ಆಗಸ್ಟ್ 5ರಂದು ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿ 4 ನಿಗಮಗಳಿಂದ ಸಾರಿಗೆ ಮುಷ್ಕರಕ್ಕೆ ಕರೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳು (KSRTC, BMTC ಸೇರಿದಂತೆ) ಆಗಸ್ಟ್ 5 ರಂದು ಮುಷ್ಕರಕ್ಕೆ ನಿರ್ಧರಿಸಿವೆ. 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ ಮಾಡದ ಹಿನ್ನಲೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ.

ಬೆಂಗಳೂರು, ಜುಲೈ 16: ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5ರಂದು ಬೆಳಿಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ (strike) ಕರೆ ನೀಡಿದೆ. ಕೆಎಸ್ಆರ್ಟಿಸಿ (KSRTC), ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಜನವರಿಯಲ್ಲೇ 4 ನಿಗಮದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಹೆಚ್ಚಳ ಮಾಡಬೇಕಿತ್ತು ಆದರೆ ಈವರೆಗೆ ಮಾಡಿಲ್ಲ. ಹೀಗಾಗಿ ಸರ್ಕಾರದ ನಡೆ ಖಂಡಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ಕಳಿಸಿದ್ದೇವೆ: ಅನಂತ ಸುಬ್ಬರಾವ್
ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಮುಷ್ಕರ ನಡೆಯಲಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸಾರಿಗೆ ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಮಂಗಳವಾರ ಇ-ಮೇಲ್ ಮೂಲಕ ಮುಷ್ಕರದ ನೋಟಿಸ್ ಕಳಿಸಿದ್ದೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: KSRTC Bus Ticket Price: ಇಂದು ಮಧ್ಯರಾತ್ರಿಯಿಂದಲೇ ಬಸ್ ಪ್ರಯಾಣ ದರ ಹೆಚ್ಚಳ
4 ನಿಗಮದ 1 ಲಕ್ಷದ 15 ಸಾವಿರ ನೌಕರರಿಗೆ 38 ತಿಂಗಳ ಭತ್ಯೆ ನೀಡಬೇಕಿತ್ತು. ಆದರೆ 2025 ಜುಲೈ ಬಂದರೂ ಇನ್ನೂ ಸಂಬಳ ಹೆಚ್ಚಳ ಮಾಡಲು ಮುಂದಾಗಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣ: ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ
ಜುಲೈ 7ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದರು. ಈ ಸಭೆಯಲ್ಲಿ ನೌಕರರ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಮತ್ತು ವೇತನ ಹೆಚ್ಚಳ ಬಗ್ಗೆ ಒಂದು ವಾರದೊಳಗೆ ಸಭೆ ಮಾಡುವುದಾಗಿ ಹೇಳಿದ್ದರು. ಆದರೆ 11 ದಿನ ಕಳೆದರೂ ಯಾವುದೇ ಸಭೆ ಕರೆಯಲಾಗಿಲ್ಲ. ಹೀಗಾಗಿ 4 ನಿಗಮಗಳ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:37 am, Wed, 16 July 25







