
ಬೆಂಗಳೂರು, ಆಗಸ್ಟ್ 13: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಾಳೆ (ಆಗಸ್ಟ್ 14) ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ನಿಂದ ಸಲೀಂ ಅಹ್ಮದ್ ಉಮೇದುವಾರಿಕೆ ಸಲ್ಲಿಸಿದ್ದು, ವಿಧಾನಪರಿಷತ್ ಕಾರ್ಯದರ್ಶಿ ಜ್ಯೋತಿಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರಿಗೆ ಕೆಪಿಸಿಸಿ ಅಧ್ಯಕ್ಷ ಮತ್ತು ಪರಿಷತ್ ಸದಸ್ಯರಾಗಿರುವ ಬಿ.ಕೆ.ಹರಿಪ್ರಸಾದ್ ಮತ್ತು ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಸಾಥ್ ನೀಡಿದ್ದಾರೆ.
ಸಭಾಪತಿ ಸ್ಥಾನಕ್ಕೆ ನಡೆಯಲಿರುವ ಚುನಾವಣೆ ಗೆಲ್ಲಲು ಅಗತ್ಯ ಸಂಖ್ಯಾಬಲ ಇಲ್ಲದಿದ್ದರೂ ವಿಪಕ್ಷ ಬಿಜೆಪಿ ಕೂಡ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಪಿ.ಹೆಚ್. ಪೂಜಾರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇನ್ನು ನಾಮಪತ್ರ ಸಲ್ಲಿಕೆ ಬಳಿಕ ಟಿವಿ9 ಜೊತೆ ಮಾತನಾಡಿರುವ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್, ಬಿಜೆಪಿಯವರು ನಾಮಪತ್ರವಸಲ್ಲಿಸುವುದು ಅವರಿಗೆ ಬಿಟ್ಟಿದ್ದು. ಆದರೆ ಸರ್ವಾನುಮತದಿಂದ ಆಯ್ಕೆಯಾದರೆ ಒಳ್ಳೆಯದಿತ್ತು ಎಂದಿದ್ದಾರೆ, ಜೊತೆಗೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಹೆಸರು ಅಧಿಕೃತ ಘೋಷಣೆ
ಸಭಾಪತಿ ಸ್ಥಾನದ ಚುನಾವಣೆಗೆ ಮಾತ್ರವಲ್ಲದೆ ಉಪ ಸಭಾಪತಿ ಸ್ಥಾನಕ್ಕೂ ಅಭ್ಯರ್ಥಿ ಕಣಕ್ಕಿಳಿಸಲು ವಿಪಕ್ಷ ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದೆ. ಗೆಲ್ಲಲು ಅಗತ್ಯವಿರುವ ಸಂಖ್ಯಾಬಲದ ಕೊರತೆ ಇದ್ದರೂ ಚುನಾವಣೆಯ ಗಂಭೀರತೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅಭ್ಯರ್ಥಿಗಳನ್ನು ಅಖಾಡಕ್ಕಿಳಿಸಲು ವಿಪಕ್ಷ ಮುಂದಾಗಿರುವ ಮಾಹಿತಿ ಇದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 1:30 pm, Thu, 13 August 26