಿನಲ್ಲಿಯೂ ಸಂದಾಯವಾಗುತ್ತಿರುವ ಹಲವಾರು ಪ್ರಕರಣಗಳು ವರದಿಯಾಗಿವೆ. ಇದು ಸರಕಾರಿ ಹಣದ ದುರುಪಯೋಗಕ್ಕೆ ಕಾರಣವಾಗುತ್ತಿದೆ. ಅಲ್ಲದೆ, ತೆರಿಗೆ ಪಾವತಿಸುವವರು ಕೂಡ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಲಾಭ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಈ ಯೋಜನೆಗಳ ಮುಖ್ಯ ಉದ್ದೇಶ ಆರ್ಥಿಕವಾಗಿ ಹಿಂದುಳಿದವರಿಗೆ ನೆರವು ನೀಡುವುದಾಗಿದ್ದು, ಹೀಗಾಗಿ ತೆರಿಗೆ ಪಾವತಿಸುವವರನ್ನು ಈ ವ್ಯಾಪ್ತಿಯಿಂದ ಹೊರಗಿಡಲು ಚಿಂತನೆ ನಡೆಸಲಾಗಿದೆ. ಇದಲ್ಲದೆ, ಒಂದೇ ಮನೆಯಲ್ಲಿ ಇಬ್ಬಿಬ್ಬರಿಗೆ ಗೃಹಲಕ್ಷ್ಮಿ ಹಣ ಜಮೆಯಾಗುತ್ತಿರುವ ಅಕ್ರಮಗಳು ಸಹ ಬೆಳಕಿಗೆ ಬಂದಿದ್ದು, ಈ ಬಗ್ಗೆಯೂ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ
ಇದನ್ನೂ ಓದಿ: ಅನ್ನಭಾಗ್ಯ ಅಕ್ಕಿ ವಿತರಣೆಯಲ್ಲಿ ಗೊಂದಲ, ಸಂಕಷ್ಟದಲ್ಲಿ ಸಿಲುಕಿದ್ಯಾ ಗ್ಯಾರಂಟಿ ಯೋಜನೆ?
ಈ ಎಲ್ಲಾ ಅಕ್ರಮಗಳನ್ನು ಮತ್ತು ಅನರ್ಹ ಫಲಾನುಭವಿಗಳನ್ನು ಗುರುತಿಸಿ ಪಟ್ಟಿಯಿಂದ ಕೈಬಿಡುವ ಸಲುವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಮಗ್ರ ಪರಿಶೀಲನೆಗೆ ಚಿಂತನೆ ನಡೆಸಲಾಗಿದೆ. ಪ್ರಸ್ತುತ, ರಾಜ್ಯದಲ್ಲಿ 1.24 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಬೃಹತ್ ಪಟ್ಟಿಯನ್ನು ಹೊಸದಾಗಿ ರೂಪಿಸಲಾಗುವ ಕಂಡೀಷನ್ಗಳು ಮತ್ತು ಗೈಡ್ಲೈನ್ಸ್ಗಳ ಆಧಾರದ ಮೇಲೆ ಸಂಪೂರ್ಣವಾಗಿ ಪರಿಷ್ಕರಿಸಲಾಗುತ್ತದೆ. ಈ ಸಂಬಂಧ ಶೀಘ್ರದಲ್ಲೇ ಹೊಸ ನಿಯಮಾವಳಿಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.