AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ಬೆಂಗಳೂರಿನಲ್ಲಿ ಪ್ರತ್ಯೇಕ AI ಯೂನಿವರ್ಸಿಟಿ ಸ್ಥಾಪನೆ ಆಲೋಚನೆ”: ಸಚಿವ ಬಸವರಾಜ ರಾಯರೆಡ್ಡಿ

ಕರ್ನಾಟಕ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಅತ್ಯಂತ ಮಹತ್ವ ನೀಡಿದೆ. ₹55,000 ಕೋಟಿ ಬಜೆಟ್, 2,500 ಕೋಟಿ ರೂ. ಬ್ಯಾಂಕ್ ನೆರವಿನೊಂದಿಗೆ 807 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಿದೆ. ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದು, ಬೆಂಗಳೂರಿನಲ್ಲಿ ಪ್ರತ್ಯೇಕ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಸ್ಥಾಪಿಸುವ ಚಿಂತನೆ ನಡೆಸಿದೆ.

ಬೆಂಗಳೂರಿನಲ್ಲಿ ಪ್ರತ್ಯೇಕ AI ಯೂನಿವರ್ಸಿಟಿ ಸ್ಥಾಪನೆ ಆಲೋಚನೆ: ಸಚಿವ ಬಸವರಾಜ ರಾಯರೆಡ್ಡಿ
ಸಾಂದರ್ಭಿಕ ಚಿತ್ರ
ಹರೀಶ್ ಜಿ.ಆರ್​.
| Edited By: |

Updated on: Sep 05, 2026 | 9:11 PM

Share

ಬೆಂಗಳೂರು, ಸೆ.5: ದೇಶದಲ್ಲಿ ಸಾಕ್ಷರತೆಯ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದ್ದು, ಕೇರಳ, ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳು ಆರ್ಥಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಗಮನಾರ್ಹ ಮುನ್ನಡೆ ಸಾಧಿಸಿವೆ. ಆದರೆ, ಸಾಕ್ಷರತೆಯನ್ನು ಇನ್ನೂ ಹೆಚ್ಚಿನ ಮಟ್ಟಕ್ಕೆ ಕೊಂಡೊಯ್ಯುವ ಅಗತ್ಯವಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಅತ್ಯಂತ ಹೆಚ್ಚಿನ ಆದ್ಯತೆ ನೀಡಿದ್ದು, ಆ ನಿಟ್ಟಿನಲ್ಲಿ ಹಲವು ಪ್ರಗತಿಪರ ಹಾಗೂ ಹೊಸ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ರಾಜ್ಯದ ಒಟ್ಟು ಜನಸಂಖ್ಯೆ ಸುಮಾರು 6 ಕೋಟಿ 90 ಲಕ್ಷದಷ್ಟಿದ್ದು, ಪ್ರಸ್ತುತ 1 ಕೋಟಿ 32 ಲಕ್ಷ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇದು ಅತ್ಯಂತ ದೊಡ್ಡ ಸಂಖ್ಯೆಯಾಗಿದೆ.

ಶಿಕ್ಷಣಕ್ಕೆ ಸರ್ಕಾರ ಗರಿಷ್ಠ ಮಹತ್ವ ನೀಡಿದ್ದು, ಈ ಬಾರಿಯ ಬಜೆಟ್‌ನಲ್ಲಿ ಶಿಕ್ಷಣ ಇಲಾಖೆಗೆ ಒಟ್ಟಾರೆಯಾಗಿ 55,000 ಕೋಟಿ ರೂಪಾಯಿ ಅನುದಾನವನ್ನು ಕಾಯ್ದಿರಿಸಲಾಗಿದೆ. ಹೊಸ ಯೋಜನೆಗಳಿಗಾಗಿ ಬ್ಯಾಂಕ್‌ಗಳಿಂದ 2,500 ಕೋಟಿ ರೂಪಾಯಿ ನೆರವು ಪಡೆದು, ರಾಜ್ಯಾದ್ಯಂತ 807 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗಿದೆ.

ಇದನ್ನೂ ಓದಿ: “ರಾಹುಲ್ ಗಾಂಧಿ ಹೇಳಿದ್ದಂತೆ ನಾನು ನಡೆದುಕೊಂಡಿದ್ದೇನೆ”: ಸಿಎಂ ಸ್ಥಾನದ ರಾಜೀನಾಮೆ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಕೃತಕ ಬುದ್ಧಿಮತ್ತೆ ಯೂನಿವರ್ಸಿಟಿ ಸ್ಥಾಪನೆ:

ಉನ್ನತ ಶಿಕ್ಷಣ ಇಲಾಖೆಯು ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಯುವಕ-ಯುವತಿಯರಿಗೆ ಉನ್ನತ ಶಿಕ್ಷಣ ನೀಡುವ ಸ್ಪಷ್ಟ ಗುರಿ ಇಟ್ಟುಕೊಂಡಿದೆ. ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಬೆಂಗಳೂರು ಇಡೀ ದೇಶದಲ್ಲೇ ಅತ್ಯಂತ ಪ್ರಮುಖ ಹಾಗೂ ಭವಿಷ್ಯವಿರುವ ನಗರವಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಪ್ರತ್ಯೇಕ ‘ಎಐ ಯೂನಿವರ್ಸಿಟಿ’ ತರುವ ಕುರಿತು ಮುಖ್ಯಮಂತ್ರಿಗಳು ಚಿಂತನೆ ನಡೆಸಿದ್ದಾರೆ. AI ಕ್ಷೇತ್ರದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ಪ್ರತ್ಯೇಕ ವಿಶ್ವವಿದ್ಯಾಲಯದ ಅಗತ್ಯವಿದೆ ಎಂದು ಸಚಿವರು ಪ್ರತಿಪಾದಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us